ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 2023ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರ ಸಂಘ ಮುಷ್ಕರವನ್ನು ಅಂತ್ಯಗೊಳಿಸಿದೆ.
ಸರ್ಕಾರದಿಂದ ಅಧಿಕೃತ ಆದೇಶದ ಬಳಿಕ ಸರ್ಕಾರದ ವಿವಿಧ ನೌಕರರ ಸಂಘಟನೆಗಳ ಜೊತೆ ಸಭೆ ನಡೆಸಿದ ಬಳಿಕ ಅವರು ಮುಷ್ಕರ ಅಂತ್ಯಗೊಳಿಸುವ ಘೋಷಣೆ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು, ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಕರೆದಿದ್ದರು. ಇದೀಗ ಶೇ.17 ರಷ್ಟು ವೇತನ ಭತ್ಯೆ ಮಧ್ಯಂತರ ಪರಿಹಾರಕ್ಕೆ ಸರ್ಕಾರ ಒಪ್ಪಿಗೆ, ಅಲ್ಲದೆ ಎನ್ಪಿಎಸ್ ಮರು ಜಾರಿ ಕುರಿತು ಅಧ್ಯಯನ ಸಮಿತಿ ರಚಿಸುವ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ಅಂತ್ಯಗೊಳಿಸುತ್ತಿದ್ದೇವೆ ಎಂದು ಪ್ರಕಟಿಸಿದರು.
ಅಲ್ಲದೆ ಸರ್ಕಾರಿ ನೌಕರರಿಗೆ ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದರು. ಕರ್ತವ್ಯ ಬಹಿಷ್ಕರಿಸಿದ್ದರಿಂದ ಜನರಿಗೆ ಆದ ತೊಂದರೆ ಬಗ್ಗೆ ಸಾರ್ವಜನಿಕರಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಸಿ.ಎಸ್. ಷಡಾಕ್ಷರಿ ತಿಳಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ