ನವದೆಹಲಿ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಬರೆದ ಪೋಸ್ಟ್ಗಳನ್ನು ಡಿಲೀಟ್ ಮಾಡುವಂತೆ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಕ್ರಿಮಿನಲ್ ಕೇಸ್ ಗಳನ್ನು ರದ್ದುಗೊಳಿಸುವಂತೆ ಕೋರಿ ರೂಪಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಭಯ ಎಸ್. ಓಕಾ ಮತ್ತು ಪಂಕಜಮಿಥಾಲ್ ಅವರಿದ್ದ ಪೀಠವು ಸಿಂಧೂರಿ ವಿರುದ್ಧ ಬರೆದಿರುವ ಪೋಸ್ಟ್ ಅನ್ನು ಡಿಲೀಟ್ ಮಾಡಲು ಇಷ್ಟವಿಲ್ಲದಿದ್ದರೆ ತಮ್ಮ ಬರಹವನ್ನು ವಾಪಸ್ ಪಡೆದಿರುವುದಾಗಿ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಬರೆದು ಹಾಕಬೇಕು ಎಂದು ಸೂಚನೆ ನೀಡಿದೆ.
ಈ ವರ್ಷದ ಆರಂಭದಲ್ಲಿ ರೂಪಾ ಅವರು ಸಿಂಧೂರಿ ಅವರ ಕೆಲವು ವೈಯಕ್ತಿಕ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ನಂತರ ಮತ್ತು ಅವರ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡಿದ ನಂತರ ಇಬ್ಬರು ಕರ್ನಾಟಕದ ಅಧಿಕಾರಿಗಳು ಸಾರ್ವಜನಿಕವಾಗಿ ಜಗಳದಲ್ಲಿ ಭಾಗಿಯಾಗಿದ್ದರು. ಸಿಂಧೂರಿ ನಂತರ ರೂಪಾ ವಿರುದ್ಧ ಮಾನನಷ್ಟಕ್ಕಾಗಿ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಿದ್ದರು. ಈ ಇಬ್ಬರು ಅಧಿಕಾರಿಗಳ ವಾಗ್ವಾದ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದು ಸರ್ಕಾರಕ್ಕೂ ಮುಜುಗರ ತಂದೊಡ್ಡಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಇಬ್ಬರು ಅಧಿಕಾರಿಗಳಿಗೆ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳುವಂತೆ ತಿಳಿಸಿತ್ತು. ಆದರೆ ಅದು ವಿಫಲವಾದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳು ಖುದ್ದು ವಿಚಾರಣೆಗೆ ಹಾಜರಾಗಿದ್ದರು. ಇದಾದ ಬಳಿಕ ಕೋರ್ಟ್ ಮಧ್ಯ ಪ್ರವೇಶಿಸಿ 24 ಗಂಟೆಯೊಳಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಗಳನ್ನು ಡಿಲಿಟ್ ಮಾಡಿ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸುವಂತೆ ಮೌಖಿಕ ಸೂಚನೆ ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ