ಯಾದಗಿರಿ: ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದ ವರದಿಯಾಗಿದೆ.
ಕಲುಷಿತ ನೀರು ಸೇವಿಸಿದ ನಂತರ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದ ನಿವಾಸಿ 35 ವರ್ಷದ ಸಾವಿತ್ರಮ್ಮ ಎಂಬ ಮಹಿಳೆ ತೆಲಂಗಾಣದ ನಾಯಾಯಣಪೇಟೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ನಸುಕಿನ ಜಾವ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅಲ್ಲದೆ, ಕಲುಷಿತ ನೀರು ಸೇವನೆಯಿಂದ 30ಕ್ಕೂ ಹೆಚ್ಚು ಮಂದಿಗೆ ವಾಂತಿ, ಭೇದಿಯಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿ ನೀರು ಕಲುಷಿತಗೊಂಡಿತ್ತು ಎಂದು ಹೇಳಲಾಗಿದೆ. ವೈದ್ಯರ ತಂಡ ಗ್ರಾಮಕ್ಕೆ ಆಗಮಿಸಿದೆ.
ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ 13 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ ಮೈಬೂಬನಗರದ ಖಾಸಗಿ ಆಸ್ಪತ್ರೆಗೆ 4 ವರ್ಷದ ಬಾಲಕ ದಾಖಲಾಗಿದ್ದಾನೆ. ತೆಲಂಗಾಣದ ನಾರಾಯಣಪೇಟೆಯಲ್ಲಿ 8 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ