ಬೆಳಗಾವಿ: ಹುಲಿ ಉಗುರಿನ ಪೆಂಡೆಂಟ್ ಆರೋಪಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಮನೆಯಲ್ಲಿ ಶುಕ್ರವಾರ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅವರ ಪುತ್ರ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರ ಬಳಿ ಇದ್ದ ಹುಲಿ ಉಗುರು ಹೋಲುವ ಪೆಂಡೆಂಟ್ ಅನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಬೆಳಗಾವಿಯ ಕುವೆಂಪು ನಗರದಲ್ಲಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ನಿವಾಸದ ಮೇಲೆ ಡಿಎಫ್ ಒ ಶಂಕರ ಕಳ್ಳೋಲ್ಕರ ನೇತೃತ್ವದಲ್ಲಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದ್ದು ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಅವರು ಹುಲಿ ಉಗುರು ಧರಿಸಿದ್ದ ಆರೋಪ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ.
ಸಚಿವೆ ಲಕ್ಷ್ಮೀ ಅವರ ಪುತ್ರ ಮೃಣಾಲ್ ಕೊರಳಲ್ಲಿ ಧರಿಸಿದ್ದ ಚಿನ್ನಾಭರಣದಲ್ಲಿ ಹುಲಿ ಉಗುರಿನ ಪೆಂಡೆಂಟ್ ಇತ್ತು. ಇದರ ಫೋಟೊ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ನೋಟಿಸ್ ನೀಡಿ, ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಈ ವೇಳೆ ಆ ಪೆಂಡೆಂಟ್ ಅನ್ನು ಮೃಣಾಲ್ ಅವರು ಅಧಿಕಾರಿಗಳಿಗೆ ಹಸ್ತಾಂತರಿಸಿದರು. ಇನ್ನು ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಡೆಸುವ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ನನ್ನ ಮದುವೆಯ ಸಮಾರಂಭದಲ್ಲಿ ಆತ್ಮೀಯರು ನನಗೆ ಈ ಪೆಂಡೆಂಟ್ ಕಾಣಿಕೆ ನೀಡಿದ್ದಾರೆ. ಇದು ನಿಜವಾದ ಹುಲಿ ಉಗುರಿನದ್ದಲ್ಲ. ಪ್ಲಾಸ್ಟಿಕ್ ನಿಂದ ಮಾಡಿದ್ದು. ಈ ವಿಚಾರವಾಗಿ ಅರಣ್ಯಾಧಿಕಾರಿಗಳ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ’ ಎಂದು ಮೃಣಾಲ್ ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ