ನವದೆಹಲಿ: ಆದಾಯ ತೆರಿಗೆ (ಐಟಿ) ಇಲಾಖೆಯು ₹105 ಕೋಟಿಗಿಂತಲೂ ಹೆಚ್ಚಿನ ತೆರಿಗೆ ಪಾವತಿಸುವಂತೆ ತನಗೆ ನೀಡಿದ್ದ ನೋಟಿಸಿಗೆ ತಡೆ ನೀಡಲು ನಿರಾಕರಿಸಿದ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಆದೇಶ ಪ್ರಶ್ನಿಸಿ ಕಾಂಗ್ರೆಸ್ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ ಮತ್ತು ನ್ಯಾಯಮೂರ್ತಿ ತುಷಾರ ರಾವ್ ಗೆಡೇಲಾ ಅವರಿದ್ದ ಪೀಠದ ಮುಂದೆ ವಕೀಲ ವಿವೇಕ ತಂಖಾ ಪ್ರಕರಣ ಪ್ರಸ್ತಾಪಿಸಿದ್ದರು. ಪ್ರಕರಣ ಆಲಿಸಲು ನ್ಯಾಯಾಲಯ ಸೋಮವಾರ ಸಮ್ಮತಿಸಿದೆ.
2018-19ರ ತೆರಿಗೆ ನಿರ್ಧರಣಾ ಸಾಲಿನಲ್ಲಿ ಬಾಕಿ ಇರುವ ₹105 ಕೋಟಿ ರೂ.ಗಳಿಗೂ ಹೆಚ್ಚಿನ ತೆರಿಗೆ ಪಾವತಿಸುವಂತೆ ಐಟಿ ಇಲಾಖೆ ಈ ಹಿಂದೆ ಕಾಂಗ್ರೆಸ್ಗೆ ನೋಟಿಸ್ ನೀಡಿತ್ತು.
ಕಾಂಗ್ರೆಸ್ಗೆ ಆದಾಯ ತೆರಿಗೆ ವಿನಾಯಿತಿ ನಿರಾಕರಿಸುವ ವಿಚಾರದಲ್ಲಿ ಐ ಟಿ ಅಧಿಕಾರಿಗಳು ಯಾವುದೇ ತಪ್ಪು ಮಾಡಿಲ್ಲ ಎಂದು ಮಾರ್ಚ್ 8ರಂದು ಹೊರಡಿಸಿದ ಆದೇಶದಲ್ಲಿ ಐಟಿಎಟಿ ತೀರ್ಪು ನೀಡಿತು. ಅಧಿಕಾರಿಗಳ ವಿನಾಯಿತಿ ನಿರಾಕರಣೆ ವಿರುದ್ಧ ಬಲವಾದ ಪ್ರಾಥಮಿಕ ವಾದ ಮಂಡಿಸಲು ಕಾಂಗ್ರೆಸ್ ವಿಫಲವಾಗಿದೆ ಎಂದು ಅದು ಹೇಳಿತ್ತು.
ತನಗೆ ಯಾವುದೇ ಆದಾಯ ಬರುತ್ತಿಲ್ಲ ಎಂದು ಕಾಂಗ್ರೆಸ್ ಘೋಷಿಸಿದ್ದನ್ನು ಜುಲೈ 2021ರಲ್ಲಿ ನಿರಾಕರಿಸಿದ್ದ ಐಟಿ ಅಧಿಕಾರಿಗಳು ₹105 ಕೋಟಿಗಿಂತಲೂ ಅಧಿಕ ತೆರಿಗೆ ಸಂದಾಯ ಮಾಡುವಂತೆ ಸೂಚಿಸಿದ್ದರು.
ರಾಜಕೀಯ ಪಕ್ಷಗಳಿಗೆ ತೆರಿಗೆಯಿಂದ ವಿನಾಯಿತಿ ಪಡೆಯಲು ಅವಕಾಶ ಕಲ್ಪಿಸುವ ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 13ಎಯನ್ನು ಈ ನೋಟಿಸ್ ಉಲ್ಲಂಘಿಸುತ್ತದೆ ಎಂದು ಆರೋಪಿಸಲಾಗಿತ್ತು. ಐಟಿ ಇಲಾಖೆ ತನ್ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಎಂದು ಕಾಂಗ್ರೆಸ್ ಆರೋಪದ ನಂತರ 2024 ರ ಫೆಬ್ರವರಿಯಲ್ಲಿ ವಿವಾದ ಮುನ್ನೆಲೆಗೆ ಬಂತು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಕ್ಕೆ ಸಂಕಷ್ಟ ತಂದೊಡ್ಡುವ ಉದ್ದೇಶ ತೆರಿಗೆ ಇಲಾಖೆಯು ಆರಂಭಿಸಿರುವ ವಸೂಲಾತಿ ಪ್ರಕ್ರಿಯೆಯ ಹಿಂದೆ ಇದೆ ಎಂದು ಐಟಿಎಟಿ ಎದುರು ಕಾಂಗ್ರೆಸ್ ಆರೋಪಿಸಿತ್ತು.
ಆದರೆ ತಾನು ಕಾಂಗ್ರೆಸ್ ಖಾತೆಗಳಿಗೆ ಸಂಬಂಧಿಸಿದ ವಹಿವಾಟು ಸ್ಥಗಿತಗೊಳಿಸಲು ಬ್ಯಾಂಕುಗಳಿಗೆ ಯಾವುದೇ ಆದೇಶ ಅಥವಾ ನಿರ್ದೇಶನ ನೀಡಿಲ್ಲ. ಬದಲಿಗೆ ತೆರಿಗೆ ಬಾಕಿ ಪಾವತಿಸುವಂತೆ ಮಾತ್ರ ಸೂಚಿಸಲಾಗಿದೆ ಎಂದು ಐಟಿಎಟಿಗೆ ಹಣಕಾಸು ಸಚಿವಾಲಯದ ಕಂದಾಯ ಇಲಾಖೆ ತಿಳಿಸಿತ್ತು.
ಕಾಂಗ್ರೆಸ್ ನಿಗದಿತ ಗಡುವಿನೊಳಗೆ ಆದಾಯ ತೆರಿಗೆ ರಿಟರ್ನ್ ಸಲ್ಲಿಸಬೇಕಿತ್ತು ಎಂದು ಐಟಿಎಟಿಯ ತೀರ್ಪಿನಲ್ಲಿ ತಿಳಿಸಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ