ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ 40% ಕಮೀಷನ್ ಆರೋಪದ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿಯನ್ನು ವಿಚಾರಣಾ ಆಯೋಗವಾಗಿ ಬದಲಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕಾಮಗಾರಿಗಳ ಟೆಂಡರ್, ಪ್ಯಾಕೇಜ್ ಪದ್ಧತಿ, ಪುನರ್ ಅಂದಾಜು, ಬಾಕಿ ಮೊತ್ತ ಬಿಡುಗಡೆ ವಿಷಯಗಳಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಹಾಗೂ ಗುತ್ತಿಗೆ ಕಾಮಗಾರಿಗಳಲ್ಲಿ 40% ಕಮೀಷನ್ ಹೊಡೆಯುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆರೋಪ ಮಾಡಿದ್ದರು.
ಈ ಬಗ್ಗೆ ವರದಿ ನೀಡುವಂತೆ ಇತ್ತೀಚೆಗೆ ನಾಗಮೋಹನ ದಾಸ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಆ ಆದೇಶವನ್ನು ರದ್ದು ಮಾಡಿ, ಅದರ ಬದಲು, ಪ್ರಕರಣದ ತನಿಖೆಗೆ ಎಚ್.ಎನ್. ನಾಗಮೋಹನ ದಾಸ ನೇತೃತ್ವದಲ್ಲಿ ವಿಚಾರಣಾ ಆಯೋಗ ನೇಮಿಸಲಾಗಿದೆ.
ಲೋಕೋಪಯೋಗಿ, ಜಲಸಂಪನ್ಮೂಲ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ಸಣ್ಣ ನೀರಾವರಿ ಇಲಾಖೆಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರಗಳ ಕುರಿತು ಸ್ಥಳ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ, ವಿವರವಾದ ತನಿಖೆ ನಡೆಸಬೇಕು ಹಾಗೂ ಲೋಪದೋಷಗಳ ಮಾಹಿತಿ, ಅದಕ್ಕೆ ಕಾರಣರಾದ ಆರೋಪಿಗಳನ್ನು ಪತ್ತೆ ಮಾಡಿ ಸಂಪೂರ್ಣ ವರದಿಯನ್ನು ಮೂರು ತಿಂಗಳ ಒಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ