ಬಂಧಿತ ಶ್ರೀಕಾಂತ ಪೂಜಾರಿ ಕರಸೇವಕನಲ್ಲ, ಆತನ ವಿರುದ್ಧ 16 ಪ್ರಕರಣಗಳಿವೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನ ಖಂಡಿಸಿ ಬಿಜೆಪಿಯ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು, ಬಂಧಿತ ವ್ಯಕ್ತಿ ಕರಸೇವಕನಲ್ಲ ಮತ್ತು ಆತನ ವಿರುದ್ಧ 16 ಪೊಲೀಸ್ ಪ್ರಕರಣಗಳಿವೆ ಎಂದು ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀಕಾಂತ ಪೂಜಾರಿ ಎಂಬ ವ್ಯಕ್ತಿಯನ್ನು ಪೊಲೀಸರು ದಾಖಲಿಸಿರುವ ಎಫ್‌ಐಆರ್ ಮತ್ತು ಇತರ ದಾಖಲೆಗಳಲ್ಲಿ ಕರಸೇವಕ ಎಂದು ಉಲ್ಲೇಖಿಸಿಲ್ಲ ಎಂದು ಅವರು ತಿಳಿಸಿದ್ದಾರೆ.
ಆತನ ವಿರುದ್ಧ 16 ಪ್ರಕರಣಗಳಿವೆ. ಅವುಗಳಲ್ಲಿ ಕೆಲವು ಪ್ರಕರಣಗಳು ಹೊರ ಬಂದಿವೆ. ಕಾನೂನು ಪಾಲನೆ ಮಾಡದ ಹಾಗೂ 16 ಪ್ರಕರಣಗಳಲ್ಲಿ ಆರೋಪಿಯಾಗಿರುವ ವ್ಯಕ್ತಿಯನ್ನು ಬೆಂಬಲಿಸುತ್ತಿರುವ ಬಿಜೆಪಿಗೆ ಏನಾಗಿದೆಯೋ ಗೊತ್ತಿಲ್ಲ’ ಎಂದು ಬಿಜೆಪಿಗೆ ಟಾಂಗ್‌ ನೀಡಿದ್ದಾರೆ.

‘ಹಳೆಯ ಪ್ರಕರಣಗಳನ್ನು ತೆರವುಗೊಳಿಸುವಂತೆ ಆದೇಶ ನೀಡಿದ ನಂತರ ಅವುಗಳನ್ನು ಪರಿಶೀಲಿಸುವಾಗ ಪೂಜಾರಿ ಪ್ರಕರಣ ಬೆಳಕಿಗೆ ಬಂದಿದೆ. 31 ವರ್ಷಗಳ ನಂತರ ಏಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಪ್ರಶ್ನೆ ಬರುವುದು ಸಹಜ. ಆದರೆ, ಬಿಜೆಪಿ ಸರ್ಕಾರದ ನಾಲ್ಕು ವರ್ಷಗಳ ಆಡಳಿತದಲ್ಲಿ ಅಥವಾ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರದಲ್ಲಿದ್ದಾಗ ಈ ಪ್ರಕರಣಗಳನ್ನು ಹಿಂಪಡೆಯಬಹುದಿತ್ತು. ಆಗ ಅವರೂ ಏನೂ ಮಾಡಿಲ್ಲ. ಇದಕ್ಕೆ ಯಾರನ್ನು ದೂಷಿಸಬೇಕು ಎಂಬುದು ಪ್ರಶ್ನೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಪ್ರಚೋದನಾಕಾರಿ ವೀಡಿಯೊ : ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ನಡ್ಡಾ, ವಿಜಯೇಂದ್ರಗೆ ಪೊಲೀಸ್‌ ನೋಟಿಸ್‌

ಕರಸೇವಕರ ಪಟ್ಟಿ ನೀಡುವುದಾಗಿ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಸಾಮರ್ಥ್ಯವಿದ್ದರೆ ಅವರನ್ನು ಬಂಧಿಸಲಿ ಎಂದು ಬಿಜೆಪಿ ಶಾಸಕ ವಿ ಸುನೀಲಕುಮಾರ ಮಾಡಿದ ಸವಾಲಿಗೆ ಪ್ರತಿಕ್ರಿಯಿಸಿದ ಅವರು, ಇದು ಜನರಿಂದ ಆಯ್ಕೆಯಾದ ಸರ್ಕಾರ. ಶಕ್ತಿ, ಸಾಮರ್ಥ್ಯ ಮತ್ತು ಅಧಿಕಾರವನ್ನು ಜನರು ನೀಡಿದ್ದಾರೆ. ಸರ್ಕಾರ ಕಾನೂನು ಪ್ರಕಾರ ಕಾರ್ಯನಿರ್ವಹಿಸುತ್ತದೆ ಎಂದರು.
ಹುಬ್ಬಳ್ಳಿಯಲ್ಲಿ ಡಿ. 5, 1992 ರಂದು ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು ಶ್ರೀಕಾಂತ ಪೂಜಾರಿಯನ್ನು ಬಂಧಿಸಿದ್ದಾರೆ. ಪೂಜಾರಿ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇತರ ಎಂಟು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಶ್ರೀಕಾಂತ ಪೂಜಾರಿ ಬಂಧನ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು ಸರ್ಕಾರ ಮತ್ತು ಪ್ರತಿಪಕ್ಷಗಳ ಮಧ್ಯೆ ವಾಗ್ಯುದ್ಧಕ್ಕೆ ಕಾರಣವಾಗಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement