ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ನ್ಯಾಯಾಧೀಶರ ನೇಮಿಸಿದ ಹೈಕೋರ್ಟ್‌

ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠ ಮತ್ತು ವಿದ್ಯಾಪೀಠಕ್ಕೆ ಆಡಳಿತಾಧಿಕಾರಿಯನ್ನಾಗಿ ಚಿತ್ರದುರ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರನ್ನು ತಾತ್ಕಾಲಿಕವಾಗಿ ನೇಮಕ ಮಾಡಿ ಕರ್ನಾಟಕ ಹೈಕೋರ್ಟ್‌ ಸೋಮವಾರ ಆದೇಶಿಸಿದೆ.
ಚಿತ್ರದುರ್ಗದ ಎಚ್‌.ಏಕನಾಥಯ್ಯ ಅವರು ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್‌ ಕಮಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ಈ ಆದೇಶ ಮಾಡಿದೆ.
ಅರ್ಜಿದಾರರ ಪರವಾಗಿ ವಕಾಲತ್ತು ಹಾಕಿರುವ ವಕೀಲ ಆಕಾಶ ವಿ.ಟಿ. ಅವರ ಪರವಾಗಿ ವಕೀಲ ಸುಘೋಷ ಸುಬ್ರಮಣ್ಯಂ ವಾದ ಮಂಡಿಸಿ ರಾಜ್ಯ ಸರ್ಕಾರವು ಸಂವಿಧಾನದ 162ನೇ ವಿಧಿಯಡಿ ಈ ಹಿಂದೆ ಮಠಕ್ಕೆ ನಿವೃತ್ತ ಐಎಎಸ್‌ ಅಧಿಕಾರಿ ಪಿ ಎಸ್‌ ವಸ್ತ್ರದ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿದ್ದು ಸರಿಯಾದ ಕ್ರಮವಾಗಿತ್ತು. ಇದನ್ನು ಏಕಸದಸ್ಯ ಪೀಠವು ವಜಾ ಮಾಡಿದೆ. ಮಠದ ಮುಖ್ಯಸ್ಥರಾದ ಶಿವಮೂರ್ತಿ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವುದರಿಂದ ಆಡಳಿತಾಧಿಕಾರಿ ನೇಮಕ ಮಾಡಬೇಕು. ಹೀಗಾಗಿ, ಏಕಸದಸ್ಯ ಪೀಠದ ಆದೇಶವನ್ನು ವಜಾ ಮಾಡಬೇಕು ಎಂದು ಕೋರಿದರು.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಜಯಕುಮಾರ ಎಸ್‌. ಪಾಟೀಲ, ಏಕಸದಸ್ಯ ಪೀಠವು ವಸ್ತ್ರದ ಅವರು ಆರು ವಾರಗಳ ಕಾಲ ಆಡಳಿತಾಧಿಕಾರಿಯಾಗಿ ಮುಂದುವರಿಯಲಿದ್ದಾರೆ ಎಂದು ಆದೇಶಿಸಿತ್ತು. ನಿನ್ನೆಗೆ ಆಡಳಿತಾಧಿಕಾರಿ ಅವಧಿ ಮುಗಿದಿರುವುದರಿಂದ ಬಸವಪ್ರಭು ಸ್ವಾಮೀಜಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರದ ಆದೇಶ ಹಿನ್ನೆಲೆಯಲ್ಲಿ ಅವರು ಅಧಿಕಾರವಹಿಸಿಕೊಂಡಿದ್ದರು. ಹೀಗಾಗಿ, ಅವರು ಯಾರಿಗೂ ಅಧಿಕಾರವಹಿಸಿಕೊಡಬೇಕಾಗಿಲ್ಲ ಎಂದು ವಾದಿಸಿದರು.
ವಸ್ತ್ರದ ಅವರನ್ನು ಪ್ರತಿನಿಧಿಸಿದ್ದ ವಕೀಲ ಗುರುಮಠ, ನಿರ್ದಿಷ್ಟ ವ್ಯಕ್ತಿಗೆ ಅಧಿಕಾರ ವರ್ಗಾವಣೆ ಮಾಡುವಂತೆ ಏಕಸದಸ್ಯ ಪೀಠವು ವಸ್ತ್ರದ ಅವರಿಗೆ ಆದೇಶಿಸಿಲ್ಲ. ಹೀಗಾಗಿ, ಯಾರಿಗೆ ಅಧಿಕಾರ ವರ್ಗಾಯಿಸಬೇಕು ಎಂಬುದನ್ನು ನ್ಯಾಯಾಲಯವು ನಿರ್ಧರಿಸಬೇಕು ಎಂದು ಕೋರಿದರು.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ರಾಜ್ಯ ಸರ್ಕಾರವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸಿದೆ ಎಂದು ಪೀಠಕ್ಕೆ ತಿಳಿಸಿದರು.
ಇದನ್ನು ಆಲಿಸಿದ ಪೀಠವು ಚಿತ್ರದುರ್ಗದ ಪ್ರಧಾನ ಜಿಲ್ಲಾ ನ್ಯಾಯಾಧೀಶರು ಮಠ ಮತ್ತು ವಿದ್ಯಾಪೀಠದ ಆಡಳಿತವನ್ನು ಮಂಗಳವಾರ ಬೆಳಿಗ್ಗೆ 11:30ರ ಒಳಗೆ ವಹಿಸಿಕೊಳ್ಳಬೇಕು. ಜಿಲ್ಲಾಧಿಕಾರಿಯು ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡಬೇಕು. ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದ್ದು, ಆಕ್ಷೇಪಣೆ ಸಲ್ಲಿಸಬೇಕು ಎಂದು ಆದೇಶಿಸಿದೆ. ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಿತು.

ಪ್ರಮುಖ ಸುದ್ದಿ :-   ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಹಗರಣ: ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ ರೇವಣ್ಣ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement