ಬೆಂಗಳೂರು : ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್‌ ಅನುಮತಿ

ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಕರ್ನಾಟಕದ ಹೈಕೋರ್ಟ್‌ ಅನುಮತಿ ನೀಡಿದೆ.
ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಹೈಕೋರ್ಟ್‌ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಿದೆ. ನವೆಂಬರ್ 1 ರಿಂದ 3ರ ವರೆಗೆ ಮೂರು ದಿನಗಳ ಕಾಲ ಕನ್ನಡ ರಾಜ್ಯೋತ್ಸವ, ಸಾಂಸ್ಕೃತಿ ಕಾರ್ಯಕ್ರಮ ನಡೆಸಬಹುದು ಎಂದು ಹೇಳಿದೆ. ಆದರೆ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂತಹ ಕಾರ್ಯಕ್ರಮ ನಡೆಸಬಾರದು ಎಂದು ಸೂಚನೆ ನೀಡಿದೆ.

ಈದ್ಗಾ ಮೈದಾನ ಬಳಕೆ ಮಾಡಲು ಒಂದು ವೇಳೆ ಕಾನೂನು ಅಡಚಣೆ ಉಂಟಾದರೆ ಆಗ ಅರ್ಜಿದಾರರಿಗೆ ರಾಜ್ಯೋತ್ಸವ ಆಚರಣೆ ಮಾಡಲು ಜಿಲ್ಲಾಡಳಿತದಿಂದ ಪರ್ಯಾಯ ಮೈದಾನ ಒದಗಿಸಬೇಕು ಎಂದು ಸಹ ನ್ಯಾಯಪೀಠ ಸ್ಪಷ್ಟಪಡಿಸಿದೆ.

ಅರ್ಜಿದಾರರ ಪರ ವಕೀಲರು, ‘ಕನ್ನಡ ನಾಡು, ನುಡಿಗೆ ಸಂಬಂಸಿದಂತೆ ಕೇವಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾತ್ರ ಹಮ್ಮಿಕೊಳ್ಳಲಾಗುವುದು. ಜತೆಗೆ, ರಾಜ್ಯ ಭಾವುಟವನ್ನು ಮಾತ್ರ ಧ್ವಜಾರೋಹಣ ಮಾಡಿ, ಇತರೆ ಯಾವುದೇ ಬಾವುಟವನ್ನು ಅಳವಡಿಸುವುದಿಲ್ಲ’ ಎಂದು ನ್ಯಾಯಾಲಯಕ್ಕೆ ಮುಚ್ಚಳಿಕೆ ನೀಡಿದರು.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

ವಿಚಾರಣೆ ವೇಳೆ ನ್ಯಾಯಪೀಠ, ‘ಕರ್ನಾಟಕ ರಾಜ್ಯ ರಚನೆ ಮತ್ತು ಕರ್ನಾಟಕ ರಾಜ್ಯೋತ್ಸವವನ್ನು ಇಡೀ ರಾಜ್ಯದ ಜನತೆ ಆಚರಣೆ ಮಾಡಬೇಕಾಗಿದ್ದು, ಎಲ್ಲಧರ್ಮದವರೂ ಸೇರಿ ಮೂರು ದಿನಗಳ ಕಾಲ ಆಚರಣೆ ಮಾಡಬಹುದು’ ಎಂದು ಅಭಿಪ್ರಾಯಪಟ್ಟಿತು.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಬೇಕು ಎಂದು ಕೋರಿ ಚಾಮರಾಜಪೇಟೆ ನಾಗರಿಕ ಒಕ್ಕೂಟ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಕೆ ಮಾಡಿತ್ತು. ಈ ಮೊದಲು ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಬೇಕು ಎಂದು ಕೋರಿ ಚಾಮರಾಜಪೇಟೆ ನಾಗರಿಕ ಒಕ್ಕೂಟ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಮಾಡಿತ್ತು. ಆದರೆ ಅವರು ಅದನ್ನು ತಿರಸ್ಕಾರ ಮಾಡಿದ್ದರು. ಆದ್ದರಿಂದ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ ಮಾಡಲಾಗಿತ್ತು.

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement