ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಕಲಬುರಗಿ, ಕೊಪ್ಪಳ, ತುಮಕೂರು, ಶಿವಮೊಗ್ಗ, ಹಾವೇರಿ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದ್ದು, ಆದಾಯಕ್ಕೂ ಮೀರಿ ಆಸ್ತಿ ಗಳಿಕೆಯ ಆರೋಪದ ಹಿನ್ನೆಲೆಯಲ್ಲಿ ವಿವಿಧ ಅಧಿಕಾರಿಗಳ ನಿವಾಸ, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.
ಹಾವೇರಿ ಜಿಲ್ಲೆಯ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ ಶೆಟ್ಟರ್, ಕೊಪ್ಪಳದ ಭೂಸೇನಾ ಇಇ ಶರಣಪ್ಪ ಚಿಂಚೋಳಿಕರ, ಶಿವಮೊಗ್ಗದ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಪ್ರಶಾಂತ, ಶಿಕಾರಿಪುರದಲ್ಲಿ ಜಿಪಂಇಂಜಿನಿಯರ್ ಶಂಕರ್ ನಾಯ್ಕ, ತುಮಕೂರಿನಲ್ಲಿ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಸೇರಿದಂತೆ ಹಲವು ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೊಪ್ಪಳದ ಭೂ ಸೇನಾ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಶರಣಪ್ಪ ಚಿಂಚೋಳಿಕರ ಮನೆ ಮೇಲೆ ರಾಯಚೂರು ಲೋಕಾಯುಕ್ತ ಜಿಲ್ಲಾ ವರಿಷ್ಠಾಧಿಕಾರಿ ನೇತೃತ್ವದಲ್ಲಿ ದಾಳಿ ನಡೆದಿದೆ. ಕೊಪ್ಪಳ, ಕಲಬುರಗಿ ಹಾಗು ಬೀದರಿನಲ್ಲಿಯೂ ಶರಣಪ್ಪಗೆ ಸಂಬಂಧಿಸಿದ ಮನೆಗಳ ಮೇಲೆ ದಾಳಿ ನಡೆದಿದೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿರುವ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ ಶೆಟ್ಟರ್ ನಿವಾಸ ಮತ್ತು ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ತುಮಕೂರು ನಗರದ ಆರ್ಟಿ ನಗರದ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ನಿವಾಸದ ಮೇಲೆ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಶಿವಮೊಗ್ಗದಲ್ಲಿ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಪ್ರಶಾಂಶ ಅವರ ಮನೆ ಹಾಗೂ ತೋಟದ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಶಿವಮೊಗ್ಗದ ಶರಾವತಿ ನಗರ, ಶೆಟ್ಟಿಹಳ್ಳಿ ಹಾಗೂ ಶಿಕಾರಿಪುರದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ, ಜಿಪಂ ಇಂಜಿನಿಯರ್ ಶಂಕರ್ ನಾಯ್ಕ ಅವರ ಶಿಕಾರಿಪುರದ ಮನೆ ಮೇಲೆ ಲೋಕಾಯುಕ್ತರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ