ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಸಿಗೆ ಬೆಂಕಿ: ಮಹಾರಾಷ್ಟ್ರಕ್ಕೆ ಬಸ್‌ ಸಂಚಾರ ಸ್ಥಗಿತ

ಕಲಬುರಗಿ: ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದ್ದು, ಕರ್ನಾಟಕದ ಕೆಕೆಆರ್‌ಟಿಸಿ ಬಸ್‌ಗೆ ಸೋಮವಾರ ಬೆಂಕಿ ಹಚ್ಚಲಾಗಿದೆ. ಅದರ ನಂತರ ಮಹಾರಾಷ್ಟ್ರಕ್ಕೆ ಹೋಗುವ ಬಸ್ ಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ತಿಳಿಸಿದ್ದಾರೆ.
ಬೀದರ್‌ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಸೋಮವಾರ ಹೊರಟಿದ್ದ ಬಸ್ (ಕೆಎ-38 ಎಫ್-1201) ಅನ್ನು ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಪ್ರತಿಭಟನಾಕಾರರು ತಡೆದ ನಂತರ ಪ್ರಯಾಣಿಕರನ್ನು ಕೆಳಗಿಳಿಸಿ ಬಸ್‌ಗೆ ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ತುಳಜಾಪುರ ಯಾತ್ರೆ ಸೇರಿದಂತೆ ಮಹಾರಾಷ್ಟ್ರಕ್ಕೆ ಅಂತಾರಾಜ್ಯ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಬಸ್‌ನಲ್ಲಿದ್ದ 39 ಪ್ರಯಾಣಿಕರಿಗೆ ಸ್ಥಳೀಯ ಪೊಲೀಸರ ನೆರವಿನಿಂದ ಸುರಕ್ಷಿತವಾಗಿ ಪ್ರಯಾಣಿಸಲು ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರಿಗೆ ಭದ್ರತೆ ನೀಡಿದ ಮಹಾರಾಷ್ಟ್ರ ‍ಪೊಲೀಸರು ಸುರಕ್ಷಿತವಾಗಿ ಅವರನ್ನು ಉಮರ್ಗಾಕ್ಕೆ ತಲುಪಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಕಾರ್ಯಾಚರಣೆಯಲ್ಲಿರುವ ಬಸ್‌ಗಳನ್ನು ಹತ್ತಿರದ ಪೊಲೀಸ್ ಠಾಣೆ, ಬಸ್ ಡಿಪೊಗಳಲ್ಲಿ ಪಾರ್ಕ್ ಮಾಡಲು ಸಂಸ್ಥೆ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement