ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ಟಿಕೆಟ್ ಕೈ ತಪ್ಪಿದ ಕಾರಣ ಬಂಡಾಯದ ಅಲೆಯೂ ಎದ್ದಿದೆ. ಇದೀಗ ಕಾಂಗ್ರೆಸ್ಗೆ ಮತ್ತೊಂದು ಆಘಾತವಾಗಿದೆ. ಟಿಕೆಟ್ ಸಿಗದ ಕಾರಣ ಪಕ್ಷದ ಹಿರಿಯ ನಾಯಕ, ಮಾಜಿ ಸಭಾಪತಿ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜನಂದಿನಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಕಾಗೋಡು ತಿಮ್ಮಪ್ಪ ಅವರ ಪುತ್ರಿ ರಾಜನಂದಿನಿ ಅವರು ಸಾಗರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಟಿಕೆಟ್ ಬಯಸಿದ್ದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಕೂಡ ತಮ್ಮ ಮಗಳಿಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಪ್ರಯತ್ನ ಮಾಡಿದ್ದರು. ಕಾಗೋಡು ತಿಮ್ಮಪ್ಪ ಅವರು, ವಯಸ್ಸಿನ ಕಾರಣಕ್ಕೆ ತನಗೆ ಟಿಕೆಟ್ ಕೊಡಲು ಆಗದೇ ಇದ್ದರೆ ತನ್ನ ಮಗಳಿಗೆ ಟಿಕೆಟ್ ನೀಡಬೇಕು ಎಂದು ವರಿಷ್ಠರಿಗೆ ಒತ್ತಾಯ ಮಾಡಿದ್ದರು.
ಆದರೆ ಕಾಂಗ್ರೆಸ್ ಇಬ್ಬರಿಗೂ ಮಣೆ ಹಾಕದೆ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಅಸಮಾಧಾನಗೊಂಡಿರುವ ರಾಜನಂದಿನಿ ಅವರು ಬಿಜೆಪಿಗೆ ಸೇರ್ಪಡೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.
ಈಗಾಗಲೇ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಅವರು ಇಂದು, ಬುಧವಾರ ಮಧ್ಯಾಹ್ನದ ವೇಳೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಜೊತೆಗೆ ಹಲವು ಪ್ರಮುಖರು ಜೊತೆಗಿದ್ದರು. ರಾಜನಂದಿನಿ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿಗೆ ಬರಮಾಡಿಕೊಳ್ಳಲಾಯಿತು.
ಇದಕ್ಕೂ ಮುನ್ನ ರಾಜನಂದಿನಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಹಾಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ಕಾಗೋಡು ತಿಮ್ಮಪ್ಪ ಪ್ರತಿಕ್ರಿಯೆ
ಪುತ್ರಿ ರಾಜನಂದಿನಿ ಬಿಜೆಪಿ ಸೇರಲು ಹೊರಟಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು, ಈ ವಿಚಾರ ನನಗೆ ಗೊತ್ತಿರಲಿಲ್ಲ. ಈಗ ವಿಷಯ ಗೊತ್ತಾಯಿತು. ಅವಳು (ರಾಜ ನಂದಿನಿ) ಈ ರೀತಿ ಮಾಡಬಹುದು ಎಂಬುದನ್ನು ಕನಸಲ್ಲೂ ಯೋಚಿಸಿರಲಿಲ್ಲ. ಇದೆಲ್ಲ ಶಾಸಕ ಹರತಾಳು ಹಾಲಪ್ಪ ಅವರ ರಾಜಕೀಯ ತಂತ್ರ ಇರಬಹುದು ಎಂದು ಹೇಳಿದ್ದಾರೆ.
ರಾಜಕಾರಣದಲ್ಲಿ ಬದ್ಧತೆ, ಸ್ಥಿರತೆ ಇಟ್ಟುಕೊಂಡು ಬೆಳೆದು ಬಂದವರು ನಾವು. ಆ ಸಂತೋಷ, ನೆಮ್ಮದಿ ನನಗೆ ಇದೆ. ಏನೇ ಆಗಲಿ ನಾನು ಕಾಂಗ್ರೆಸ್ ಬಿಟ್ಡು ಹೋಗುವುದಿಲ್ಲ ಹಾಗೂ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ನಿಲ್ಲುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ