ಶಿವಮೊಗ್ಗ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಜಿಲ್ಲೆಯ ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ ಗ್ರಾಂ ಪಂಚಾಯತದ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಇತರೆ ಶಿಕ್ಷಕರು ವಿದ್ಯಾರ್ಥಿಗಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ ಎನ್ನಲಾಗಿದೆ. ಈ ಆಘಾತಕಾರಿ ಘಟನೆ ಕಳೆದ ವಾರ ನಡೆದಿತ್ತು ಆದರೆ ಈ ವೀಡಿಯೊ ಈಗ ಬಹಿರಂಗವಾಗಿದೆ. ಶಾಲೆಯು ಆರನೇ ತರಗತಿಯಿಂದ ವಿದ್ಯಾರ್ಥಿಗಳಿಗೆ ನೀರನ್ನು ಸುರಿಯುವಂತೆ ಸೂಚಿಸಲಾಗಿತ್ತು. ಮತ್ತು ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ ಸೂಚಿಸಿರಲಿಲ್ಲ ಎಂದು ಹೇಳಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಶಿಕ್ಷಣ ಇಲಾಖೆಯು ಮುಖ್ಯ ಶಿಕ್ಷಕರಾದ ಶಂಕರಪ್ಪ ಅವರನ್ನು ಅಮಾನತು ಮಾಡಿದೆ ಎಂದು ವರದಿಯಾಗಿದೆ. ಕರ್ನಾಟಕದಲ್ಲಿ ಈ ತಿಂಗಳಲ್ಲೇ ಇದು ಮೂರನೇ ಘಟನೆಯಾಗಿದೆ.
ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಮಕ್ಕಳನ್ನು ದುರ್ಬಳಕೆ ಮಾಡಿದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಪೋಷಕರು ಆಗ್ರಹಿಸಿದ್ದಾರೆ.
ಈ ಹಿಂದೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಕ್ಲೀನ್ ಮಾಡಿಸಿದ್ದ ಅಮಾನವೀಯ ಘಟನೆ ನಡೆದಿತ್ತು. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ರಾಜ್ಯದೆಲ್ಲೆಡೆ ರಾಜಕೀಯ ಗ್ರಾಸವಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ