ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಮಂಡಿ ನೋವಿನಿಂದ ಬಳಲುತ್ತಿರುವ ಬಸವರಾಜ ಬೊಮ್ಮಾಯಿ ಅವರನ್ನು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯರು ಬೊಮ್ಮಾಯಿ ಅವರ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ವೇಳೆ ಅವರಿಗೆ ಮಂಡಿ ನೋವು ಕಾಣಿಸಿಕೊಂಡಿತ್ತು. ಇದಕ್ಕೆ ನಾಟಿ ವೈದ್ಯರಿಂದಲೂ ಚಿಕಿತ್ಸೆ ಪಡೆದಿದ್ದರು. ಆದರೆ, ನೋವು ಕಡಿಮೆಯಾಗದ ಕಾರಣ ಸೋಮವಾರ (ಅಕ್ಟೊಬರ್‌ 16) ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾಗಿರುವ ಕುರಿತು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ‘ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ’ ಎಂದು ಯಡಿಯೂರಪ್ಪ ಅವರು ಬರೆದುಕೊಂಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement