ಪ್ರಜಾಪ್ರಭುತ್ವವನ್ನು ಈ ರೀತಿ ಕಗ್ಗೊಲೆ ಮಾಡಲು ಬಿಡುವುದಿಲ್ಲ: ಚಂಡೀಗಢ ಮೇಯರ್ ಚುನಾವಣೆ ಬಗ್ಗೆ ಸುಪ್ರೀಂ ಕೋರ್ಟ್‌ ಸಿಡಿಮಿಡಿ

ನವದೆಹಲಿ: ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್‌ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಮತಪತ್ರವನ್ನು ವಿರೂಪಗೊಳಿಸಿದ ಚುನಾವಣಾಧಿಕಾರಿಯನ್ನು ಕಾನೂನುರೀತ್ಯಾ ವಿಚಾರಣೆಗೆ ಒಳಪಡಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ. ಚುನಾವಣಾಧಿಕಾರಿಯು ಮತಪತ್ರ ವಿರೂಪಗೊಳಿಸುವುದನ್ನು ವೀಡಿಯೊದಲ್ಲಿ ಸ್ಪಷ್ಟವಾಗಿ ಕಾಣಬಹುದಾಗಿದೆ ಎಂದು ನ್ಯಾಯಾಲಯ ವಿಚಾರಣೆ ವೇಳೆ ಹೇಳಿತು.
ಮೇಯರ್ ಚುನಾವಣೆಯಲ್ಲಿ ಸೋತ ಆಮ್ ಆದ್ಮಿ ಪಕ್ಷದ (ಎಎಪಿ) ಕೌನ್ಸಿಲರ್ ಕುಲದೀಪಕುಮಾರ ಅವರು ಕಾಂಗ್ರೆಸ್-ಎಎಪಿ ಮೈತ್ರಿಕೂಟದ ಕೌನ್ಸಿಲರ್‌ಗಳ ಎಂಟು ಬ್ಯಾಲೆಟ್ ಪೇಪರ್‌ಗಳನ್ನು ಆರ್‌ಒ ಅವು ಅಮಾನ್ಯವಾಗಿದೆ ಎಂದು ಕಸಿದುಕೊಂಡಿದ್ದಾರೆ ಎಂಬ ಆರೋಪವನ್ನು ಪರಿಗಣಿಸಿದ ನಂತರ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದ ಚುನಾವಣಾ ಫಲಿತಾಂಶಕ್ಕೆ ತಕ್ಷಣ ತಡೆ ನೀಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ ಪಾಲಿಕೆ ಸದಸ್ಯ ಕುಲದೀಪಕುಮಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಚುನಾವಣಾಧಿಕಾರಿಯ ಈ ನಡವಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ, ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಹಾಗೂ ಮನೋಜ ಮಿಶ್ರಾ ಅವರನ್ನೊಳಗೊಂಡ ಪೀಠ ‘ಇದು ಪ್ರಜಾಪ್ರಭುತ್ವದ ಅಣಕ’ ಎಂದು ತರಾಟೆಗೆ ತೆಗೆದುಕೊಂಡಿತು.
“ಅಧಿಕಾರಿ ಮತಪತ್ರ ವಿರೂಪಗೊಳಿಸಿರುವುದು ಸ್ಪಷ್ಟವಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಅವರು ಯಾಕೆ ಕ್ಯಾಮೆರಾ ನೋಡುತ್ತಿದ್ದಾರೆ? ಮಾನ್ಯ ಸಾಲಿಸಿಟರ್‌ (ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರನ್ನುದ್ದೇಶಿಸಿ) ಅವರೇ ಇದು ಪ್ರಜಾಪ್ರಭುತ್ವದ ಅಣಕವಾಗಿದ್ದು ಅದರ ಕಗ್ಗೊಲೆಯಾಗಿದೆ. ನಾವು ದಿಗ್ಭ್ರಮೆಗೊಂಡಿದ್ದೇವೆ. ಇದು ರಿಟರ್ನಿಂಗ್‌ ಅಧಿಕಾರಿ ನಡೆದುಕೊಳ್ಳುವ ರೀತಿಯೇ? ಕೆಳಭಾಗದಲ್ಲಿ ಕ್ರಾಸ್‌ ಚಿಹ್ನೆ (ಮತ ಹಾಕಿರುವ ಗುರುತು) ಇರುವೆಡೆ ಅದನ್ನು ಅವರು ಮುಟ್ಟುವುದಿಲ್ಲ ಆದರೆ ಅದು ಮೇಲ್ಭಾಗದಲ್ಲಿದ್ದಾಗ ಆತ ತಿರುಚುತ್ತಾನೆ. ಸುಪ್ರೀಂ ಕೋರ್ಟ್‌ ಆತನನ್ನು ಗಮನಿಸುತ್ತಿದೆ ಎಂಬುದನ್ನು ದಯವಿಟ್ಟು ಆ ಚುನಾವಣಾಧಿಕಾರಿಗೆ ತಿಳಿಸಿ” ಎಂದು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : ಕಾಂಗ್ರೆಸ್​​​ಗೆ ಮತ್ತೊಂದು ಶಾಕ್ ; ಸ್ಪರ್ಧಿಸಲು ನಿರಾಕರಿಸಿ ಟಿಕೆಟ್‌ ವಾಪಸ್‌ ಮಾಡಿದ ಕಾಂಗ್ರೆಸ್​​ ಅಭ್ಯರ್ಥಿ...!

ಈ ಹಿನ್ನೆಲೆಯಲ್ಲಿ ರಿಟರ್ನಿಂಗ್‌ ಅಧಿಕಾರಿ ಅನಿಲ ಮಸೀಹ್‌ಗೆ ನೋಟಿಸ್‌ ಜಾರಿ ಮಾಡಿದ ನ್ಯಾಯಾಲಯ ಮೇಯರ್‌ ಚುನಾವಣೆಯ ಸಂಪೂರ್ಣ ದಾಖಲೆಗಳನ್ನು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಸಲ್ಲಿಸುವಂತೆ ತಾಕೀತು ಮಾಡಿತು. ಅಲ್ಲದೆ ತನ್ನ ನಡೆಯನ್ನು ವಿವರಿಸಲು ಮುಂದಿನ ವಿಚಾರಣೆ ದಿನದಂದು ಅನಿಲ ಮಸೀಹ್‌ ನ್ಯಾಯಾಲಯಕ್ಕೆ ಹಾಜರಿರಬೇಕು ಎಂದು ಅದು ಸೂಚಿಸಿತು.ಹಾಗೂ ಪಾಲಿಕೆಯ ಎಲ್ಲಾ ಚಟುವಟಿಕೆಗಳನ್ನು ನ್ಯಾಯಾಲಯ ಸದ್ಯಕ್ಕೆ ತಡೆಹಿಡಿದಿದೆ.
ಫೆಬ್ರವರಿ 7ರಂದು ಚಂಡೀಗಢ ಪಾಲಿಕೆ ನಡೆಸಬೇಕಿದ್ದ ಸಭೆಯನ್ನು ಮುಂದಿನ ದಿನಾಂಕದವರೆಗೆ ಮುಂದೂಡಬೇಕು. ಸೋಮವಾರ ಸಂಜೆ 5 ಗಂಟೆಯೊಳಗೆ ದಾಖಲೆಗಳನ್ನು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಹಸ್ತಾಂತರಿಸಿ. ಮುಂದಿನ ಸೋಮವಾರದೊಳಗೆ ಪ್ರಕರಣವನ್ನು ಪಟ್ಟಿ ಮಾಡಿ” ಎಂದು ನ್ಯಾಯಾಲಯ ಆದೇಶಿಸಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement