ಬೆಂಗಳೂರು: 2022ರ ಏಪ್ರಿಲ್ನಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ಕರ್ನಾಟಕ ಹೈಕೋರ್ಟ್ 10,000 ರೂಪಾಯಿ ದಂಡ ವಿಧಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸಂಪುಟದ ಸಚಿವರಾದ ಎಂ.ಬಿ.ಪಾಟೀಲ, ರಾಮಲಿಂಗಾರೆಡ್ಡಿ ಹಾಗೂ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ ಅವರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸೂಚಿಸಿದೆ.
ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ, ಮಾರ್ಚ್ 7 ರಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, 11 ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಆರ್ ಎಸ್ ಸುರ್ಜೇವಾಲಾ ಮತ್ತು ಮಾರ್ಚ್ 15 ರಂದು ಭಾರೀ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರಿಗೆ ಹಾಜರಾಗುವಂತೆ ಸೂಚಿಸಿದೆ.
ಈ ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ ವಾಟ್ಸಾಪ್ ಸಂದೇಶದಲ್ಲಿ ಆಗಿನ ಸಚಿವ ಕೆ.ಎಸ್. ಈಶ್ವರಪ್ಪ ಅವರ ಹೆಸರನ್ನು ಉಲ್ಲೇಖ ಮಾಡಲಾಗಿತ್ತು. ಹೀಗಾಗಿ ನೈತಿಕ ಹೊಣೆ ಹೊತ್ತು ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ 2022ರ ಏಪ್ರಿಲ್ 14ರಂದು ಬೆಂಗಳೂರಿನ ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಿದ್ದರು. ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಅಡಿ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಪ್ರತಿಭಟನೆ ಸಂಬಂಧ ದಾಖಲಾಗಿದ್ದ ಪ್ರಕರಣವನ್ನು ವಜಾ ಮಾಡಲು ಮಂಗಳವಾರ ನಿರಾಕರಿಸಿರುವ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠವು ಅರ್ಜಿಯನ್ನು ವಜಾ ಮಾಡಿದೆ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಂ ಬಿ ಪಾಟೀಲ, ರಾಮಲಿಂಗಾರೆಡ್ಡಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರಿಗೆ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆದೇಶ ಮಾಡಿದೆ.
ಅರ್ಜಿದಾರರು ಅಧೀನ ನ್ಯಾಯಾಲಯಕ್ಕೆ ಒಂದೇ ದಿನ ಹೋದರೆ ಗದ್ದಲವಾಗುತ್ತದೆ ಎಂಬ ಹಿನ್ನೆಲೆಯಲ್ಲಿ ವಿಭಿನ್ನ ದಿನಾಂಕಗಳನ್ನು ನಿಗದಿಪಡಿಸಿದ್ದೇನೆ. ನಿಗದಿಪಡಿಸಿರುವ ದಿನದಂದು ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾಗಿ ಆದೇಶ ಪಡೆಯಬಹುದು” ಎಂದು ಪೀಠ ಹೇಳಿದೆ.
ಸಿದ್ದರಾಮಯ್ಯ ಮಾರ್ಚ್ 6ರಂದು, ರಣದೀಪ್ ಸುರ್ಜೇವಾಲಾ ಅವರು ಮಾರ್ಚ್ 7ರಂದು, ಎಂ ಬಿ ಪಾಟೀಲ್, ರಾಮಲಿಂಗಾ ರೆಡ್ಡಿ ಅವರು ಮಾರ್ಚ್ 15ರಂದು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ, ಆದೇಶ ಪಡೆಯಬೇಕು” ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.
“ಎಲ್ಲಾ ಅರ್ಜಿದಾರರು ತಲಾ 10 ಸಾವಿರ ರೂಪಾಯಿಗಳನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಸಲ್ಲಿಸಬೇಕು. ಪೊಲೀಸ್ ಅಧಿಕಾರಿಯನ್ನು ಯಾವುದೇ ಸಮರ್ಥನೆ ನೀಡದೆ ಪ್ರತಿವಾದಿಯಾಗಿಸಿರುವುದಕ್ಕೆ ದಂಡ ವಿಧಿಸಲಾಗಿದ್ದು, ಅವರನ್ನು ವ್ಯಕ್ತಿಗತವಾಗಿ ಪ್ರತಿವಾದಿಯನ್ನಾಗಿಸಲಾಗಿದೆ. ರಾಜಕೀಯ ಪ್ರೇರಿತ ಎಂದು ಅರ್ಜಿಯಲ್ಲಿ ಹೇಳಿರುವುದನ್ನು ಬಿಟ್ಟರೆ ಪೊಲೀಸ್ ಅಧಿಕಾರಿಯನ್ನು ಏಕೆ ಪ್ರತಿವಾದಿಯನ್ನಾಗಿಸಲಾಗಿದೆ ಎಂಬುದನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿಲ್ಲ” ಎಂದು ನ್ಯಾಯಾಲಯ ಹೇಳಿದೆ.
“ಅರ್ಜಿದಾರರು ಕಾನೂನಿಗೆ ಬದ್ಧರಾಗಿದ್ದರೆ ಉಳಿದವರು ಕಾನೂನಿಗೆ ಬದ್ಧರಾಗಿರುತ್ತಾರೆ. ಪೋಸ್ಟ್ಮನ್ ಮತ್ತು ಪ್ರಧಾನ ಮಂತ್ರಿ ಇಬ್ಬರೂ ಕ್ರಿಮಿನಲ್ ಕಾನೂನಿನ ಅಡಿ ಸಮಾನರು” ಎಂದು ಮೌಖಿಕವಾಗಿ ನ್ಯಾಯಾಲಯ ಹೇಳಿದೆ. ಬೆಂಗಳೂರಿನಲ್ಲಿ ಬೆಳಗಿನ ಸಮಯದಲ್ಲಿ ಸಾರ್ವಜನಿಕವಾಗಿ ರಸ್ತೆಗಳಿಯುವುದು ಸಾರ್ವಜನಿಕರಿಗೆ ಭಾರಿ ಸಮಸ್ಯೆ ಉಂಟು ಮಾಡುತ್ತದೆ. ನಗರದ ಬದುಕು ಹೆಚ್ಚು ಅಸಹನೀಯ. ಜನಪ್ರತಿನಿಧಿಗಳಾದ ಮಾತ್ರಕ್ಕೆ ಅವರು ಹಾಗೆ ಮಾಡಲಾಗದು. ಅವರು ಕಾನೂನು ಪಾಲಿಸಬೇಕು. ಆನಂತರ ಮತದಾರರು ಕಾನೂನು ಪಾಲಿಸುತ್ತಾರೆ” ಎಂದು ಪೀಠ ಹೇಳಿದೆ.
ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಅಡಿ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಸಂಬಂಧ 42ನೇ ಎಸಿಎಂಎಂ ನ್ಯಾಯಾಲಯ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಜಾರಿ ಮಾಡಿದ್ದ ಜಾಮೀನು ರಹಿತ ಬಂಧನ ವಾರೆಂಟ್ (NBW) ಹಾಗೂ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ಕೋರಿ ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಎಂ.ಬಿ.ಪಾಟೀಲ ಹಾಗೂಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ ಅವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ