ಹಿರೇಮಗಳೂರು ಕಣ್ಣನ್‌ಗೆ ನೋಟಿಸ್: ಹಿಂಪಡೆಯಲು ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು : ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್‌ ಹಿಂಪಡೆಯಲು ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಚಿಕ್ಕಮಗಳೂರಿನ ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಾಗೂ ಸಾಹಿತಿ ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಮಾಡಬೇಕು ಎಂದು ರಾಜ್ಯ ಸರ್ಕಾರ ಅವರಿಗೆ ನೋಟಿಸ್ ನೀಡಿತ್ತು.
ನೋಟೀಸ್‌ ನೀಡಿದ್ದರ ಕುರಿತು ಪ್ರತಿಕ್ರಿಯೆ ನೀಡಿದ ರಾಮಲಿಂಗಾರೆಡ್ಡಿ ಅವರು, ಸ್ಥಳೀಯ ತಹಶೀಲ್ದಾರರ ತಪ್ಪು ತೀರ್ಮಾನದಿಂದ ನೋಟಿಸ್ ಜಾರಿಯಾಗಿದೆ. ನೋಟಸ್‌ ಹಿಂಪಡೆಯಲು ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದರು.

ಕನ್ನಡದಲ್ಲೇ ಮಂತ್ರ ಪಠಣ ಮಾಡಿ ಅರ್ಚನೆ ಮಾಡುವ ಮೂಲಕ ರಾಜ್ಯದ ಜನರ ಗಮನ ಸೆಳೆದಿದ್ದ ಹಿರೇಮಗಳೂರು ಕಣ್ಣನ್ ಅವರಿಗೆ ಜಿಲ್ಲಾಡಳಿತ ವೇತನ ವಾಪಸ್ ಕೇಳಿ ನೋಟಿಸ್ ಜಾರಿ ಮಾಡಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ನಂತರ ಸಚಿವರ ಪ್ರತಿಕ್ರಿಯೆ ಬಂದಿದೆ.

ಹಿರೇಮಗಳೂರು ಕಣ್ಣನ್ ಅವರು ಕಳೆದ 44 ವರ್ಷಗಳಿಂದ ಹಿರೇಮಗಳೂರು ಗ್ರಾಮದ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 7,500 ರೂ. ವೇತನ ನೀಡುತ್ತಿತ್ತು. ಆದರೆ, ದೇವಾಲಯದ ಆದಾಯ ಕಡಿಮೆ‌ ಇದೆ ಎಂಬ ಕಾರಣ ನೀಡಿ ಈ ಹಿಂದೆ ನೀಡಿದ್ದ 7500 ರೂ. ವೇತನದಲ್ಲಿ 4500 ರೂ. ಅನ್ನು ವಾಪಸ್ ನೀಡುವಂತೆ ಸೂಚಿಸಲಾಗಿತ್ತು. 4500 ರೂಪಾಯಿಯಂತೆ 10 ವರ್ಷದ 4,74,000 ರೂ. ಹಣವನ್ನು ವಾಪಸ್ ನೀಡುವಂತೆ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿತ್ತು. ಅಲ್ಲದೆ, ಡಿಸೆಂಬರ್ ತಿಂಗಳ ವೇತನವನ್ನು ತಡೆ ಹಿಡಿದು ತಹಶೀಲ್ದಾರ್ ನೋಟಿಸ್​ ನೀಡಿದ್ದರು.

ಪ್ರಮುಖ ಸುದ್ದಿ :-   ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ ; ಪರಿಷತ್‌ ಸದಸ್ಯ ರವಿಕುಮಾರಗೆ ನಿರೀಕ್ಷಣಾ ಜಾಮೀನು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement