ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಇಲ್ಲ ಎಂದ ಸುಪ್ರೀಂ ಕೋರ್ಟ್‌

ನವದೆಹಲಿ: ಸಲಿಂಗ ಜೋಡಿಯು ವಿವಾಹವಾಗುವ (LGBTQIA+ ಮದುವೆ) ಅಥವಾ ಸಿವಿಲ್‌ ಯೂನಿಯನ್‌ (ವಿವಾಹಕ್ಕೆ ಸರಿಸಮನಾದ ಕಾನೂನು ಮಾನ್ಯತೆ ಇರುವ ಸಂಬಂಧಗಳು) ಹೊಂದುವ ಕಾನೂನಾತ್ಮಕ ಹಕ್ಕಿನ ಕೋರಿಕೆಗೆ ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್‌ ಮಂಗಳವಾರ ನಿರಾಕರಿಸಿದೆ ಹಾಗೂ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ 21 ಅರ್ಜಿಗಳನ್ನು ಸಾಂವಿಧಾನಿಕ ಪೀಠ ವಜಾಗೊಳಿಸಿದೆ.
ಈಗಿರುವ ಕಾನೂನು ಸಲಿಂಗ ಜೋಡಿ ವಿವಾಹವಾಗುವುದಕ್ಕೆ ಅಥವಾ ಸಿವಿಲ್‌ ಯೂನಿಯನ್‌ ಮದುವೆಗೆ ಸಮ್ಮತಿ ಸೂಚಿಸುವುದಿಲ್ಲ. ಹಾಗೆ ಸಮ್ಮತಿ ನೀಡುವ ಕಾನೂನು ರೂಪಿಸುವುದು ಸಂಸತ್ತಿಗೆ ಬಿಟ್ಟ ವಿಚಾರ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್‌ ಕಿಶನ್‌ ಕೌಲ್‌, ಎಸ್‌.ರವೀಂದ್ರ ಭಟ್, ಹಿಮಾ ಕೊಹ್ಲಿ, ಪಿ.ಎಸ್‌.ನರಸಿಂಹ ಅವರಿದ್ದ ಪೀಠವು ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ಕುರಿತು 10 ದಿನಗಳ ಕಾಲ ವಿಚಾರಣೆ ನಡೆಸಿದ ನಂತರ ಮೇ 11ರಂದು ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ (ಅಕ್ಟೋಬರ್‌ ೧೭) ತೀರ್ಪು ಪ್ರಕಟಿಸಿತು.

ಆದಾಗ್ಯೂ, ವಿಲಕ್ಷಣ ವ್ಯಕ್ತಿಗಳು ತಮ್ಮ ಪಾಲುದಾರರನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿದ್ದಾರೆ ಮತ್ತು ಅಂತಹ ದಂಪತಿಗಳ ವಿರುದ್ಧ ತಾರತಮ್ಯವಾಗದಂತೆ ನೋಡಿಕೊಳ್ಳಬೇಕು ಎಂದು ಉನ್ನತ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಒತ್ತಿಹೇಳಿದೆ. ಐವರು ನ್ಯಾಯಾಧೀಶರ ಪೀಠವು ನಾಲ್ಕು ಪ್ರತ್ಯೇಕ ತೀರ್ಪುಗಳಲ್ಲಿ ಸಲಿಂಗ ದಂಪತಿಗಳಿಂದ ಮಕ್ಕಳನ್ನು ದತ್ತು ತೆಗೆದುಕೊಳ್ಳುವುದರ ವಿರುದ್ಧ 3:2 ತೀರ್ಪು ನೀಡಿದೆ.
ಸಲಿಂಗ ದಂಪತಿಗಳಿಗೆ ಮದುವೆಯಾಗಲು ಅದಕ್ಕೆ ಯಾವುದೇ ಅನರ್ಹತೆಯೂ ಇಲ್ಲ ಮತ್ತು ಆದರೆ ಅದನ್ನು ಮೂಲಭೂತ ಹಕ್ಕು ಎಂದು ಹೇಳಲು ಸಾಧ್ಯವಿಲ್ಲ ಎಂದು ಸಾಂವಿಧಾನಿಕ ಪೀಠವು ಸರ್ವಾನುಮತದಿಂದ ಒಪ್ಪಿಕೊಂಡಿತು.
ಸಲಿಂಗ ದಂಪತಿಗಳು ಮಕ್ಕಳನ್ನು ದತ್ತು ಪಡೆಯಬಹುದು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಮತ್ತು ನ್ಯಾಯಮೂರ್ತಿ ಎಸ್‌ಕೆ ಕೌಲ್ ಹೇಳಿದರೆ, ನ್ಯಾಯಮೂರ್ತಿಗಳಾದ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರು ಇದನ್ನು ಒಪ್ಪಲಿಲ್ಲ.
ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಅವರು, ‘ನ್ಯಾಯಾಲಯವು ಕಾನೂನುಗಳನ್ನು ಮಾಡುವುದಿಲ್ಲ. ಬದಲಿಗೆ ಅವುಗಳನ್ನು ವ್ಯಾಖ್ಯಾನಿಸುತ್ತದೆ. ಸಂಸತ್ತು ಮಾತ್ರ ವಿಶೇಷ ವಿವಾಹ ಕಾಯ್ದೆಯಲ್ಲಿ ಬದಲಾವಣೆ ತರಬಹುದು. ಆದರೆ ಈ ಅಸಹಜ ಸಮುದಾಯ ತಮ್ಮ ಬದುಕು ಸಾಗಿಸುವಲ್ಲಿ ಯಾವುದೇ ತಾರತಮ್ಯ ಆಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಕೇಂದ್ರ ಹಾಗೂ ರಾಜ್ಯ ಸರ್ಕಾಋಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳದ್ದಾಗಿದೆ ಎಂದು ಸೂಚಿಸಿದರು.

ಪ್ರಮುಖ ಸುದ್ದಿ :-   ವಿಶ್ವದಾದ್ಯಂತ ಕೋವಿಡ್ ಲಸಿಕೆ ಹಿಂತೆಗೆದುಕೊಂಡ ಆಸ್ಟ್ರಾಜೆನೆಕಾ : ವರದಿ

‘ವಿಶೇಷ ವಿವಾಹ ಕಾಯ್ದೆ ವಿಷಯದ ಬಗ್ಗೆ ಸಂಸತ್ತು ನಿರ್ಧರಿಸಬೇಕು. ವಿಶೇಷ ವಿವಾಹ ಕಾಯ್ದೆಯ ಸೆಕ್ಷನ್‌ 4 ಅನ್ನು ರದ್ದುಪಡಿಸಿದರೆ ಪ್ರಗತಿಪರ ಶಾಸನದ ಪ್ರಯೋಜನಗಳನ್ನು ಕಳೆದುಕೊಳ್ಳಬೇಕಾಗುವ ಅಪಾಯವೂ ಇದೆ. ಭಾರತೀಯ ಉತ್ತರಾಧಿಕಾರ ಕಾಯ್ದೆ ಅಥವಾ ಹಿಂದೂ ಉತ್ತರಾಧಿಕಾರ ಕಾಯ್ದೆಯನ್ನು ಒಮ್ಮೆ ಗಮನಿಸಿದರೆ ಈ ಪ್ರಕರಣವು ಶಾಸಕಾಂಗ ಕ್ಷೇತ್ರ ವ್ಯಾಪ್ತಿಗೆ ಸೇರುತ್ತದೆ ಎಂಬುದು ಸ್ಪಷ್ಟ’ ಎಂದು ಹೇಳಿದರು.
ವ್ಯಕ್ತಿಯ ಲಿಂಗವು ಅವರ ಲೈಂಗಿಕತೆಗೆ ಸಮನಾದುದಲ್ಲ. ಒಬ್ಬರ ಜೀವ ಸಂಗಾತಿಯನ್ನು ಆಯ್ಕೆ ಮಾಡುವ ವಿಷಯವು ಸಂವಿಧಾನದ 21ನೇ ವಿಧಿಯಡಿ ಒಬ್ಬರ ಬದುಕು ಮತ್ತು ಸ್ವಾತಂತ್ರ್ಯದ ಹಕ್ಕಿಗೆ ಸಂಬಂಧಿಸಿದ್ದಾಗಿದೆ. ಅದರಲ್ಲಿ ತಮ್ಮ ಬಾಳ ಸಂಗಾತಿಯ ಆಯ್ಕೆ ಮತ್ತು ಅದನ್ನು ದೃಢಪಡಿಸುವುದೂ ಒಳಗೊಂಡಿದೆ. ಇದನ್ನು ಗುರುತಿಸದಿರುವುದು ತಾರತಮ್ಯವಾಗುತ್ತದೆ’ ಎಂದು ಮುಖ್ಯ ನ್ಯಾಯಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

ನ್ಯಾ. ರವೀಂದ್ರ ಭಟ್ ಅವರು, ‘ಅಸಹಜ ಸಮುದಾಯದ ಸಲಿಂಗ ವಿವಾಹಕ್ಕೆ ಸಂಬಂಧಿಸಿದಂತೆ ಸೂಕ್ತ ಕಾನೂನು ಚೌಕಟ್ಟು ರಚಿಸದೇ, ಅದಕ್ಕೆ ಮಾನ್ಯತೆ ನೀಡಲಾಗದು’ ಎಂದು ಅಭಿಪ್ರಾಯಪಟ್ಟರು. ಪೀಠದಲ್ಲಿದ್ದ ಇತರ ನ್ಯಾಯಮೂರ್ತಿಗಳು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ ಅವರ ನಿಲುವನ್ನು ಬೆಂಬಲಿಸಿದರು.
ಈ ಅಸಹಜ ಸಮುದಾಯದ ಜನರ ಹಕ್ಕುಗಳನ್ನು ಕಾಪಾಡುವ ಕುರಿತು ಕೇಂದ್ರ ಸರ್ಕಾರವು ಸಮಿತಿ ರಚಿಸುವ ಕುರಿತು ಹಿರಿಯ ಸಾಲಿಸೆಟರ್‌ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿರುವುದನ್ನು ನ್ಯಾಯಾಲಯ ದಾಖಲಿಸಿಕೊಂಡಿದೆ ಎಂದು ನ್ಯಾ. ಚಂದ್ರಚೂಡ ಹೇಳಿದರು.

ಪ್ರಮುಖ ಸುದ್ದಿ :-   ಬೆಂಬಲ ಹಿಂಪಡೆದ ಮೂವರು ಪಕ್ಷೇತರ ಶಾಸಕರು : ಸಂಕಷ್ಟದಲ್ಲಿ ಹರಿಯಾಣದ ಬಿಜೆಪಿ ಸರ್ಕಾರ

ಹಿರಿಯ ವಕೀಲರಾದ ಅಭಿಷೇಕ ಮನು ಸಿಂಘ್ವಿ, ರಾಜು ರಾಮಚಂದ್ರನ್‌, ಕೆ.ವಿ.ವಿಶ್ವನಾಥನ್‌ (ಈಗ ಸುಪ್ರಿಂ ಕೋರ್ಟ್‌ನ ನ್ಯಾಯಮೂರ್ತಿ), ಆನಂದ ಗ್ರೋವರ್, ಸೌರಬ್ ಕೃಪಾಲ್‌ ಅವರು ಈ ಬಗ್ಗೆ ಕೋರ್ಟ್‌ನ ಮೆಟ್ಟಿಲೇರಿದ್ದ ವಿವಿಧ 21 ಅರ್ಜಿದಾರರ ಪರವಾಗಿ ವಾದ ಮಂಡಿಸಿದ್ದರು.
ಈ ಕುರಿತ ತನ್ನ ಪ್ರಶ್ನೆಗೆ ಏಳು ರಾಜ್ಯಗಳು ಪ್ರತಿಕ್ರಿಯಿಸಿವೆ. ಈ ಪೈಕಿ ರಾಜಸ್ಥಾನ, ಆಂಧ್ರಪ್ರದೇಶ, ಅಸ್ಸಾಂ ರಾಜ್ಯಗಳು ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕು ಎಂಬ ಅರ್ಜಿದಾರರ ಮನವಿಗೆ ವಿರೋಧವಿದೆ ಎಂದು ತಿಳಿಸಿತ್ತು. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕು. ಪೂರಕವಾಗಿ 1954ರ ವಿಶೇಷ ವಿವಾಹ ಕಾಯ್ದೆಯ (ಎಸ್‌ಎಂಎ) ನಿಬಂಧನೆಗಳನ್ನು ಮರು ವ್ಯಾಖ್ಯಾನಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು.

ಸುಪ್ರೀಂ ಕೋರ್ಟ್‌ ಸಾಂವಿಧಾನಿಕ ಪೀಠದ ಅಭಿಪ್ರಾಯಗಳು
ಈ ಅಸಹಜ ಸಮುದಾಯದ ವಿರುದ್ಧ ತಾರತಮ್ಯ ನಡೆಯುತ್ತಿಲ್ಲ ಎಂಬುದನ್ನು ಆಡಳಿತವು ಖಾತ್ರಿಪಡಿಸಿಕೊಳ್ಳಬೇಕು
ಅಸಹಜ ಸಮುದಾಯದ ಹಕ್ಕುಗಳ ಬಗ್ಗೆ ಸಾರ್ವಜನಿಕರನ್ನು ಜಾಗೃತಗೊಳಿಸಬೇಕು
ಸರಕು ಮತ್ತು ಸೇವೆಗಳ ಪ್ರವೇಶದಲ್ಲಿ ಇವರಿಗೆ ಯಾವುದೇ ತಾರತಮ್ಯ ಇರಕೂಡದು
ಈ ಅಸಹಜ ಸಮುದಾಯದ ದಂಪತಿಗಳಿಗಾಗಿ ಸುರಕ್ಷಿತ ಮನೆ ಅಥವಾ ‘ಗರಿಮಾ ಗೃಹ’ ನಿರ್ಮಿಸಬೇಕು.
ಮಕ್ಕಳ ಲಿಂಗ ಪರಿವರ್ತನೆಗೆ ಬಲವಂತದ ಶಸ್ತ್ರಚಿಕಿತ್ಸೆ ನಡೆಸುವಂತಿಲ್ಲ
ಯಾವುದೇ ವ್ಯಕ್ತಿಯನ್ನು ಯಾವುದೇ ರೀತಿಯ ಹಾರ್ಮೋನುಗಳ ಬದಲಾವಣೆ ಚಿಕಿತ್ಸೆಗೆ ಒಳಗಾಗಲು ಬಲವಂತ ಮಾಡುವಂತಿಲ್ಲ
ಅಸಹಜ ಸಮುದಾಯದ ಜನರಿಗೆ ಕಿರುಕುಳ ನೀಡಬಾರದು

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement