ಇತಿಹಾಸ ತಿರುಚುವುದಲ್ಲಿ ಬಿಜೆಪಿ ಎತ್ತಿದ ಕೈ: ಈಗ ಒಕ್ಕಲಿಗರ ಇತಿಹಾಸ ತಿರುಚಲು ಹೊರಟಿದೆ-ಡಿಕೆ ಶಿವಕುಮಾರ ಕಿಡಿ

ಬೆಳಗಾವಿ : ಯುವ ಕ್ರಾಂತಿ ಸಮಾವೇಶದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಬೆಳಗಾವಿ ಕಾರ್ಯಕ್ರಮ ಆಯೋಜಿತಗೊಂಡಿದೆ. ಈ ಹಿನ್ನಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಂದಿನಂತೆ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ.
ಇತಿಹಾಸ ತಿರುಚುವಲ್ಲಿ ಬಿಜೆಪಿಯವರದು ಎತ್ತಿದ ಕೈ. ಬಸವಣ್ಣ, ಕುವೆಂಪು, ನಾರಾಯಣ ಗುರು, ಡಾ. ಅಂಬೇಡ್ಕರ ಸೇರಿದಂತೆ ಹಲವು ಮಹನೀಯರ ಇತಿಹಾಸ ತಿರುಚಿದ್ದ ಬಿಜೆಪಿ ಈಗ ಉರಿಗೌಡ ನಂಜೇಗೌಡ ಎಂಬ ಹೆಸರಲ್ಲಿ ಒಕ್ಕಲಿಗರ ಇತಿಹಾಸ ತಿರುಚಲು ಹೊರಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ, ಧರ್ಮಗಳ ನಡುವೆ ದ್ವೇಷ ತಂದಿಟ್ಟು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಟಿಪ್ಪು ಸುಲ್ತಾನ್ ಸತ್ತು ಎರಡು ಶತಮಾನಗಳೇ ಕಳೆದಿವೆ. ಈಗ ಊರಿಗೌಡ, ನಂಜೇಗೌಡರನ್ನು ಬಿಜೆಪಿ ಸೃಷ್ಟಿಸಿದೆ ಎಂದು ಆರೋಪಿಸಿದರು.
ಮಂಡ್ಯ ಜಿಲ್ಲೆಗೆ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಾ. ದೇ. ಜವರೇಗೌಡ ಅವರ ಸಂಪಾದಕತ್ವದಲ್ಲಿ ‘ಸುವರ್ಣ ಮಂಡ್ಯ ‘ ಎಂಬ ಸಂಚಿಕೆ ತರಲಾಗಿತ್ತು. ಅದರ ಪರಿಸ್ಕೃತ ಸಂಚಿಕೆಯಲ್ಲಿ ಸಂಶೋಧಕ ಹ.ಕ. ರಾಜೇಗೌಡರು ಮಂಡ್ಯ ಐವತ್ತು; ಒಂದು ಪಕ್ಷಿ ನೋಟ ಎಂಬ ಲೇಖನ ಬರೆದಿದ್ದರು. ಅದರಲ್ಲಿ ದೊಡ್ಡನಂಜೇಗೌಡ, ಉರಿಗೌಡ ಎಂಬವರು ಹೈದರಾಲಿ, ಟಿಪ್ಪು ವಿರುದ್ಧ ಸೆಟೆದು ನಿಂತಿದ್ದರು ಎಂದು ಉಲ್ಲೇಖಿಸಿದ್ದರು. ಈ ವಿಚಾರವಾಗಿ ಸ್ಪಷ್ಟನೆ ನೀಡಲು ಈಗ ಹ.ಕ. ರಾಜೇಗೌಡರು ಜೀವಂತವಾಗಿ ಇಲ್ಲ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡು ಬಿಜೆಪಿಯ ವಾಟ್ಸಾಪ್ ಯೂನಿವರ್ಸಿಟಿ ಹೊಸ ಇತಿಹಾಸ ಸೃಷ್ಟಿಸಲು ಹೊರಟಿದೆ ಎಂದು ಟೀಕಿಸಿದರು.
ಅನೇಕ ಇತಿಹಾಸ ತಜ್ಞರು, ಸಂಶೋಧಕರು ಉರಿಗೌಡ, ನಂಜೇಗೌಡ ಕೇವಲ ಕಾಲ್ಪನಿಕ ಪಾತ್ರ ಎಂದು ಹೇಳುತ್ತಿದ್ದರೂ ಬಿಜೆಪಿಯವರು ಮಾತ್ರ ಈ ವಿಷಯ ಬಿಡಲು ಸಿದ್ಧರಿಲ್ಲ. ಇತಿಹಾಸದ ಯಾವ ದಾಖಲೆಯಲ್ಲಿ ಉರಿಗೌಡ ನಂಜೇಗೌಡ ಟಿಪ್ಪು ಸುಲ್ತಾನರನ್ನು ಕೊಂದರು ಎಂಬುದು ಇದೆ ಹೇಳಲಿ ನೋಡೋಣ ಎಂದು ಹೇಳಿದರು.
ಬ್ರಿಟಿಷರ ವಿರುದ್ಧ ಹೋರಾಡಿದ ಟಿಪ್ಪು ಸುಲ್ತಾನನನ್ನು ಒಕ್ಕಲಿಗರು ಕೊಂದರು ಎಂದು ಹೇಳಿ ಆ ಮೂಲಕ ಒಕ್ಕಲಿಗರು ದೇಶವಿರೋಧಿಗಳು, ಕೊಲೆಗಡುಕರು ಎಂದು ಅವರ ಗೌರವ, ಸ್ವಾಭಿಮಾನಕ್ಕೆ ಮಸಿ ಬಳಿಯಲಾಗುತ್ತಿದೆ. ಬಿಜೆಪಿಯವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯಾರನ್ನು ಬೇಕಾದರೂ ಸೃಷ್ಟಿಸುತ್ತಾರೆ, ಯಾರ ಮನೆಯನ್ನು ಬೇಕಾದರೂ ಹಾಳು ಮಾಡುತ್ತಾರೆ.
ಸಿ.ಟಿ ರವಿ ಹಾಗೂ ಅಶ್ವತ್ಥ ನಾರಾಯಣ ಎಂಬ ಅವಿವೇಕಿಗಳು ಈ ಉರಿಗೌಡ, ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ಮೂಲಕ ಒಕ್ಕಲಿಗ ಸಮುದಾಯದ ವಿರುದ್ಧ ಬೇರೆಯವರನ್ನು ಎತ್ತಿ ಕಟ್ಟುತ್ತಿದ್ದಾರೆ.ಉರಿಗೌಡ, ನಂಜೇಗೌಡ ಹೆಸರಿನಲ್ಲಿ ಸಿನಿಮಾ ಮಾಡಲು ಹೊರಟಿದ್ದಾರೆ. ಸಚಿವ ಅಶ್ವತ್ಥ ನಾರಾಯಣ ಅವರು ಚಿತ್ರಕತೆ ಬರೆಯುತ್ತಾರಂತೆ. ಟಿಪ್ಪು ಇತಿಹಾಸದ ಬಗ್ಗೆ ರಾಷ್ಟ್ರಪತಿಗಳು ರಾಜ್ಯ ವಿಧಾನಮಂಡಲ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಟಿಪ್ಪು ಬದುಕು, ಸಾವು, ಸಾಧನೆ ಬಗ್ಗೆ ಹಲವು ಇತಿಹಾಸ ಪುಸ್ತಕಗಳಿವೆ. ಅವುಗಳಲ್ಲಿ ಇಲ್ಲದ ವಿಚಾರವನ್ನು ಬಿಜೆಪಿಯವರು ಈಗ ಸೃಷ್ಟಿಸಿದ್ದಾರೆ.
ಒಕ್ಕಲಿಗ ಸಮುದಾಯದ ಹೆಸರನ್ನು ಬಳಸಿಕೊಂಡು ರಾಜಕೀಯವಾಗಿ ಬೆಳೆಯುತ್ತಿರುವ ಇವರು ಈಗ ಅದೇ ಸಮಾಜದ ಸ್ವಾಭಿಮಾನ ಹಾಗೂ ಘನತೆಗೆ ಮಸಿ ಬಳಿಯುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಹಲವು ಸಂಘಟನೆಗಳು ನನಗೆ ಒತ್ತಡ ಹೇರುತ್ತಿದ್ದು, ಇತಿಹಾಸ ತಿರುಚುವ ಈ ಷಡ್ಯಂತ್ರ ಖಂಡಿಸಿ, ಅದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದರು.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement