ಬೆಂಗಳೂರು: ತೀವ್ರ ಬರಗಾಲದಿಂದ ತತ್ತರಿಸಿರುವ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಪದೇಪದೇ ಮನವಿ ಮಾಡಿದರೂ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದರೂ ಕೂಡ ಕೇಂದ್ರ ಸರ್ಕಾರ ಇನ್ನೂ ಬರ ಪರಿಹಾರ ಘೋಷಣೆ ಮಾಡಿಲ್ಲ. ಐದು ತಿಂಗಳ ಕಾಲ ಕಾದರೂ ಬಿಡುಗಡೆ ಮಾಡದ ಕಾರಣ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್ನಲ್ಲಿ ಆರ್ಟಿಕಲ್ 32ರ ಅಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದೇವೆ. ಸುಪ್ರೀಂ ಕೋರ್ಟ್ ವಾರದ ರಜೆ ಮುಗಿದ ಬಳಿಕ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಬರಗಾಲದ ಕುರಿತು ಕಳೆದ ವರ್ಷ ಸೆಪ್ಟೆಂಬರ್ ಮತ್ತು ಅಕ್ಟೋಬರ್ ಅವಧಿಯಲ್ಲಿ ರಾಜ್ಯ ಸರ್ಕಾರ ಅಧ್ಯಯನ ನಡೆಸಿದ ನಂತರ ರಾಜ್ಯದಲ್ಲಿ 223 ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದೆ. ಇದರಲ್ಲಿ 196 ತಾಲೂಕುಗಳು ತೀವ್ರ ಬರಗಾಲದಿಂದ ಕೂಡಿವೆ. ಬರಗಾಲದಿಂದ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ನಷ್ಟ ಆಗಿದೆ. ಅಧ್ಯಯನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರಕ್ಕೆ 2023ರ ಸೆಪ್ಟೆಂಬರ್ 23, ನವೆಂಬರ್ 15 ಮತ್ತು ಅಕ್ಟೋಬರ್ 20 ಎಂದು ಮೂರು ಬಾರಿ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
ಮೊದಲ ಮನವಿ ಕೊಟ್ಟ ಬಳಿಕ, ಒಂದು ವಾರದೊಳಗೆ ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಿ ಅಧ್ಯಯನ ನಡೆಸಬೇಕು. ಆದರೆ ಕೇಂದ್ರದ ತಂಡ ಅಕ್ಟೋಬರ್ ತಿಂಗಳಲ್ಲಿ ಬಂದಿತ್ತು. ಅಕ್ಟೋಬರ್ 9 ರಿಂದ 14ರ ವರೆಗೆ 10 ಅಧಿಕಾರಿಗಳು ಮೂರು ತಂಡಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ತಂಡವು ಕೇಂದ್ರ ಸರ್ಕಾರಕ್ಕೆ ವರದಿ ನೀಡಿದೆ. ವರದಿ ನೀಡಿ ಒಂದು ತಿಂಗಳಲ್ಲಿ ಆಯಾ ರಾಜ್ಯಗಳಿಗೆ ಪರಿಹಾರ ಕೊಡಬೇಕು. ಆದರೆ ಈವರೆಗೂ ಯಾವುದೇ ಪರಿಹಾರ ಬಿಡುಗಡೆ ಮಾಡಿಲ್ಲ. ಬರ ಪರಿಹಾರವನ್ನು ಕೇಂದ್ರ ಸರ್ಕಾರ ಶೇ.75ರಷ್ಟು ಮತ್ತು ರಾಜ್ಯ ಸರ್ಕಾರ ಶೇ.25ರಷ್ಟು ನೀಡುತ್ತವೆ ಎಂದು ಸಿಎಂ ತಿಳಿಸಿದರು.
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ. ರೈತರಿಗೆ ಕಷ್ಟ ಇದೆ ಎಂದು ನಾವು ತಾತ್ಕಾಲಿಕವಾಗಿ 2,000 ರೂ. ಕೊಟ್ಟಿದ್ದೇವೆ. 33 ಲಕ್ಷದ 44 ಸಾವಿರ ರೈತರಿಗೆ 650 ಕೋಟಿ ಬಿಡುಗಡೆ ಮಾಡಿದ್ದೇವೆ. ಬರಗಾಲ ನಿಭಾಯಿಸುವ ಕೆಲಸವನ್ನ ನಾವು ಯಶಸ್ವಿಯಾಗಿ ಮಾಡಿದ್ದೇವೆ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ