ನವದೆಹಲಿ: ಅಹ್ಮದ್ ಪಟೇಲ್ ಅವರ ನಿಧನದ ನಂತರ ಹಂಗಾಮಿ ಖಜಾಂಚಿಯಾಗಿ ನೇಮಕಗೊಂಡಿದ್ದ ಪವನಕುಮಾರ ಬನ್ಸಾಲ್ ಅವರ ಬದಲಿಗೆ ಕಾಂಗ್ರೆಸ್ ತನ್ನ ಹಿರಿಯ ನಾಯಕ ಅಜಯ ಮಾಕನ್ ಅವರನ್ನು ಹೊಸ ಖಜಾಂಚಿಯಾಗಿ ಭಾನುವಾರ ನೇಮಿಸಿದೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ಅಜಯ್ ಮಾಕನ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಹೊರಹೋಗುವ ಖಜಾಂಚಿ ಪವನ್ ಕುಮಾರ್ ಬನ್ಸಾಲ್ ಅವರ ಕೊಡುಗೆಯನ್ನು ಪಕ್ಷವು ಪ್ರಶಂಸಿಸುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಮೈಕ್ರೊಬ್ಲಾಗಿಂಗ್ ವೆಬ್ಸೈಟ್ ಎಕ್ಸ್ ನಲ್ಲಿ ಅಜಯ ಮಾಕನ್ ಅವರು, “ನಾನು ಪ್ರಸ್ತುತ ರಾಯ್ಪುರದಲ್ಲಿ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಭಾಗವಹಿಸುತ್ತಿದ್ದೇನೆ. ಕಾಂಗ್ರೆಸ್ನ ಖಜಾಂಚಿಯಾಗಿ ನನ್ನ ನೇಮಕದ ಬಗ್ಗೆ ನನಗೆ ತಿಳಿಸಲಾಗಿದೆ. ಇದು ನಿಜಕ್ಕೂ ಮಹತ್ವದ ಜವಾಬ್ದಾರಿಯಾಗಿದೆ ”ಎಂದು ತಿಳಿಸಿದ್ದಾರೆ.
ತಮ್ಮ ಮೇಲೆ ವಿಶ್ವಾಸವಿಟ್ಟಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಕೆಸಿ ವೇಣುಗೋಪಾಲ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. “ನನ್ನ ನಾಯಕರು ಮತ್ತು ನಮ್ಮ ಪಕ್ಷದ ಕಾರ್ಯಕರ್ತರಿಬ್ಬರಿ ನಾನು ಅತ್ಯಂತ ಶ್ರದ್ಧೆ, ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ಕೆಲಸ ಮಾಡುತ್ತೇನೆ ಎಂದು ನಾನು ಭರವಸೆ ನೀಡುತ್ತೇನೆ” ಎಂದು ಮಾಕನ್ ಹೇಳಿದ್ದಾರೆ.
ಮಾಕನ್ ಅವರು ರಾಹುಲ್ ಗಾಂಧಿಯ ಆಪ್ತ ಎಂದು ಪರಿಗಣಿಸಲ್ಪಟ್ಟಿದ್ದಾರೆ ಮತ್ತು ಕೆಲವು ತಿಂಗಳ ಹಿಂದೆ ರಾಜಸ್ಥಾನದ ಉಸ್ತುವಾರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಯಾವುದೇ ಹುದ್ದೆಯಲ್ಲಿ ಇರಲಿಲ್ಲ.
ಮಾಜಿ ಕೇಂದ್ರ ಸಚಿವ, ಅಜಯ್ ಮಾಕನ್ ಅವರು ದೆಹಲಿ ಕಾಂಗ್ರೆಸ್ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದಾರೆ ಮತ್ತು ದೆಹಲಿಯಲ್ಲಿ ಶೀಲಾ ದೀಕ್ಷಿತ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ