ಬೆಂಗಳೂರು :ಬೆಂಗಳೂರು : ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರ ನೀಡಿದ್ದ ಅನುಮೋದನೆ ಹಿಂಪಡೆದಿರುವ ರಾಜ್ಯ ಸರ್ಕಾರದ ಆದೇಶ ಸಲ್ಲಿಸಿರುವುದನ್ನು ಪರಿಗಣಿಸಿ ಕರ್ನಾಟಕ ಹೈಕೋರ್ಟ್ ಮೇಲ್ಮನವಿಯನ್ನು ಬುಧವಾರ ಇತ್ಯರ್ಥಪಡಿಸಿದೆಎಂದು ಬಾರ್ & ಬೆಂಚ್ ವರದಿ ಮಾಡಿದೆ.
ಸದ್ಯಕ್ಕೆ ಡಿ ಕೆ ಶಿವಕುಮಾರ ಅವರು ಸಿಬಿಐ ತನಿಖೆಯಿಂದ ನಿರಾಳರಾಗಿದ್ದಾರೆ. ಸಿಬಿಐ ತನಿಖೆಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ಎತ್ತಿ ಹಿಡಿದಿರುವ ಏಕಸದಸ್ಯ ಪೀಠದ ಆದೇಶ ಬದಿಗೆ ಸರಿಸಬೇಕು ಹಾಗೂ ಸಿಬಿಐ ತನಿಖೆಗೆ ಅನುಮೋದಿಸಿರುವ ರಾಜ್ಯ ಸರ್ಕಾರದ ಆದೇಶ ವಜಾ ಮಾಡಬೇಕು ಎಂದು ಕೋರಿ ಡಿ ಕೆ ಶಿವಕುಮಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ಈ ವೇಳೆ ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ನ್ಯಾಯಪೀಠಕ್ಕೆ ಮೆಮೊ ಮೂಲಕ ಸಲ್ಲಿಸಿದರು. ಅಲ್ಲದೆ ರಿಟ್ ಅರ್ಜಿ ಮತ್ತು ಮೇಲ್ಮನವಿಯನ್ನು ಹಿಂಪಡೆಯುವುದಾಗಿ ಡಿಕೆ ಶಿವಕುಮಾರ ಪರ ವಕೀಲರು ಲಿಖಿತ ಮೆಮೊ ಸಲ್ಲಿಸಿದರು.
“ನಮ್ಮ ಅಭಿಪ್ರಾಯದ ಪ್ರಕಾರ ಇಲ್ಲಿಯವರೆಗೆ ಸಿಬಿಐ ತನಿಖೆಗೆ ಅನುಮೋದನೆ ನೀಡಿರುವುದನ್ನು ರಾಜ್ಯ ಸರ್ಕಾರ ಹಿಂಪಡೆದಿರುವ ಬಗ್ಗೆ ಪ್ರಶ್ನಿಸಲಾಗಿಲ್ಲ. ಹೀಗಾಗಿ, ಸಿಬಿಐ ಮತ್ತು ಬಸನಗೌಡ ಪಾಟೀಲ ಯತ್ನಾಳ (ಮಧ್ಯಪ್ರವೇಶಿಕೆ ಕೋರಿ ಅರ್ಜಿ ಸಲ್ಲಿಸಿದ್ದರು) ವಾದವನ್ನು ಪರಿಗಣಿಸಲಾಗುವುದಿಲ್ಲ. ಮೇಲ್ಮನವಿದಾರರು ರಿಟ್ ಅರ್ಜಿ ಮತ್ತು ಮೇಲ್ಮನವಿ ಹಿಂಪಡೆಯಲು ಅನುಮತಿ ಕೋರಿರುವುದಕ್ಕೆ ಸಮ್ಮತಿಸಿದ್ದು, ಅರ್ಜಿ ಇತ್ಯರ್ಥಪಡಿಸಲಾಗಿದೆ” ಎಂದು ನ್ಯಾಯಾಲಯವು ಆದೇಶದಲ್ಲಿ ದಾಖಲಿಸಿದೆ.
ಸಿಬಿಐ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನಕುಮಾರ ಅವರು “ರಿಟ್ ಅರ್ಜಿ ಮತ್ತು ರಿಟ್ ಮೇಲ್ಮನವಿ ಹಿಂಪಡೆಯುವುದಾಗಿ ಮೇಲ್ಮನವಿದಾರರ ಪರ ವಕೀಲರು ಹೇಳಿದ್ದಾರೆ. ರಿಟ್ ಅರ್ಜಿ ಹಿಂಪಡೆಯುವುದಕ್ಕೆ ನಮ್ಮ ಆಕ್ಷೇಪವಿದೆ. ಮೇಲ್ಮನವಿ ಹಿಂಪಡೆಯುವುದಕ್ಕೆ ಆಕ್ಷೇಪವಿಲ್ಲ. ಎಫ್ಐಆರ್ ಅನ್ನು ಸರ್ಕಾರ ಹಿಂಪಡೆಯಲಾಗದು. ನ್ಯಾಯಾಲಯ ಮಾತ್ರ ಸಿಆರ್ಪಿಸಿ ಸೆಕ್ಷನ್ 482ರ ಅಡಿ ಎಫ್ಐಆರ್ ವಜಾ ಮಾಡಬಹುದು” ಎಂದರು.
“2019ರ ಸೆಪ್ಟೆಂಬರ್ 25ರಂದು ಸಿಬಿಐಗೆ ನೀಡಿರುವ ಅನುಮೋದನೆಯ ಭಾಗವಾಗಿ ಎಫ್ಐಆರ್ ದಾಖಲಿಸಿ, ಪ್ರಕ್ರಿಯೆ ನಡೆಸಲಾಗುತ್ತಿದೆ. ಭಾಗಶಃ ತನಿಖೆಯು ನಡೆದಿದೆ. 1994ರಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಆಧರಿಸಿದ್ದು, ರಾಜ್ಯ ಸರ್ಕಾರ ಅನುಮತಿ ಹಿಂಪಡೆಯಬಾರದು. ಇದನ್ನು ಒಪ್ಪಲಾಗದು, ಅದು ಊರ್ಜಿತವಾಗುವುದಿಲ್ಲ” ಎಂದು ವಾದಿಸಿದರು.
ಇದಕ್ಕೆ ಪೀಠವು “ನೀವು (ಸಿಬಿಐ) ಎಫ್ಐಆರ್ ವಿಚಾರದಲ್ಲಿ ಮುಂದುವರಿಯಬಹುದು. ಕಾನೂನಿನಲ್ಲಿ ಅನುಮತಿ ಇದ್ದರೆ ನೀವು ಮುಂದುವರಿಯಬಹುದು ಎಂದಿತು.
ಮೇಲ್ಮನವಿದಾರ ಡಿಕೆಶಿ ಪ್ರತಿನಿಧಿಸಿದ್ದ ಹಿರಿಯ ವಕೀಲರಾದ ಡಾ. ಅಭಿಷೇಕ್ ಮನು ಸಿಂಘ್ವಿ ಮತ್ತು ಉದಯ್ ಹೊಳ್ಳ ಅವರು “ರಾಜ್ಯ ಸರ್ಕಾರವು ನವೆಂಬರ್ 28ರಂದು ಸಿಬಿಐಗೆ ನೀಡಿದ್ದ ಅನುಮೋದನೆ ಹಿಂಪಡೆದು ಆದೇಶ ಮಾಡಿದೆ. ಹೀಗಾಗಿ, ರಿಟ್ ಅರ್ಜಿಯು ಅಮಾನ್ಯಗೊಂಡಿದೆ. ಈ ನೆಲೆಯಲ್ಲಿ ರಿಟ್ ಅರ್ಜಿ ಮತ್ತು ರಿಟ್ ಮೇಲ್ಮನವಿ ಹಿಂಪಡೆಯಲು ಅನುಮತಿಸಬೇಕು” ಎಂದು ಕೋರಿದರು. ಇದನ್ನು ನ್ಯಾಯಾಲಯ ಪುರಸ್ಕರಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ