ವಿಜಯಪುರ ಜಿಲ್ಲೆಯಲ್ಲಿ ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಗ್ರಾಮಸ್ಥರು

ವಿಜಯಪುರ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯಾದ್ಯಂತ ಮತದಾನ ನಡೆಯುತ್ತಿದೆ. ಆದರೆ, ವಿಜಯಪುರ ಜಿಲ್ಲೆಯ ಗ್ರಾಮವೊಂದರಲ್ಲಿ ಗ್ರಾಮಸ್ಥರು ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಕಾಯ್ದಿರಿಸಲಾಗಿದ್ದ ಹೆಚ್ಚುವರಿ ಮತ ಯಂತ್ರಗಳನ್ನು ಬಿಸನಾಳ, ಡೋಣುರ ಗ್ರಾಮದಿಂದ ವಿಜಯಪುರಕ್ಕೆ ತೆಗೆದುಕೊಂಡು ವಾಪಸ್‌ ಬರುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಇವಿಎಂ ಯಂತ್ರ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಗ್ರಾಮಸ್ಥರು ಒಡೆದು ಹಾಕಿದ್ದಾರೆ.
ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಒಯ್ಯಲಾಗುತ್ತಿದೆ ಎಂದು ತಪ್ಪು ಭಾವಿಸಿದ್ದು ಈ ಘಟನೆಗೆ ಕಾರಣ ಎನ್ನಲಾಗಿದೆ. ಸದ್ಯ ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಆಗಿದ್ದು, ಮತಯಂತ್ರ ಕೆಟ್ಟಲ್ಲಿ ಬಳಕೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ವಾಪಸ್ ತೆಗೆದುಕೊಂಡು ಹೋಗುವುದನ್ನು ಗಮನಿಸಿದ ಜನರು ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ. ಸಿಬ್ಬಂದಿಯಿಂದ ಸರಿಯಾಗಿ ಉತ್ತರ ಸಿಗದಿದ್ದಾಗ ಆಕ್ರೋಶಗೊಂಡ ಜನರು ತಪ್ಪು ಕಲ್ಪನೆಯಿಂದ ಮತಯಂತ್ರ ಒಡೆದು ಹಾಕಿದ್ದಾರೆ.ಗ್ರಾಮಸ್ಥರು ಮತ ಯಂತ್ರ ಒಡೆದು ಹಾಕಿದ್ದಲ್ಲದೆ, ಅಧಿಕಾರಿಗಳ ಕಾರನ್ನು ಕೂಡ ಜಖಂಗೊಳಿಸಿದ್ದಾರೆ. ಜೊತೆಗೆ ಚುನಾವಣಾ ಸಿಬ್ಬಂದಿಗೂ ಥಳಿಸಿದ್ದಾರೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement