
ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಗುರುವಾರ ಹಲವು ಭಾಗಗಳಲ್ಲಿ ಸಾಧಾರಣ ಮಳೆ ಸುರಿದಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಏಪ್ರಿಲ್ 7ರಿಂದ 11ರವರೆಗೆ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಚಿತ್ರದುರ್ಗ, ದಾವಣಗೆರೆ ಹಾಗೂ ಮೈಸೂರಿನಲ್ಲಿ ಮುಂದಿನ ಎರಡು ದಿನ ಮಳೆ ಸುರಿಯಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 24 ಗಂಟೆ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಏಪ್ರಿಲ್ 8ರವರೆಗೆ ಕರಾವಳಿ ಭಾಗದಲ್ಲಿ ಮಳೆ ತುಸು ಬಿರುಸುಕೊಳ್ಳಲಿದೆ. ದಕ್ಷಿಣ ಒಳನಾಡಿನ ಭಾಗದಲ್ಲಿ ಹಗುರ ಇಲ್ಲವೇ ಸಾಧಾರಣವಾಗಿ ಮಳೆ ಸಾಧ್ಯತೆಯಿದೆ. ಶುಕ್ರವಾರ ಮಳೆ ಸುರಿಸುವ ಮಾರುತಗಳು ಚುರುಕಾಗಿರಲಿವೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



ನಿಮ್ಮ ಕಾಮೆಂಟ್ ಬರೆಯಿರಿ