ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಚುನಾವಣಾ ಪ್ರಚಾರದಲ್ಲಿ ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ವ್ಯಾಪ್ತಿಯ ಲೋಕಸಭಾ ಮತಕ್ಷೇತ್ರಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 28 ಮತ್ತು 29 ಎರಡೂ ದಿನಗಳ ಕಾಲ ಕರ್ನಾಟಕದಲ್ಲಿ ಮತಯಾಚಿಸಲಿದ್ದಾರೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅವರು ಬೆಳಗಾವಿಯಲ್ಲೇ ತಂಗುವ ಸಾಧ್ಯತೆ ಇದೆ.
ಏಪ್ರಿಲ್ 28 ರಂದು ದಾವಣಗೆರೆ, ಉತ್ತರ ಕನ್ನಡ, ಬೆಳಗಾವಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ. ಅಂದು ಪ್ರಧಾನಿ ಮೋದಿ ಬೆಳಗಾವಿಯಲ್ಲೇ ವಾಸ್ತವ್ಯ ಹೂಡುವ ಸಾಧ್ಯತೆಯಿದೆ. ಇದಕ್ಕಾಗಿ. ವಿಟಿಯು ಗೆಸ್ಟ್ ಹೌಸ್, ಐಟಿಸಿ ವೆಲ್ಕಮ್, ಮೇರಿಯಟ್, ಯುಕೆ-27 ಸ್ಥಳಗಳ ಪರಿಶೀಲನೆ ನಡೆದಿದೆ. ಎಸ್ಪಿಜಿ ಪರಿಶೀಲನೆ ಬಳಿಕ ವಾಸ್ತವ್ಯದ ಸ್ಥಳ ಯಾವುದೆಂದು ನಿಗದಿಯಾಗಲಿದೆ. ಅವರು ಏಪ್ರಿಲ್ 29 ರಂದು ವಿಜಯಪುರ, ಕೊಪ್ಪಳ ಹಾಗೂ ಕಲಬುರಗಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ. ಪ್ರಧಾನಿ ಮೋದಿ ಸಮಾವೇಶಕ್ಕೆ ಈಗಾಗಲೇ ವೇದಿಕೆಗಳು ಸಜ್ಜಾಗುತ್ತಿವೆ.
ಉತ್ತರ ಕರ್ನಾಟಕದ ಭಾಗ ಬಿಜೆಪಿಯ ಭದ್ರಕೋಟೆಯಾಗಿ ಗುರುತಿಸಿಕೊಂಡಿದೆ. ಹೀಗಾಗಿ ಇದನ್ನು ಉಳಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸಮಾವೇಶಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿಜೆಪಿ ಗೆಲವು ಸಾಧಿಸಿತ್ತು. ಇದನ್ನು ಹೀಗೆ ಮುಂದುವರಿಸಲು ಉತ್ತರ ಕರ್ನಾಟಕ ಭಾಗಕ್ಕೆ ನರೇಂದ್ರ ಮೋದಿ ಬರಲಿದ್ದಾರೆ. ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಭಾಗದಲ್ಲಿ ಬಿಜೆಪಿಗೆ ಇನ್ನಷ್ಟು ಬಲ ತುಂಬಲು ಪ್ರಧಾನಿ ಮೋದಿ ಭರ್ಜರಿ ಪ್ರಚಾರಕ್ಕೆ ಮುಂದಾಗಿದ್ದಾರೆ.
ದಾವಣಗೆರೆಯಿಂದ ಆರಂಭವಾಗುವ ಮೋದಿ ಪ್ರಚಾರ ಸಭೆಗಳು ಬೆಳಗಾವಿ, ಕಲಬುರ್ಗಿ ಸೇರಿದಂತೆ ಆರು ಜಿಲ್ಲೆಗಳಲ್ಲಿ ನಡೆಯಲಿದೆ. ಎರಡು ಲೋಕಸಭೆ ಕ್ಷೇತ್ರಕ್ಕೆ ಒಂದರಂತೆ 6 ಬೃಹತ್ ಸಮಾವೇಶ ನಡೆಸಲಿದ್ದಾರೆ. ಬೃಹತ್ ಸಮಾವೇಶಗಳ ಮೂಲಕ ಕಿತ್ತೂರು ಕರ್ನಾಟಕದ ಆರು ಕ್ಷೇತ್ರಗಳನ್ನು ಮರಳಿ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ಎರಡು ದಿನಗಳ ಕಾಲ 12 ಕ್ಷೇತ್ರಗಳನ್ನು ಗುರಿ ಮಾಡಿ ಭರ್ಜರಿ ಮತಬೇಟೆ ನಡೆಸಲಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ