ಧರ್ಮಪುರಿ : ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ತೊಪ್ಪೂರ್ ಘಾಟ್ ರಸ್ತೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ.
ಸಿಸಿಟಿವಿ ವೀಡಿಯೊದಲ್ಲಿ ಟ್ರಕ್ ಸೇರಿದಂತೆ ನಾಲ್ಕು ವಾಹನಗಳು ಒಂದಕ್ಕೊಂದು ಗುದ್ದಿಕೊಂಡ ನಂತರ ಈ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಟ್ರಕ್ ಮತ್ತೊಂದು ಟ್ರಕ್ಗೆ ಡಿಕ್ಕಿ ಹೊಡೆದಿರುವುದನ್ನು ದೃಶ್ಯಗಳು ತೋರಿಸಿವೆ. ಪರಿಣಾಮ ಎರಡು ಟ್ರಕ್ಗಳ ನಡುವೆ ಸಿಲುಕಿದ ಕಾರು ನಜ್ಜುಗುಜ್ಜಾಗಿದ್ದು, ಮತ್ತೊಂದು ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಡಿಕ್ಕಿಯ ನಂತರ ಒಂದು ಟ್ರಕ್ಗೆ ಬೆಂಕಿ ಹೊತ್ತಿಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಘಟನೆಯಲ್ಲಿ ಕನಿಷ್ಠ ನಾಲ್ಕು ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ, ಅಲ್ಲದೆ ಎಂಟು ಮಂದಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಅಪಘಾತದ ನಂತರ, ಧರ್ಮಪುರಿ ಡಿಎಂಕೆ ಸಂಸದ ಸೆಂಥಿಲಕುಮಾರ ಪ್ರತಿಕ್ರಿಯಿಸಿ, ಹೆದ್ದಾರಿ ಅಗಲೀಕರಣ ಪೂರ್ಣಗೊಳ್ಳದಿರುವುದೇ ಅಪಘಾತಕ್ಕೆ ಕಾರಣವಾಗಿದೆ ಆದಷ್ಟು ಬೇಗ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಕೇಂದ್ರಕ್ಕೆ ಒತ್ತಾಯಿಸಿದ್ದಾರೆ. “ಧರ್ಮಪುರಿಯಲ್ಲಿ ತೋಪ್ಪೂರು ಘಾಟ್ ವಿಭಾಗದಲ್ಲಿ ಮಂಜೂರಾದ ಎಲಿವೇಟೆಡ್ ಹೆದ್ದಾರಿಯ ತ್ವರಿತ ಅನುಷ್ಠಾನಕ್ಕೆ ನಾವು ಒತ್ತಾಯಿಸುತ್ತಿದ್ದೇವೆ” ಎಂದು ಅವರು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ