5, 8ನೇ ತರಗತಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿಗಳ ವಿದ್ಯಾರ್ಥಿಗಳಿಗೆ ಮಾರ್ಚ್‌ 13ರಿಂದ 18ರವರೆಗೆ ನಡೆಸಲು ಉದ್ದೇಶಿಸಿದ್ದ ಏಕರೂಪದ ಪರೀಕ್ಷೆಯನ್ನು (ಮೌಲ್ಯಾಂಕನ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದೂಡಿದೆ.
ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದ್ದು, ಹೈಕೋರ್ಟ್ ಆದೇಶದಂತೆ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್‌ 13ರಿಂದ ನಿಗದಿ ಪಡಿಸಲಾಗಿದ್ದ ಮೌಲ್ಯಾಂಕನವನ್ನು ಮುಂದೂಡಲಾಗಿದೆ. ನ್ಯಾಯಾಲಯವು ಅನುಮತಿಸಿದಲ್ಲಿ ಈ ಮೌಲ್ಯಾಂಕನವನ್ನು ನಡೆಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ೆಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಮೌಲ್ಯಾಂಕನವು ವಿದ್ಯಾರ್ಥಿಗಳ ಕಲಿಕಾ ಮಟ್ಟ, ಕಲಿಕಾ ನ್ಯೂನ್ಯತೆಗಳು ಹಾಗೂ ಯಾವ ವಿಷಯದಲ್ಲಿ ಹಿನ್ನಡೆಯುಂಟಾಗಿದೆ ಎಂಬುದನ್ನು ತಿಳಿಯುವುದಾಗಿದೆ. ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದು ಈ ಮೌಲ್ಯಾಂಕನದ ಉದ್ದೇಶವಾಗಿಲ್ಲ ಎಂದು ಸ್ಪಷ್ಟ ಪಡಿಸಿದೆ.
ಶುಕ್ರವಾರ 5 ಮತ್ತು 8ನೇ ತರಗತಿ ಮೌಲ್ಯಾಂಕನದ ಬಗ್ಗೆ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠವು 5 ಮತ್ತು 8ನೇ ತರಗತಿಯ ಮೌಲ್ಯಾಂಕನ ರದ್ದುಗೊಳಿಸಿತ್ತು. ಈ ಬೆನ್ನಲ್ಲೇ ಶಿಕ್ಷಣ ಇಲಾಖೆಯಿಂದ ಮೌಲ್ಯಾಂಕನ ಕಾರ್ಯವನ್ನು ಮುಂದೂಡಿಕೆ ಮಾಡಿ ಆದೇಶಿಸಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ಸರ್ಕಾರದಿಂದ ಮೇಲ್ಮನವಿ ಸಲ್ಲಿಕೆ….
ರಾಜ್ಯ ಪಠ್ಯಕ್ರಮದ ಐದು ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಮಂಡಳಿ ಪರೀಕ್ಷೆ (ಪಬ್ಲಿಕ್‌) ನಡೆಸಲು ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಸಕ್ತ ಸಾಲಿಗೆ ಅನ್ವಯಿಸುವಂತೆ ರದ್ದುಪಡಿಸಿ ಹೈಕೋರ್ಟ್‌ನ ಏಕಸದಸ್ಯ ಪೀಠವು ಶುಕ್ರವಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಶೇಷ ವಿಚಾರಣೆಯನ್ನು ವಿಭಾಗೀಯ ಪೀಠವು ಶನಿವಾರ ನಡೆಸಿತು. ನ್ಯಾಯಮೂರ್ತಿಗಳಾದ ಜಿ ನರೇಂದರ ಮತ್ತು ಅಶೋಕ್‌ ಎಸ್‌.ಕಿಣಗಿ ಅವರಿದ್ದ ಪೀಠದಲ್ಲಿ ನಡೆದ ವಿಚಾರಣೆ ವೇಳೆ ರಾಜ್ಯ ಪಠ್ಯಕ್ರಮದ ಐದು ಮತ್ತು ಎಂಟನೇ ತರಗತಿಯ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ರಾಜ್ಯ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ ಅವರು “ಪಬ್ಲಿಕ್‌ ಪರೀಕ್ಷೆ ಬರೆಯುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಪರೀಕ್ಷೆಯಲ್ಲಿ ಯಾರನ್ನೂ ಅನುತ್ತೀರ್ಣಗೊಳಿಸಲಾಗುವುದಿಲ್ಲ. ಅದಾಗ್ಯೂ, ಐದು ಮತ್ತು ಎಂಟನೇ ತರಗತಿಗಳಿಗೆ ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ” ಎಂದು ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಪೀಠಕ್ಕೆ ಸಲ್ಲಿಸಿದರು.
ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘವನ್ನು ಪ್ರತಿನಿಧಿಸಿದ್ದ ವಕೀಲ ಕೆ ವಿ ಧನಂಜಯ ಅವರು, ಈ ವಿಚಾರದಲ್ಲಿ ಸಂಬಂಧಿತರನ್ನು ಸಂಪರ್ಕಿಸುವ ಯತ್ನವನ್ನು ಸರ್ಕಾರ ಮಾಡಿಲ್ಲ ಎಂದು ಆಕ್ಷೇಪಿಸಿದರು. ಸುಮಾರು ನಾಲ್ಕು ತಾಸು ವಾದ-ಪ್ರತಿವಾದ ಆಲಿಸಿದ ಪೀಠವು ರಾಜ್ಯ ಸರ್ಕಾರದ ಮಧ್ಯಂತರ ತಡೆ ಕೋರಿಕೆಯನ್ನು ಪುರಸ್ಕರಿಸಲಿಲ್ಲ. ಬದಲಿಗೆ ವಿಚಾರಣೆಯನ್ನು ಮಂಗಳವಾರಕ್ಕೆ (ಮಾರ್ಚ್‌ 14) ಮುಂದೂಡಿತು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

4 / 5. 16

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement