ಚಿಕ್ಕಮಗಳೂರಲ್ಲಿ ವಕೀಲನ ಮೇಲೆ ಹಲ್ಲೆ: ಪಿಎಸ್‌ಐ ಸೇರಿ 6 ಪೊಲೀಸರ ಅಮಾನತು

ಚಿಕ್ಕಮಗಳೂರು : ಹೆಲ್ಮೆಟ್‌ ಧರಿಸದ ವಕೀಲರೊಬ್ಬರನ್ನು ಪೊಲೀಸರು ಮನಸೋಇಚ್ಛೆ ಥಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ವಕೀಲ ಸಮುದಾಯ ಶುಕ್ರವಾರ ಭಾರೀ ಪ್ರತಿಭಟನೆ ನಡೆಸಿದ್ದು ಇದೇ ವೇಳೆ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಮಹೇಶ್‌ ಪೂಜಾರಿ ಸೇರಿದಂತೆ ಆರು ಆರಕ್ಷಕ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ವಿಚಾರಣೆ ನಡೆಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಂ ಅಮ್ಟೆ ಅಮಾನತು ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು “ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಪಿಎಸ್‌ಐ, ಎಎಸ್‌ಐ, ಹೆಡ್‌ ಕಾನ್‌ಸ್ಟೇಬಲ್‌ ಹಾಗೂ ಮೂವರು ಪೇದೆಗಳನ್ನು ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.
ಗಾಯಗೊಂಡ ವಕೀಲರಾದ ಪ್ರೀತಮ್‌ ಅವರನ್ನು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ವಕೀಲ ಪ್ರೀತಂ ಅವರು ಗುರುವಾರ ರಾತ್ರಿ ಹೆಲ್ಮೆಟ್‌ ಇಲ್ಲದೆ ಮಾರ್ಕೇಟ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಠಾಣೆಯ ಎದುರು ತಡೆದ ಪೊಲೀಸರು, ಅವರ ಬೈಕ್‌ನಿಂದ ಕೀ ಕಸಿದುಕೊಂಡಿದ್ದಾರೆ. ‘ಹೆಲ್ಮೆಟ್ ಹಾಕದಿರುವುದಕ್ಕೆ ದಂಡ ಕಟ್ಟುತ್ತೇನೆ, ಕೀ ಕಸಿದುಕೊಳ್ಳಲು ಅಧಿಕಾರವಿದೆಯೇ ಎಂದು ‍ಪ್ರೀತಂ ಪ್ರಶ್ನಿಸಿದ್ದಾರೆ. ಅಲ್ಲದೇ ಅದನ್ನು ವೀಡಿಯೊ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ನಂತರ ವಕೀಲರ ಸಂಘದ ಕಚೇರಿಯಲ್ಲಿ ಬೆಳಿಗ್ಗೆ ತುರ್ತು ಸಭೆ ನಡೆಸಿದ ಸಾವಿರಾರು ವಕೀಲರು, ನ್ಯಾಯಾಲಯ ಕಲಾಪಗಳಿಂದ ದೂರ ಉಳಿಯಲು ತೀರ್ಮಾನಿಸಿದರು.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ವಕೀಲ ಪ್ರೀತಮ್ ದಂಡ ಕಟ್ಟುತ್ತೇನೆ ಎಂದು ಹೇಳಿದರೂ ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಠಾಣೆಗೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ ಎಂದು ವಕೀಲ ಸಮುದಾಯ ದೂರಿದೆ. ಗುರುವಾರ ತಡರಾತ್ರಿ 2 ಗಂಟೆಯಿಂದಲೇ ಪೊಲೀಸ್‌ ಠಾಣೆ ಎದುರು ವಕೀಲರು ಧರಣಿ ನಡೆಸಿದ್ದರು.
ಶುಕ್ರವಾರ ಬೆಳಿಗ್ಗೆ ನಗರದ ಆಜಾದ್‌ ಪಾರ್ಕ್‌ ವೃತ್ತ, ಮಹಾತ್ಮ ಗಾಂಧಿ ರಸ್ತೆ ಹಾಗೂ ಐಜಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಅಪಾರ ಸಂಖ್ಯೆಯ ವಕೀಲರು ನಗರ ಠಾಣೆ ಎದುರು ಕೂಡ ಆಕ್ರೋಶ ವ್ಯಕ್ತಪಡಿಸಿದರು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement