ನವದೆಹಲಿ: ಖಾಲಿ ಇರುವ ಇಬ್ಬರು ಚುನಾವಣಾ ಆಯುಕ್ತರುಗಳನ್ನು ಕೇಂದ್ರ ಸರ್ಕಾರ ನೇಮಿಸುವುದಕ್ಕೆ ತಡೆ ನೀಡಬೇಕು ಎಂದು ಕೋರಿ ಕಾಂಗ್ರೆಸ್ ಮುಖಂಡರೊಬ್ಬರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಡಾ.ಜಯಾ ಠಾಕೂರ್ ಅವರು 2023 ರ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರಕ್ಕೆ ಚುನಾವಣಾ ಆಯುಕ್ತರನ್ನು ನೇಮಿಸದಂತೆ ಸೂಚಿಸಬೇಕು ಎಂದು ಆಗ್ರಹಿಸಿ ಅರ್ಜಿಯಲ್ಲಿ ಕೋರಿದ್ದಾರೆ. ಎರಡು ದಿನಗಳ ಹಿಂದೆ ಚುನಾವಣಾ ಆಯುಕ್ತ ಅರುಣ ಗೋಯೆಲ್ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಎರಡು ದಿನಗಳ ಹಿಂದೆ ಅರುಣ ಗೋಯೆಲ್ ಚುನಾವಣಾ ಆಯುಕ್ತರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮತ್ತು ಕಳೆದ ತಿಂಗಳು ಅನುಪಚಂದ್ರ ಪಾಂಡೆ ಅವರು ನಿವೃತ್ತರಾಗಿದ್ದಾರೆ. ಹೀಗಾಗಿ ಈಗ ಎರಡು ಚುನಾವಣಾ ಆಯುಕ್ತರ ಹುದ್ದೆಗಳು ಖಾಲಿ ಇವೆ. ಮೂವರು ಸದಸ್ಯರ ಭಾರತೀಯ ಚುನಾವಣಾ ಆಯೋಗದಲ್ಲಿ ಈಗ ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ಮಾತ್ರ ಉಳಿದಿದ್ದಾರೆ. ಹೀಗಾಗಿ ಪ್ರಧಾನಿ ಅಧ್ಯಕ್ಷತೆಯ ತ್ರಿಸದಸ್ಯ ಸಮಿತಿಯ ಶಿಫರಸಿನ ಮೇರೆಗೆ ರಾಷ್ಟ್ರಪತಿಗಳು ಚುನಾವಣಾ ಆಯುಕ್ತರನ್ನು ನೇಮಿಸುತ್ತಾರೆ. ಕೇಂದ್ರ ಕಾನೂನು ಸಚಿವ ಮತ್ತು ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ಅಧೀರ್ ರಂಜನ್ ಚೌಧುರಿ ಅವರನ್ನು ಒಳಗೊಂಡಿರುವ ಉನ್ನತಾಧಿಕಾರ ಸಮಿತಿಯು ಮಾರ್ಚ್ 15 ರಂದು ಸಭೆ ಸೇರುವ ನಿರೀಕ್ಷೆಯಿದೆ.
ಈ ಬೆಳವಣಿಗೆ ಬೆನ್ನಲ್ಲೇ ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯ ಸಲಹೆಯ ಮೇರೆಗೆ ಚುನಾವಣಾ ಆಯುಕ್ತರನ್ನು ನೇಮಿಸಬೇಕು ಎಂದು ತೀರ್ಪು ನೀಡಿದ ಸಂವಿಧಾನ ಪೀಠದ 2023 ರ ಆದೇಶವನ್ನು ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. 2023ರ ನಿರ್ಧಾರಕ್ಕೆ ಅನುಗುಣವಾಗಿ ಚುನಾವಣಾ ಆಯೋಗಗಳ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಅವರು ಕೋರಿದ್ದಾರೆ.
ಪ್ರಮುಖವಾಗಿ, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಕೈಬಿಟ್ಟಿದ್ದಕ್ಕಾಗಿ ವಿವಾದಕ್ಕೆ ಕಾರಣವಾದ ಸಿಇಸಿ (CEC) ಕಾಯಿದೆ, 2023 ರ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆ ಕುರಿತು ಸುಪ್ರೀಂ ಕೋರ್ಟ್ ಇನ್ನೂ ನಿರ್ಧರಿಸಿಲ್ಲ.
ಚುನಾವಣಾ ಆಯುಕ್ತರ ನೇಮಕಾತಿಯನ್ನು ನಿಯಂತ್ರಿಸುವ ಹೊಸ ಕಾನೂನಿಗೆ (ಸಿಇಸಿ ಕಾಯ್ದೆ) ತಡೆ ನೀಡಲು ಸುಪ್ರೀಂ ಕೋರ್ಟ್ ಈ ಹಿಂದೆ ನಿರಾಕರಿಸಿತ್ತು. ಸದ್ಯಕ್ಕೆ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಂಕರ ದತ್ತಾ ಅವರ ಪೀಠ ಹೇಳಿದೆ.
ಸಿಇಸಿ ಕಾಯಿದೆಯು ಪ್ರಧಾನ ಮಂತ್ರಿ (ಪಿಎಂ), ಕೇಂದ್ರ ಸಂಪುಟ ಸಚಿವರು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಆಯ್ಕೆ ಸಮಿತಿಯಿಂದ ಸಿಇಸಿ ಮತ್ತು ಚುನಾವಣಾ ಆಯುಕ್ತರ ಹುದ್ದೆಗಳಿಗೆ ನೇಮಕಾತಿ ಮಾಡಲು ಅನುಮತಿಸುತ್ತದೆ.
ಹೊಸ ಆಯ್ಕೆ ಸಮಿತಿಯಲ್ಲಿ ಆಡಳಿತಾರೂಢ ಸರ್ಕಾರ ಪ್ರಾಬಲ್ಯ ಸಾಧಿಸುತ್ತದೆ ಎಂಬ ಕಳವಳದ ಮೇಲೆ ಜಯಾ ಠಾಕೂರ್ ಅವರು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ