ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಸವಲತ್ತು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೆ, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಮಾಜಿ ದೇವದಾಸಿಯರಿಗೆ ಮಾಸಾಶನ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ.
ರಾಜ್ಯದ ಕಾರ್ಯಕರ್ತೆಯರಿಗೆ ಅಂಗನವಾಡಿ ಚಟವಟಿಕೆಗಳ ಸುಗಮಕ್ಕಾಗಿ 90 ಕೋಟಿ ವೆಚ್ಚದಲ್ಲಿ 75,938 ಸ್ಟಾರ್ಟ್ಫೋನ್ ಗಳನ್ನು ಅಂಗನವಾಡಿ ಕಾರ್ಯಕರ್ತರಿಗೆ ನೀಡಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ, ಸುಮಾರು 20 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ತರಬೇತಿ ಆಯೋಜಿಸಲು 10 ಕೋಟಿ ರೂ. ಬಜೆಟ್ನಲ್ಲಿ ಮೀಸಲಿಡಲಾಗಿದೆ. ಮತ್ತು ರಾಜ್ಯದಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ 1000 ಅಂಗನವಾಡಿಗೆ ಸ್ವಂತ ಕಟ್ಟಡ ನಿರ್ಮಿಸಲು 200 ಕೋಟಿ ರೂ.ಅನುದಾನ ಘೋಷಿಸಲಾಗಿದೆ.
ಮಾಜಿ ದೇವದಾಸಿಯರಿಗೆ ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೆ, ಲಿಂಗತ್ವ ಅಲ್ಪಸಂಖ್ಯಾತರ ಬದುಕು ಉತ್ತಮ ಪಡಿಸಲು ಮೈತ್ರಿ ಯೋಜನೆಯಡಿ ನೀಡಲಾಗುತ್ತಿರುವ ಮಾಸಾಶನ 800ರೂ.ಗಳಿಂದ 1200ರೂ.ಗಳಿಗೆ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. ಹಾಗೂ ವಸತಿ ರಹಿತ ದೇವದಾಸಿಯರಿಗೆ ರಾಜೀವ್ ಗಾಂಧಿ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆ ಪ್ರಸ್ತಾಪಿಸಲಾಗಿದೆ.
ಸೆರೆಬ್ರಲಿ ಪಾಲ್ಸಿ, ಸ್ನಾಯುವಿನ ಸಂಕೋಚನ, ಪಾರ್ಕಿಸನ್, ಮಲ್ಟಿಪಲ್, ಸ್ಕೇಲೊರೊಸಿಸ್ ಕಾಯಿಲೆಯಿಂದ ಬಳಲುತ್ತಿರುವವರ ಆರೈಕೆಗೆ ಪ್ರತಿ ತಿಂಗಳು 1000ರ ಪ್ರೋತ್ಸಾಹ ಧನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು ಕ್ಯಾಟ್ರಾಕ್ಟ್ ಶಸ್ತ್ರ ಚಿಕಿತ್ಸೆ ಶಿಬಿರ ಆಯೋಜನೆ ಮಾಡಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗೆ 86,423 ಕೋಟಿ ಮೀಸಲು ಇಡಲಾಗಿದೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ 54,617 ಕೋಟಿ ಮೀಸಲಿರಿಸಲಾಗಿದೆ.
ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುತ್ತದೆ. ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುತ್ತದೆ.
ನಿಮ್ಮ ಕಾಮೆಂಟ್ ಬರೆಯಿರಿ