ನವದೆಹಲಿ : ಅಧಿಕಾರಶಾಹಿಗಳ ನಿಯಂತ್ರಣ ಮತ್ತು ನಿಯೋಜನೆ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ ನಂತರ ದೆಹಲಿಯ ಅರವಿಂದ ಕೇಜ್ರಿವಾಲ್ ಸರ್ಕಾರ, ದೆಹಲಿ ಸರ್ಕಾರದ ಸೇವಾ ಇಲಾಖೆಯ ಕಾರ್ಯದರ್ಶಿ ಆಶಿಶ್ ಮೋರೆ ಅವರನ್ನು ಎತ್ತಂಗಡಿ ಮಾಡಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಮುಖ ಆಡಳಿತಾತ್ಮಕ ಪುನರ್ರಚನೆಯ ಎಚ್ಚರಿಕೆಯೊಂದಿಗೆ ಹಲವು ವರ್ಗಾವಣೆಗಳಲ್ಲಿ ಮೊದಲನೆಯ ಕ್ರಮ ಕೈಗೊಂಡಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಕೆಲಸಗಳಿಗೆ ಅಡ್ಡಿಪಡಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇಂದು, ಗುರುವಾರ ಬೆಳಿಗ್ಗೆ, ಎಲ್ಲ ಸೇವೆಗಳ ಆಡಳಿತದ ಮೇಲೆ ದೆಹಲಿ ಸರ್ಕಾರವು ಶಾಸಕಾಂಗ ಮತ್ತು ಕಾರ್ಯಕಾರಿ ಅಧಿಕಾರವನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪ್ರಜಾಪ್ರಭುತ್ವದ ಆಡಳಿತದಲ್ಲಿ ಆಡಳಿತದ ಅಧಿಕಾರವು ಚುನಾಯಿತ ಸರ್ಕಾರದ ಮೇಲೆ ನಿಂತಿರಬೇಕು ಎಂದು ನ್ಯಾಯಾಲಯ ಹೇಳಿದೆ. “ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂಮಿ” ಮಾತ್ರ ದೆಹಲಿ ಸರ್ಕಾರದ ಅಧಿಕಾರ ವ್ಯಾಪ್ತಿಯಿಂದ ಹೊರಗಿಡಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವು ಪ್ರಚಂಡ ಬಹುಮತದಿಂದ ಅಧಿಕಾರಕ್ಕೆ ಬಂದ ಒಂದು ವರ್ಷದ ನಂತರ 2015 ರಲ್ಲಿ ಕೇಂದ್ರದ ಆದೇಶದ ಮೂಲಕ ದೆಹಲಿಯಲ್ಲಿ ಕೇಂದ್ರದ ಪ್ರತಿನಿಧಿಯಾದ ಲೆಫ್ಟಿನೆಂಟ್ ಗವರ್ನರ್ ಅವರ ನಿಯಂತ್ರಣದಲ್ಲಿ ಸೇವಾ ಇಲಾಖೆಯನ್ನು ಇರಿಸಲಾಯಿತು.
ಲೆಫ್ಟಿನೆಂಟ್ ಗವರ್ನರ್ ಅವರು ಆಡಳಿತ ಸೇವೆಗಳ ಕುರಿತು ಚುನಾಯಿತ ಸರ್ಕಾರದ ನಿರ್ಧಾರಕ್ಕೆ ಬದ್ಧರಾಗಿದ್ದಾರೆ ಮತ್ತು ಮಂತ್ರಿ ಮಂಡಳಿಯ ನೆರವು ಮತ್ತು ಸಲಹೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಪೀಠ ಹೇಳಿದೆ.
ನಿಮ್ಮ ಕಾಮೆಂಟ್ ಬರೆಯಿರಿ