
ಬೆಂಗಳೂರು: ಕೆಂಎಫ್ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿಗಳಿಗೆ ಹೆಚ್ಚಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಆಗಸ್ಟ್ 1 ರಿಂದ ಈ ಪರಿಷ್ಕೃತ ದರ ಜಾರಿಗೆ ಬರಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಸಭೆ ನಡೆಸಿದರು. ಈ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಕೆಎಂಎಫ್ ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡುವುದಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ 3 ರೂಪಾಯಿ ಹೆಚ್ಚಳ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ್ದಾರೆ. ಹೆಚ್ಚಳವಾದ 3 ರೂಪಾಯಿ ಹಾಲು ಉತ್ಪಾದಕರಿಗೆ ಹೋಗಬೇಕು ಎಂದು ಅವರು ಸೂಚಿಸಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ. ಎಲ್ಲಾ ಮಾದರಿಯ ಹಾಲಿಗೂ 3 ರೂ ದರ ಏರಿಕೆ ಆಗಲಿದೆ. ದರ ಏರಿಕೆ ಹಣ ರೈತರಿಗೆ ತಲುಪಿಸುವ ವ್ಯವಸ್ಥೆ ಕೂಡ ಆಗಲಿದೆ ಎಂದು ಅವರು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಸಭೆ ನಡೆಸಿದ ನಂತರ ಈ ನಿರ್ಧಾರ ಹೊರಬಿದ್ದಿದೆ.
ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ, ನಿರ್ದೇಶಕ ಹೆಚ್.ಡಿ.ರೇವಣ್ಣ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.



ನಿಮ್ಮ ಕಾಮೆಂಟ್ ಬರೆಯಿರಿ