ಬೆಳಗಾವಿ : ಗಡಿ ಭಾಗದಲ್ಲಿ ‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತಿಯಾಗಿದ್ದ ಚಿಂಚಣಿಯ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ (63) ಅವರು ಭಾನುವಾರ (ನವೆಂಬರ್ 12) ಲಿಂಗೈಕ್ಯರಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಮಠದ ಸ್ವಾಮೀಜಿಯಾಗಿದ್ದ ಅವರು ಗಡಿ ಭಾಗದಲ್ಲಿ ಚಿಂಚಣಿ ಶ್ರೀಗಳು ಕನ್ನಡದ ಸ್ವಾಮೀಜಿ ಎಂದೇ ಖ್ಯಾತರಾಗಿದ್ದರು. ಕೆಲ ದಿನಗಳಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಎರಡು ದಿನಗಳ ಹಿಂದೆ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಚಿಕ್ಕೋಡಿ ನಗರದಿಂದ 6 ಕಿ.ಮೀ ದೂರದಲ್ಲಿ ಇರುವ ಚಿಂಚಣಿ ಎಂಬ ಪುಟ್ಟ ಗ್ರಾಮದಲ್ಲಿನ ಅಲ್ಲಮಪ್ರಭು ಸಿದ್ದಸಂಸ್ಥಾನ ಮಠವು ಕನ್ನಡದ ಕಾಯಕದ ಮೂಲಕ ಇಡೀ ನಾಡಿನಾದ್ಯಂತ ಚಿರಪರಿಚಿತವಾಗಿದೆ.
ಪೀಠಾಧಿಪತಿಗಳಾದ ಅಲ್ಲಮಪ್ರಭು ಸ್ವಾಮೀಜಿ ಕನ್ನಡ ನುಡಿ, ಗಡಿ, ಸಂಸ್ಕೃತಿ ಸಂರಕ್ಷಣೆ ಮತ್ತು ಸಂವರ್ಧನೆಯ ದೀಕ್ಷೆ ತೊಟ್ಟು ಕನ್ನಡದ ಅಸ್ಮಿತೆಯನ್ನು ಗಟ್ಟಿಗೊಳಿಸುವ ಕೈಂಕರ್ಯದಲ್ಲಿ ಕ್ರಿಯಾಶೀಲರಾಗಿದ್ದರು. ಪ್ರತಿ ವರ್ಷ ಕನ್ನಡ ರಾಜ್ಯೋತ್ಸವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಕನ್ನಡ ಜಾಗೃತಿಯುಂಟು ಮಾಡುತ್ತಿದ್ದರು. ಪ್ರತಿ ವರ್ಷ ನ.2 ರಂದು ಶ್ರೀಮಠದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಿ ಕನ್ನಡ ಪುಸ್ತಕ ಪ್ರಕಟಿಸಿ ಕನ್ನಡಿಗರಿಗೆ ಓದಲು ಕೊಡುತ್ತಿದ್ದರು. ಕನ್ನಡ ಎಂಬುದು ನಿತ್ಯೋತ್ಸವ ಆಗಬೇಕು ಎಂಬ ಕನಸನ್ನು ನನಸು ಮಾಡಿದ ಮಠವಿದು.
ಶ್ರೀಮಠದಿಂದ 45ಕ್ಕೂ ಹೆಚ್ಚು ಗ್ರಂಥಗಳ ಪ್ರಕಟಣೆ:
ಅಲ್ಲಮಪ್ರಭು ಜನಕಲ್ಯಾಣ ಸಂಸ್ಥೆಯ ಕನ್ನಡ ಜಾಗೃತಿ ಪುಸ್ತಕ ಮಾಲೆಯ ಮೂಲಕ ಇದುವರೆಗೆ ಆಧುನಿಕ ಕರ್ನಾಟಕದ ಆತಂಕಗಳು, ಕನ್ನಡತನ ಮತು ಭಾರತೀಯತೆ, ಮಹಾಜನ ವರದಿ ಒಂದು ಅವಲೋಕನ, ಕನ್ನಡದ ಕೋಟೆ ಕೆಎಲ್ಇ ಸಂಪ್ರದಾಯದ ಇತಿಹಾಸ, ರಂಗಭೂಮಿ-ಕನ್ನಡದ ಸಂವೇಧನೆ, ನಮ್ಮ ನಾಡು, ನುಡಿ ಮತ್ತು ಗಡಿ ಕನ್ನಡದ ಕಟ್ಟೋಣ, ಕರ್ನಾಟಕ ಏಕೀಕರಣ ಚಳವಳಿ, ಕನ್ನಡ-ಕನ್ನಡಿಗ, ಕರ್ನಾಟಕ ಏಕೀಕರಣ ಚಳವಳಿ ಮತ್ತು ಮಹಿಳೆ, ಮಹಾದಾಯಿ ನೀರಿಗಾಗಿ ಹೋರಾಟ ಮತ್ತು ಕನ್ನಡಕ್ಕೆ ಕೈ ಎತ್ತು…ಮೊದಲಾದ 45 ಕ್ಕೂ ಹೆಚ್ಚು ಮೌಲಿಕ ಗ್ರಂಥಗಳನ್ನು ಪ್ರಕಟಿಸಲಾಗಿದೆ.
ಮರಾಠಿಯ ಹಲವು ಕೃತಿಗಳನ್ನು ಕನ್ನಡಕ್ಕೆ ಅನುವಾದಿಸುವ ಮೂಲಕ ಕನ್ನಡ-ಮರಾಠಿ ಸಾಹಿತ್ಯ ಮತ್ತು ಸಂಸ್ಕೃತಿಕ ಬಾಂಧವ್ಯವನ್ನು ಹೆಚ್ಚಿಸಿದ್ದಾರೆ.
ಸ್ವಾಮೀಜಿಗಳು ಕನ್ನಡ ಪರವಾದ ಪುರಾತನ ದಾಖಲೆಗಳನ್ನು ಸಂಗ್ರಹಿಸುವಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು. ಕನ್ನಡದ ಇತಿಹಾಸ ತಿಳಿಸುವ ಅಪರೂಪದ ದಾಖಲೆಗಳನ್ನು ಸಂಗ್ರಹಿಸಿದ್ದರು. ದೇಶ-ವಿದೇಶ ಕರೆನ್ಸಿಗಳ ಸಂಗ್ರಹವೂ ಇವೆ. ಬೋನ್ಸಾಯ್ ಸಸ್ಯ ಬೆಳೆಸುವ ಹವ್ಯಾಸ ಹೊಂದಿದ್ದರು.
ಕನ್ನಡದ ತೇರು…
ಜಾತ್ರೆ-ಉತ್ಸವಗಳಲ್ಲಿ ರಥೋತ್ಸವ ನಡೆಸುವುದು ಸಾಮಾನ್ಯ. ಆದರೆ ಈ ಮಠದಲ್ಲಿ ಸ್ವಾಮೀಜಿ ಅವರು ಕನ್ನಡ ತೇರು ನಿರ್ಮಿಸಿ ಕಳೆದೊಂದು ದಶಕದಿಂದ ಸಿರಿಗನ್ನಡದ ತೇರು ಎಳೆಯುತ್ತಿದ್ದರು. ಅಪ್ಪಟ ಕನ್ನಡದ ರಥವಾಗಿರುವ ಇದರಲ್ಲಿ 32 ಸಾಹಿತಿಗಳ ಚಿತ್ರಗಳು ಮತ್ತು 16 ಕನ್ನಡದ ಘೋಷಣೆಗಳನ್ನು ಕೆತ್ತಲಾಗಿದೆ. ತೇರಿನ ಎಂಟು ಭಾಗಗಳಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಹಾಕಲಾಗಿದೆ. ಇದರ ನಡುವೆ ತಾಯಿ ಭುವನೇಶ್ವರಿ ಮೂರ್ತಿಯನ್ನು ಇರಿಸಿ ಪ್ರತಿ ವರ್ಷ ಯುಗಾದಿ ಹಬ್ಬದಂದು ತೇರನ್ನು ಎಳೆಯಲಾಗುತ್ತದೆ.
ಕಳೆದ 20 ವರ್ಷದಿಂದ ಪ್ರತಿ ವರ್ಷ ಮಠದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತಾ ಬರಲಾಗಿದೆ. ನಾಡಿನ ಖ್ಯಾತ ಸಾಹಿತಿಗಳು ಮತ್ತು ಕನ್ನಡದ ವಿದ್ವಾಂಸರನ್ನು ಕರೆಯಿಸಿ ಶ್ರೀಮಠವು ಮಾಡುವ ಕನ್ನಡದ ಕಾಯಕವನ್ನು ಪರಿಚಯ ಮಾಡಲಾಗುತ್ತದೆ. ಗಡಿ ಭಾಗದಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ ಜಾಗೃತಿ ಉಂಟು ಮಾಡಲು ಅಲ್ಲಮಪ್ರಭು ಸಿದ್ದಸಂಸ್ಥಾನ ಮಠ ಕೆಲಸ ಮಾಡುತ್ತಿದೆ.
ನಿಮ್ಮ ಕಾಮೆಂಟ್ ಬರೆಯಿರಿ