ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಪ್ರಕಣದ ಮುಕ್ತಾಯ ವರದಿ(ಬಿ ರಿಪೋರ್ಟ್)ಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಹಾಗೂ ಪ್ರಕರಣವನ್ನು ಮರುತನಿಖೆ ನಡೆಸಿ 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ನ್ಯಾಯಾಲಯ ಸೂಚನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ವಿವೇಕ ಹೋಟೆಲ್ಸ್ನ ವ್ಯವಸ್ಥಾಪಕ ನಿರ್ದೇಶಕ ಎಲ್. ವಿವೇಕಾನಂದ ಅಲಿಯಾಸ್ ಕಿಂಗ್ಸ್ ಕೋರ್ಟ್ ವಿವೇಕ ಅವರನ್ನು ಲಂಚ ಪಡೆದು ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್ನ (ಬಿಟಿಸಿಎಲ್) ಸ್ಟ್ಯುವರ್ಡ್ ಆಗಿ ನಾಮನಿರ್ದೇಶನ ಮಾಡಿದ್ದಾರೆ ಎಂಬ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ಅಂತಿಮ ವರದಿಗೆ ಆಕ್ಷೇಪಿಸಿ, ದೂರುದಾರ ಬಿಜೆಪಿ ಮುಖಂಡ ಬೆಂಗಳೂರಿನ ಎನ್. ಆರ್. ರಮೇಶ ಅವರು ಸಲ್ಲಿಸಿದ್ದ ಪ್ರತಿಭಟನಾ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಪುರಸ್ಕರಿಸಿದ್ದಾರೆ. ತನಿಖಾಧಿಕಾರಿ ಸಲ್ಲಿಸಿರುವ ಮುಕ್ತಾಯ ವರದಿ ತಿರಸ್ಕರಿಸಲಾಗಿದೆ.
ಕಾನೂನಿನ ಅನ್ವಯ ತನಿಖಾಧಿಕಾರಿಯು ಹೆಚ್ಚಿನ ತನಿಖೆ ನಡೆಸಿ ಹೊಸದಾಗಿ ಆರು ತಿಂಗಳ ಒಳಗಾಗಿ ತನಿಖೆ ನಡೆಸಿ, ಅಂತಿಮ ವರದಿ ಸಲ್ಲಿಸಬೇಕು” ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ
“ಸಿದ್ದರಾಮಯ್ಯ ಅವರು ವಿವೇಕಾನಂದ ಅವರಿಂದ ಮನೆ ನಿರ್ಮಿಸಲು ನಿವೇಶನ ಖರೀದಿಸಲು 1.30 ಕೋಟಿ ರೂಪಾಯಿ ಪಡೆದ ಬಳಿಕ ವಿವೇಕಾನಂದ ಅವರನ್ನು ಬಿಟಿಸಿಎಲ್ ಸ್ಟ್ಯುವರ್ಡ್ ಆಗಿ ನಾಮನಿರ್ದೇಶನ ಮಾಡಲಾಗಿದೆ. ಇಲ್ಲಿ ಭ್ರಷ್ಟಾಚಾರ ನಡೆದಿದೆಯೇ ಎಂಬುದನ್ನು ಸರಿಯಾಗಿ ಪರಿಶೀಲಿಸದೆ ತನಿಖಾ ಸಂಸ್ಥೆ ಅಂತಿಮ ವರದಿ ಸಲ್ಲಿಸಿದೆ. ಇದು ಕಾನೂನಿನ ದೃಷ್ಟಿಯಲ್ಲಿ ಸರಿಯಲ್ಲ. ಪ್ರಾಥಮಿಕ ತನಿಖೆ ಆಧರಿಸಿ ಮುಕ್ತಾಯ ವರದಿಯನ್ನು ತನಿಖಾಧಿಕಾರಿ ಸಲ್ಲಿಸಿದ್ದಾರೆ” ಎಂದು ನ್ಯಾಯಾಲಯ ಹೇಳಿದೆ.
ವರದಿ ಪ್ರಕಾರ, “ಪ್ರಕರಣದಲ್ಲಿ ವಿಸ್ತೃತ ವಿಚಾರ ಪರಿಗಣಿಸದೆಯೇ ಮುಕ್ತಾಯ ವರದಿ ಸಲ್ಲಿಸಿದೆ. ತನಿಖಾ ಸಂಸ್ಥೆ ಎಲ್ಲಾ ಕೋನಗಳಿಂದ ತನಿಖೆ ನಡೆಸಬೇಕು. ಅಕ್ರಮವಾಗಿ ಹಣ ಸ್ವೀಕರಿಸಿದ ಆರೋಪ ಮಾಡಿರುವಾಗ ಅದರಲ್ಲಿ ದುರುದ್ದೇಶ ಇದೆಯೇ, ಜನಪ್ರತಿನಿಧಿಗಳಿಗೆ ಇರುವ ನೀತಿ ಸಂಹಿತೆ ಉಲ್ಲಂಘಿಸಲಾಗಿದೆಯೇ ಎಂಬುದನ್ನು ತನಿಖಾ ಸಂಸ್ಥೆ ಪರಿಶೀಲಿಸಬೇಕು. ಇದನ್ನು ಪರಿಗಣಿಸದೇ ಸಲ್ಲಿಸುವ ವರದಿಯನ್ನು ಪೂರ್ಣ ವರದಿ ಎನ್ನಲಾಗದು. ನ್ಯಾಯಾಲಯವು ಪ್ರಕರಣದ ಅರ್ಹತೆ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ಆದರೆ, ಮುಕ್ತಾಯ ವರದಿಯನ್ನು ಆತುರದಲ್ಲಿ ಸಲ್ಲಿಸಿರುವುದರ ಬಗ್ಗೆ ನ್ಯಾಯಾಲಯ ಕಳವಳ ಹೊಂದಿದೆ” ಎಂದು ಆದೇಶದಲ್ಲಿ ಹೇಳಲಾಗಿದೆ.
ವಿವೇಕಾನಂದ ಅವರನ್ನು ಬಿಟಿಸಿಎಲ್ನ ಸ್ಟ್ಯುವರ್ಡ್ ಮತ್ತು ನಿರ್ವಹಣಾ ಸಂಸ್ಥೆಯ ಸದಸ್ಯರನ್ನಾಗಿ ಸಿದ್ದರಾಮಯ್ಯ ಅವರ ಆಶೀರ್ವಾದದಿಂದ ನೇಮಕ ಮಾಡಲಾಗಿದೆ. ಹಣಕಾಸಿನ ಲಾಭ ಮಾಡಿಕೊಂಡು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ವಿವೇಕಾನಂದ ಅವರಿಗೆ ಲಾಭದಾಯಕ ಹುದ್ದೆ ಕಲ್ಪಿಸಿದ್ದಾರೆ. ಇದಕ್ಕೆ ನಿರ್ಬಂಧವಿದ್ದು, ಸಿದ್ದರಾಮಯ್ಯ ಅವರ ವಿರುದ್ಧ ಭ್ರಷ್ಟಾಚಾರ ನಿಷೇಧ ಕಾಯಿದೆ ಸೆಕ್ಷನ್ಗಳಾದ 7, 8, 13(1)(ಡಿ) ಮತ್ತು 13(2) ಮತ್ತು ಅಕ್ರಮ ಹಣ ವರ್ಗಾವಣೆ ಕಾಯಿದೆ ಸೆಕ್ಷನ್ 3 ಮತ್ತು 4ರ ಅಡಿ ಸಂಜ್ಞೇ ಪರಿಗಣಿಸುವಂತೆ ಕೋರಿ ರಮೇಶ ಅವರು ಖಾಸಗಿ ದೂರು ದಾಖಲಿಸಿದ್ದರು. ಅರ್ಜಿದಾರರ ಪರವಾಗಿ ವಕೀಲ ಮೋಹನ್ ಎಸ್. ರೆಡ್ಡಿ ವಾದಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ