ಚಿತ್ರದುರ್ಗ ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣ: ಮೂರನೇ ಆರೋಪಿ ಪರಮಶಿವಯ್ಯಗೆ ಹೈಕೋರ್ಟ್‌ನಿಂದ ಜಾಮೀನು

ಬೆಂಗಳೂರು : ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಠದ ವಿದ್ಯಾಪೀಠಗಳ ಕಾರ್ಯದರ್ಶಿ ಪರಮಶಿವಯ್ಯ ಅವರಿಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.
ಪರಮಶಿವಯ್ಯ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ. ಅರ್ಜಿದಾರರು ಎರಡು ಲಕ್ಷ ರೂಪಾಯಿ ಮೌಲ್ಯದ ಬಾಂಡ್‌, ಇಬ್ಬರ ಭದ್ರತೆ ನೀಡಬೇಕು. ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿದೆ. ಪರಮಶಿವಯ್ಯ ಅವರು ಈ ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿಯಾಗಿದ್ದಾರೆ.
ಕಳೆದ ವರ್ಷದ ಆಗಸ್ಟ್‌ನಲ್ಲಿ ಶಿವಮೂರ್ತಿ ಶರಣರ ವಿರುದ್ಧ ಮಠದ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯರು, ಶಿವಮೂರ್ತಿ ಶರಣರು, ಪರಮಶಿವಯ್ಯ ಸೇರಿ ಐವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು.

ಮೈಸೂರಿನ ಒಡನಾಡಿ ಸಂಸ್ಥೆಯ ನೆರವಿನಿಂದ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಪೊಲೀಸರು ಪೋಕ್ಸೊ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡ (ದೌರ್ಜನ್ಯ ನಿಯಂತ್ರಣ) ಕಾಯಿದೆ ಅಡಿ ಶಿವಮೂರ್ತಿ ಶರಣರು, ಪರಮಶಿವಯ್ಯ ಸೇರಿ ಐವರ ವಿರುದ್ಧ ಪ್ರಕರಣ ದಾಖಲಿಸಿ, ನಂತರ ಅದನ್ನು ಚಿತ್ರದುರ್ಗದ ಗ್ರಾಮೀಣ ಠಾಣೆಗೆ ವರ್ಗಾಯಿಸಿದ್ದರು. ಆನಂತರದಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು.
ಆನಂತರ ಮತ್ತಿಬ್ಬರು ವಿದ್ಯಾರ್ಥಿನಿಯರು ನೀಡಿದ ದೂರಿನ ಅನ್ವಯ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಈ ಎರಡೂ ಪ್ರಕರಣಗಳಲ್ಲಿ ಪರಮಶಿವಯ್ಯ ಅವರು ಆರೋಪಿಯಾಗಿದ್ದರು. ಆನಂತರ ಎರಡನೇ ಪ್ರಕರಣದಲ್ಲಿ ಆರೋಪ ಪಟ್ಟಿಯಿಂದ ಪರಮಶಿವಯ್ಯ ಅವರನ್ನು ಕೈಬಿಡಲಾಗಿದೆ. ಮಕ್ಕಳ ಮೇಲೆ ಸ್ವಾಮೀಜಿ ಅತ್ಯಾಚಾರ ಎಸಗಲು ಪರಮಶಿವಯ್ಯ ನೆರವಾಗಿದ್ದಾರೆ ಎಂಬುದು ಅವರ ಮೇಲೆ ಇರುವ ಆರೋಪವಾಗಿದೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಮಂಗನ ಕಾಯಿಲೆಗೆ ಐದು ವರ್ಷದ ಬಾಲಕಿ ಸಾವು

 

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement