ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ರಾಮಲಿಂಗಾಪುರದಲ್ಲಿ ಭಾನುವಾರ ಬೆಳಗ್ಗೆ ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಇದ್ದಾರೆ ಎಂದು ಹೇಳಲಾಗಿದೆ.
ಕಾರಿನಲ್ಲಿದ್ದವರಲ್ಲಿ ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರು ಶಿರಾದ ಮೇಕೆರಹಳ್ಳಿ ಗ್ರಾಮದ ದೊಡ್ಡಣ್ಣ, ಸಣ್ಣಮ್ಮ ಮತ್ತು ಯಮುನಾ ಎಂದು ಗುರುತಿಸಲಾಗಿದೆ. ಪ್ರವೀಣ ಎಂಬವರು ಅಪಾಯದಿಂದ ಪಾರಾಗಿದ್ದಾರೆ.
ಅವಘಡ ನಡೆದ ವೇಳೆ ಪ್ರವೀಣ್ ಅವರ ಪತ್ನಿ ಯಮುನಾ ಕಾರು ಚಲಾಯಿಸುತ್ತಿದ್ದು, ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಪ್ರವೀಣ ಅವರು ಕಾರಿನ ಬಾಗಿಲು ತೆಗೆದು ಹೊರಬಂದು ಸ್ಥಳೀಯರನ್ನು ಕೂಗಿ ಕರೆದಿದ್ದಾರೆ. ತಕ್ಷಣವೇ ಸ್ಥಳೀಯರು ಬಂದು ರಕ್ಷಿಸಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿರಾ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ