ಮುಂಬೈ: ವೀರ್ ಸಾವರ್ಕರ್ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಅವರು ಸೋಮವಾರ ಸಾವರ್ಕರ್ ಅವರು ಬ್ರಿಟಿಷ್ ಅಧಿಕಾರಿಗಳ ಬಳಿ ಕ್ಷಮೆಯಾಚಿಸಿದ್ದಾರೆ ಎಂಬುದಕ್ಕೆ ಪುರಾವೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸವಾಲು ಹಾಕಿದ್ದಾರೆ.
ರಾಹುಲ್ ಗಾಂಧಿಯವರು ಸಾವರ್ಕರ್ ಬಗ್ಗೆ ಮಾಡಿದ ಟೀಕೆಗೆ ಪ್ರತಿಕ್ರಿಯಿಸಿದ ರಂಜಿತ್ ಸಾವರ್ಕರ್, ರಾಹುಲ್ ಗಾಂಧಿ ಏನು ಮಾಡುತ್ತಾರೋ ಅವೆಲ್ಲವೂ “ಬಾಲಿಶವಾದದ್ದು” ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ತಾನು ಸಾವರ್ಕರ್ ಅಲ್ಲದ ಕಾರಣ ಕ್ಷಮೆ ಕೇಳುವುದಿಲ್ಲ ಎಂದು ಹೇಳುತ್ತಿದ್ದಾರೆ. ಸಾವರ್ಕರ್ ಕ್ಷಮೆಯಾಚಿಸಿದ್ದಾರೆ ಎಂದು ತೋರಿಸುವ ದಾಖಲೆಗಳನ್ನು ತೋರಿಸಲು ನಾನು ಅವರಿಗೆ ಸವಾಲು ಹಾಕುತ್ತೇನೆ. ಇದಕ್ಕೆ ವಿರುದ್ಧವಾಗಿ, ಅವರು (ರಾಹುಲ್ ಗಾಂಧಿ) ಸುಪ್ರೀಂ ಕೋರ್ಟ್ ಬಳಿ ಎರಡು ಬಾರಿ ಕ್ಷಮೆಯಾಚಿಸಿದ್ದಾರೆ. ರಾಹುಲ್ ಗಾಂಧಿ ಏನು ಮಾಡುತ್ತಿದ್ದಾರೆ. ಅದೆಲ್ಲವೂ ಬಾಲಿಶವಾಗಿದೆ” ಎಂದು ರಂಜಿತ್ ಸಾವರ್ಕರ್ ಹೇಳಿದ್ದಾರೆ. ರಾಜಕೀಯ ಪ್ರಚಾರಕ್ಕಾಗಿ ದೇಶಭಕ್ತರ ಹೆಸರನ್ನು ಬಳಸುವುದು ಶೋಚನೀಯ ಎಂದು ಅವರು ಹೇಳಿದರು.
ಲೋಕಸಭೆಯಿಂದ ತನ್ನ ಉಚ್ಚಾಟನೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನನ್ನ ಹೆಸರು ಸಾವರ್ಕರ್ ಅಲ್ಲ, ನನ್ನ ಹೆಸರು ಗಾಂಧಿ. ಗಾಂಧಿ ಯಾರ ಬಳಿಯೂ ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದರು.ಲೋಕಸಭೆಯಿಂದ ಅನರ್ಹಗೊಂಡ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.
ರಾಹುಲ್ ಗಾಂಧಿಯವರು ಸಾವರ್ಕರ್ ಬ್ರಿಟಿಷರ ಕ್ಷಮೆ ಕೇಳಿದ್ದಾರೆ ಎಂದು ಹೇಳಿದ್ದು ಇದೇ ಮೊದಲಲ್ಲ. ಕಳೆದ ವರ್ಷ ನವೆಂಬರ್ನಲ್ಲಿ ನಡೆದ ಭಾರತ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ, ವಿಡಿ ಸಾವರ್ಕರ್ ಅವರು ಅಂಡಮಾನ್ ಸೆಲ್ಯುಲಾರ್ ಜೈಲಿನಿಂದ ಬಿಡುಗಡೆಗೊಳ್ಳಲು ಕ್ಷಮಾದಾನ ಅರ್ಜಿಗಳನ್ನು ಬರೆಯುತ್ತಿದ್ದರು ಮತ್ತು ಬ್ರಿಟಿಷ್ ಆಡಳಿತದಿಂದ ಪಿಂಚಣಿಯನ್ನು ಸ್ವೀಕರಿಸಿದ್ದರು ಎಂದು ಹೇಳಿದ್ದರು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದ್ದರು ಎಂದೂ ಅವರು ಹೇಳಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ