
ಚಂಡೀಗಢ : ಹರಿಯಾಣದ ನೂಹ್ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ವಿಚಾರಣೆಗೆ ಮುಂದಾಗಿರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆರೋಪಿಗಳ ಕಟ್ಟಡ ನೆಲಸಮ ಕಾರ್ಯಾಚರಣೆಗೆ ತಡೆ ನೀಡಿದೆ.
ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ನೇತೃತ್ವದ ಪೀಠ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ಪರಿಗಣಿಸಿದೆ. ಜುಲೈ 31ರ ವಿಎಚ್ಪಿ ಹಮ್ಮಿಕೊಂಡಿದ್ದ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದ ನಂತರ ಹಿಂಸಾಚಾರ ಭುಗಿಲೆದ್ದಿತ್ತು.
ಹಿಂಸಾಚಾರದ ಘಟನೆಯಲ್ಲಿ ಐದು ಮಂದಿ ಮೃತಪಟ್ಟಿದ್ದು, ಪೊಲೀಸರು ಸೇರಿದಂತೆ ಕನಿಷ್ಠ 70 ಮಂದಿ ಗಾಯಗೊಂಡಿದ್ದಾರೆ.
ತರುವಾಯ ಜಿಲ್ಲೆಯಲ್ಲಿ 700 ಕ್ಕೂ ಹೆಚ್ಚು ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ಸರ್ಕಾರ ಕೈಗೊಂಡಿತ್ತು. ಕೆಡವಲಾದ ಕಟ್ಟಡಗಳು ನೂಹ್ ನಗರದ ಮನೆ, ಅಂಗಡಿ ಹಾಗೂ ಅನಧಿಕೃತ ನಿರ್ಮಾಣಗಳಾಗಿದ್ದು ಇವೆಲ್ಲವನ್ನೂ ಸರ್ಕಾರಿ ಆಸ್ತಿಯಲ್ಲಿ ನಿರ್ಮಿಸಲಾಗಿದೆ. ಕೋಮು ಘರ್ಷಣೆಯಲ್ಲಿ ತೊಡಗಿರುವ ಶಂಕಿತ ವ್ಯಕ್ತಿಗಳು ಇವುಗಳನ್ನು ಬಳಸುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು 56 ಎಫ್ಐಆರ್ಗಳನ್ನು ದಾಖಲಿಸಲಾಗಿದ್ದು, ಇದುವರೆಗೆ 147 ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.



ನಿಮ್ಮ ಕಾಮೆಂಟ್ ಬರೆಯಿರಿ