ʼವರಾಹ ರೂಪಂʼ ಹಾಡಿನ ವಿವಾದ : ವಿಜಯ ಕಿರಗಂದೂರು, ರಿಷಬ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್

ತಿರುವನಂತಪುರಂ: ವರಾಹ ರೂಪಂʼ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ʼಕಾಂತಾರʼ ಚಿತ್ರದ ನಿರ್ದೇಶಕ ರಿಷಬ್‌ ಶೆಟ್ಟಿ ಮತ್ತು ನಿರ್ಮಾಪಕ ವಿಜಯ್‌ ಕಿರಗಂದೂರು ಅವರಿಗೆ ಕೇರಳ ಹೈಕೋರ್ಟ್‌ ಸೋಮವಾರ ನಿರೀಕ್ಷಣಾ ಜಾಮೀನು ನೀಡಿದೆ.
ವರಾಹರೂಪಂ ಹಾಡಿಗೆ ಸಂಬಂಧಿಸಿ ಎರಡು ಮಿಕದ್ದಮೆಗಳು ದಾಖಲಾಗಿದ್ದು, ನವರಸಂ ಹಾಡಿನ ಹಕ್ಕುಸ್ವಾಮ್ಯ ಹೊಂದಿದ್ದ ‘ಮಾತೃಭೂಮಿ ಮುದ್ರಣ ಮತ್ತು ಪ್ರಕಾಶನ ಸಂಸ್ಥೆ’ ಹಾಗೂ ಐದು ವರ್ಷಗಳ ಹಿಂದೆ ಹಾಡನ್ನು ಸಂಯೋಜಿಸಿದ್ದ ಕೇರಳದ ಜನಪ್ರಿಯ ಸಂಗೀತ ತಂಡ ‘ಥೈಕ್ಕುಡಂ ಬ್ರಿಜ್‌’ ಪ್ರತ್ಯೇಕ ಮೊಕದ್ದಮೆ ಹೂಡಿದ್ದವು.
ರಿಷಬ್‌ ಶೆಟ್ಟಿ ಮತ್ತು ವಿಜಯ ಕಿರಗಂದೂರು ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಾಗ, ನ್ಯಾಯಮೂರ್ತಿ ಎ ಬದ್ರುದ್ದೀನ್ ಅವರು “ಮಧ್ಯಂತರ ಆದೇಶ ಅಥವಾ ಅಂತಿಮ ಆದೇಶದವರೆಗೆ ರಿಷಬ್ ಶೆಟ್ಟಿ ಮತ್ತು ನಿರ್ಮಾಪಕರು ವರಾಹ ರೂಪಂ ಹಾಡನ್ನು ಒಳಗೊಂಡ ʼಕಾಂತಾರʼ ಚಲನಚಿತ್ರವನ್ನು ಪ್ರದರ್ಶಿಸುವಂತಿಲ್ಲ. ಹಕ್ಕುಸ್ವಾಮ್ಯ ಕುರಿತಂತೆ ಸಂಬಂಧಪಟ್ಟ ಸಿವಿಲ್‌ ನ್ಯಾಯಾಲಯ ತೀರ್ಮಾನಿಸಬೇಕು” ಎಂದು ನಿರ್ದಿಷ್ಟ ಷರತ್ತು ವಿಧಿಸಿದರು.
ನ್ಯಾಯವ್ಯಾಪ್ತಿಯ ಸಮಸ್ಯೆಯಿಂದಾಗಿ ಹಕ್ಕುಸ್ವಾಮ್ಯ ಉಲ್ಲಂಘನೆ ಮೊಕದ್ದಮೆಯ ವಿಚಾರಣೆ ಸ್ಥಗಿತಗೊಂಡಿದೆ ಎಂಬ ವಿಚಾರ ಗಮನಿಸಿದ ನ್ಯಾಯಮೂರ್ತಿಗಳು “ಇದನ್ನು ಹೈಕೋರ್ಟ್‌ ಇನ್ನೂ ನಿರ್ಧರಿಸಬೇಕಿರುವುದರಿಂದ ಮೊಕದ್ದಮೆಯ ಇತರ ಕಕ್ಷಿದಾರರ ಹಿತ ರಕ್ಷಿಸುವುದರ ಜೊತೆಗೆ ನಿರೀಕ್ಷಣಾ ಜಾಮೀನು ನೀಡುವುದು ಸೂಕ್ತ” ಎಂದು ಪರಿಗಣಿಸಿದರು.

ಪ್ರಮುಖ ಸುದ್ದಿ :-   ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ ನೇಮಕ

ಹಕ್ಕುಸ್ವಾಮ್ಯ ಉಲ್ಲಂಘನೆಯ ಆರೋಪಗಳ ಕುರಿತು ತ್ವರಿತ ತೀರ್ಪು ಪಡೆಯಲು ಆರೋಪಿಗಳು ಸಂಬಂಧಪಟ್ಟ ಸಿವಿಲ್‌ ನ್ಯಾಯಾಲಯದ ಮೊರೆ ಹೋಗಬಹುದು ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಜೊತೆಗೆ ತನಿಖೆಗೆ ಸಹಕರಿಸಬೇಕು, ವಿಚಾರಣೆಗೆ ಲಭ್ಯವಿರಬೇಕು. ಸಾಕ್ಷಿಗಳ ಮೇಲೆ ಪ್ರಭಾವ ಬೀರುವಂತಿಲ್ಲ, ಸಾಕ್ಷ್ಯ ತಿರುಚುವಂತಿಲ್ಲ ಎಂದು ರಿಷಬ್‌ ಶೆಟ್ಟಿ ಹಾಗೂ ವಿಜಯ ಕಿರಗಂದೂರು ಅವರಿಗೆ ಪೀಠ ಸೂಚಿಸಿತು.
ಈ ಇಬ್ಬರೂ ʼಕಾಂತಾರʼ ಚಿತ್ರದ ವರಾಹರೂಪಂ ಹಾಡಿನಲ್ಲಿ ನವರಸಂ ಗೀತೆಯ ಸಂಗೀತ ಬಳಸಿಕೊಂಡು ಹಕ್ಕುಸ್ವಾಮ್ಯ ಕಾಯಿದೆಯ ಸೆಕ್ಷನ್‌ 63ರ ಅಡಿ ಶಿಕ್ಷಾರ್ಹ ಅಪರಾಧ ಎಸಗಿದ್ದಾರೆ ಎಂದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ತಮ್ಮ ನಿರೀಕ್ಷಣಾ ಜಾಮೀನಿನಲ್ಲಿ ಈ ಇಬ್ಬರೂ ವರಾಹ ರೂಪಂ ಹಾಡು ಸ್ವತಂತ್ರ ಸೃಷ್ಟಿಯಾಗಿದ್ದು ನವರಸಂ ಹಾಡಿಗೂ ಇದಕ್ಕೂ ಸಂಬಂಧವಿಲ್ಲ ಎಂದು ವಾದಿಸಿದ್ದರು. ನಿರೀಕ್ಷಣಾ ಜಾಮೀನು ನೀಡುವುದಕ್ಕೆ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಕ್ಷೇಪ ವ್ಯಕ್ತಪಡಿಸಿದ್ದರು. ಎಫ್‌ಐಆರ್‌ನಲ್ಲಿ ಆರೋಪಗಳನ್ನು ಮೇಲ್ನೋಟಕ್ಕೆ ಸಾಬೀತುಪಡಿಸುವಂತಹ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಎಂದು ಹೇಳಿದ್ದರು.
ಕೋರಿಕ್ಕೋಡ್ ಮತ್ತು ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯಗಳಲ್ಲಿ ‘ಮಾತೃಭೂಮಿ’ ಸಂಸ್ಥೆ ಮತ್ತು ‘ಥೈಕ್ಕುಡಂ ಬ್ರಿಜ್‌’ ಎರಡು ಪ್ರತ್ಯೇಕ ಮೊಕದ್ದಮೆ ಹೂಡಿರುವುದನ್ನು ನ್ಯಾಯಾಲಯ ಬಳಿಕ ಗಮನಿಸಿತ್ತು. ಎರಡೂ ನ್ಯಾಯಾಲಯಗಳು ದಾವೆಯ ವಿಚಾರಣೆಗೆ ನಿರಾಕರಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲಾಗಿತ್ತು. ಈ ಪ್ರಕರಣಗಳ ವಿಚಾರಣೆ ಹೈಕೋರ್ಟ್‌ನಲ್ಲಿ ಇನ್ನಷ್ಟೇ ಇತ್ಯರ್ಥವಾಗಬೇಕಿದೆ.
ಸಿವಿಲ್ ಮೊಕದ್ದಮೆಗಳ ವಿಚಾರಣೆ ವಿಳಂಬವಾದ ಹಿನ್ನೆಲೆಯಲ್ಲಿ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿತು. ಅರ್ಜಿದಾರರ ಪರ ವಕೀಲರಾದ ಅನೂಪ್ ವಿ ನಾಯರ್, ಇ ಆದಿತ್ಯನ್ ಮತ್ತು ರೋಹನ್ ಮಾಮೆನ್ ರಾಯ್ ವಾದ ಮಂಡಿಸಿದ್ದರು.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ನಾಲ್ವರಿಗೆ ಟಿಕೆಟ್‌ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement