ಗೋಕರ್ಣ ಮಹಾಬಲೇಶ್ವರ ದೇಗುಲ : ನಾಲ್ವರು ನಾಮನಿರ್ದೇಶಿತರನ್ನು ಬದಲಾಯಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು : ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನದ ಆಡಳಿತ ನಿರ್ವಹಣೆಗಾಗಿ ಸುಪ್ರೀಂ ಕೋರ್ಟ್‌ ಆದೇಶದ ಅನುಸಾರ ನಾಮ ನಿರ್ದೇಶನಗೊಂಡಿದ್ದ ಇಬ್ಬರು ಉಪಾಧಿವಂತರು ಮತ್ತು ಇಬ್ಬರು ವಿದ್ವಾಂಸರನ್ನು ಬದಲಾಯಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಮಧ್ಯಂತರ ತಡೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಹೊಸನಗರದ ರಾಮಚಂದ್ರಾಪುರ ಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂತೋಷ ಹೆಗಡೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈ ಆದೇಶ ಮಾಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ವರದಿ ಪ್ರಕಾರ, ಅರ್ಜಿದಾರರ ಪರ ವಕೀಲ ಪಿ ಎನ್‌ ಮನಮೋಹನ ಅವರು ರಾಜ್ಯ ಸರ್ಕಾರದ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಪೀಠವು, ‘ಯಾವ ಆಧಾರದಲ್ಲಿ ಈ ಆದೇಶ ಹೊರಡಿಸಿದ್ದೀರಿ‘ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿತು.
‘ಯಾವ ತಪ್ಪಾಗಿದೆ ಎಂದು ಈ ತಿದ್ದುಪಡಿ ಮಾಡಿದ್ದೀರಿ, ಕಾಲಕಾಲಕ್ಕೆ ಈ ರೀತಿಯ ಬದಲಾವಣೆ ಮಾಡಲು ಸುಪ್ರೀಂ ಕೋರ್ಟ್‌ ಆದೇಶದಲ್ಲಿ ಎಲ್ಲಿ ವಿವರಿಸಲಾಗಿದೆ. ಇಂತಹ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂಬುದು ಮೇಲ್ನೋಟಕ್ಕೆ ತಿಳಿದು ಬರುತ್ತದೆಯಲ್ಲವೇ‘ ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿತು.
ಪ್ರಕರಣದ ಹಿನ್ನೆಲೆ: ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನದ ಡಿನೋಟಿಫೈ ಪ್ರಕರಣದ ಸಿವಿಲ್‌ ದಾವೆಯಲ್ಲಿ ಸುಪ್ರೀಂ ಕೋರ್ಟ್‌ 2021ರ ಏಪ್ರಿಲ್‌ 19ರಂದು ಮಧ್ಯಂತರ ಆದೇಶ ನೀಡಿತ್ತು. ಈ ಆದೇಶದ ಅನುಸಾರ ದೇವಸ್ಥಾನದ ಆಡಳಿತ ನಿರ್ವಹಣೆಗಾಗಿ 2021ರ ಮೇ 4ರಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ ಎನ್‌ ಕೃಷ್ಣ ನೇತೃತ್ವದಲ್ಲಿ ಅಧ್ಯಕ್ಷರನ್ನೂ ಒಳಗೊಂಡಂತೆ 8 ಸದಸ್ಯರ ಮೇಲ್ವಿಚಾರಣಾ ಸಮಿತಿ ರಚಿಸಲಾಗಿತ್ತು.
ಈ ಸಮಿತಿಯಲ್ಲಿದ್ದ ಉಪಾಧಿವಂತರಾದ ಮಹಾಬಲ ಉಪಾಧ್ಯ, ದತ್ತಾತ್ರೇಯ ಹಿರೇಗಂಗೆ ಮತ್ತು ವಿದ್ವಾಂಸರಾದ ಪರಮೇಶ್ವರ ಮಾರ್ಕಾಂಡೆ ಹಾಗೂ ಮುರಳೀಧರ ಪ್ರಭು ಅವರನ್ನು ಕೈಬಿಟ್ಟ ರಾಜ್ಯ ಸರ್ಕಾರ; ಉಪಾಧಿವಂತರ ಸ್ಥಾನಕ್ಕೆ ಗಣಪತಿ ಶಿವರಾಮ ಹಿರೇಭಟ್ಟ, ಸುಬ್ರಹ್ಮಣ್ಯ ಚಂದ್ರಶೇಖರ ಅಡಿ ಹಾಗೂ ವಿದ್ವಾಂಸರ ಸ್ಥಾನಕ್ಕೆ ಪರಮೇಶ್ವರ ಸುಬ್ರಹ್ಮಣ್ಯ ಪ್ರಸಾದ ರಮಣಿ ಹಾಗೂ ಮಹೇಶ ಗಣೇಶ ಹಿರೇಗಂಗೆ ಅವರನ್ನು ನಾಮ ನಿರ್ದೇಶನ ಮಾಡಿತ್ತು. ಈ ಕುರಿತಂತೆ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಕಳೆದ ತಿಂಗಳ 12ರಂದು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.

ಪ್ರಮುಖ ಸುದ್ದಿ :-   ಪತಿ ಸಾವಿನ ಸುದ್ದಿ ತಿಳಿದ ನಂತರವೂ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪತ್ನಿ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement