ಚುನಾವಣಾ ಅಕ್ರಮ: ಜೆಡಿಎಸ್‌ ಶಾಸಕ ಗೌರಿಶಂಕರ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಚುನಾವಣಾ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಜೆಡಿಎಸ್‌ ಶಾಸಕ ಗೌರಿಶಂಕರ ಆಯ್ಕೆಯನ್ನು ಹೈಕೋರ್ಟ್‌ ಅನೂರ್ಜಿತಗೊಳಿಸಿದೆ.
ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಅವಕಾಶ ನೀಡಬೇಕು ಎಂಬ ಗೌರಿಶಂಕರ ಅವರ ಮಧ್ಯಂತರ ಮನವಿಯನ್ನು ಇದೇ ವೇಳೆ ಪುರಸ್ಕರಿಸಿದ ಹೈಕೋರ್ಟ್‌ ಆದೇಶವನ್ನು ಒಂದು ತಿಂಗಳ ವರೆಗೆ ಅಮಾನತಿನಲ್ಲಿರಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ಬಿಜೆಪಿಯ ಪರಾಜಿತ ಅಭ್ಯರ್ಥಿ ಬಿ ಸುರೇಶ್‌ ಗೌಡ ಅವರು ಸಲ್ಲಿಸಿದ್ದ ಚುನಾವಣಾ ಅರ್ಜಿಯ ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿ ಫೆಬ್ರವರಿ 17ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಸ್‌ ಸುನಿಲ್‌ ದತ್‌ ಯಾದವ್‌ ಅವರಿದ್ದ ಕಲಬುರ್ಗಿ ಏಕಸದಸ್ಯ ಪೀಠವು ಇಂದುಮ ಗುರುವಾರ ಪ್ರಕಟಿಸಿದ್ದು, ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿದೆ. ಗೌರಿ ಶಂಕರ್‌ ಆಯ್ಕೆಯನ್ನು ಪ್ರಜಾಪ್ರತಿನಿಧಿ ಕಾಯಿದೆಯ ಸೆಕ್ಷನ್‌ 101 (ಡಿ) ಅಡಿ ಅನೂರ್ಜಿತಗೊಳಿಸಲಾಗಿದೆ” ಎಂದು ಪೀಠವು ಆದೇಶದಲ್ಲಿ ಹೇಳಿದೆ.
ಗೌರಿಶಂಕರ ಪರ ವಕೀಲ ಹೇಮಂತರಾಜ ಅವರು “ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿರುವುದರಿಂದ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯಿದೆಯ ಸೆಕ್ಷನ್ 116 (ಬಿ) ‌ಅಡಿ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ಗೆ ಅಧಿಕಾರವಿದೆ” ಎಂದು ಕೋರಿದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಇದಕ್ಕೆ ಆಕ್ಷೇಪಿಸಿದ ಸುರೇಶ್‌ ಗೌಡ ಪರ ವಕೀಲರು “ಅನರ್ಹತೆಯು ತಕ್ಷಣೆಗೆ ಜಾರಿಗೆ ಬರದಿರುವುದರಿಂದ ಗೌರಿ ಶಂಕರ್‌ ಚುನಾವಣೆಯಲ್ಲಿ ಸ್ಪರ್ಧಿಸಲು ಯಾವುದೇ ಸಮಸ್ಯೆಯಾಗುವುದಿಲ್ಲ. ಹೀಗಾಗಿ, ಅವರ ಕೋರಿಕೆಯನ್ನು ಪರಿಗಣಿಸಬಾರದು” ಎಂದು ಮನವಿ ಮಾಡಿದರು.
ವಾದ-ಪ್ರತಿವಾದ ಆಲಿಸಿ ನ್ಯಾಯಾಲಯವು ಗೌರಿ ಶಂಕರ ಪರ ವಕೀಲರು ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ಮಾನ್ಯ ಮಾಡಿ, ಆದೇಶವನ್ನು ಒಂದು ತಿಂಗಳು ಅಮಾನತಿನಲ್ಲಿರಿಸಲಾಗಿದೆ” ಎಂದು ಆದೇಶಿಸಿತು.
ಪ್ರಜಾ ಪ್ರತಿನಿಧಿ ಕಾಯಿದೆ ಸೆಕ್ಷನ್‌ 99 (1)(ಎ) ii ಅಡಿ ಪ್ರಕರಣದಲ್ಲಿ ಇತರೆ ಪ್ರತಿವಾದಿಗಳು ಸಹ ಭ್ರಷ್ಟಾಚಾರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ಪೀಠವು ಆದೇಶದಲ್ಲಿ ಹೇಳಿದೆ. ಹೈಕೋರ್ಟ್‌ ಆದೇಶ ಅಮಾನತಿನಲ್ಲಿರಿಸಿರುವುದು ಗೌರಿ ಶಂಕರ ಅವರಿಗೆ ಮಾತ್ರ ಅನ್ವಯಿಸಲಿದೆ ಎಂದು ತಿಳಿಸಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಗೌರಿಶಂಕರ ಅವರು 32 ಸಾವಿರ ವಯಸ್ಕರು ಮತ್ತು 16 ಸಾವಿರ ಮಕ್ಕಳಿಗೆ ನಕಲಿ ವಿಮಾ ಪಾಲಿಸಿಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿ ಜಯ ಸಾಧಿಸಿದ್ದಾರೆ. ಇದು ಪ್ರಜಾ ಪ್ರತಿನಿಧಿ ಕಾಯಿದೆ ಸೆಕ್ಷನ್‌ 123ರ ಅಡಿ ಅಪರಾಧವಾಗಿದೆ. ಹೀಗಾಗಿ, ಗೌರಿ ಶಂಕರ್‌ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸುರೇಶ್‌ಗೌಡ ಅವರು 2018ರ ಜುಲೈನಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement