ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

ಹುಬ್ಬಳ್ಳಿ: ವಿಧಾನ ಪರಿಷತ್‌ ಬಿಜೆಪಿ‌ ಸದಸ್ಯ ಕೆ.ಪಿ.ನಂಜುಂಡಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿನ‌ ಸಭಾಪತಿಯವರ ಗೃಹ ಕಚೇರಿಗೆ ಆಗಮಿಸಿದ ಕೆ.ಪಿ.ನಂಜುಂಡಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ನೀಡಿದ್ದಾರೆ.
ಅವರು ಬುಧವಾರ (ಏಪ್ರಿಲ್‌  24) ಬೆಳಿಗ್ಗೆ 10 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಲಿದ್ದಾರೆ.
ರಾಜೀನಾಮೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಪಕ್ಷಕ್ಕೆ​ ಸೇರುತ್ತಿದ್ದೇನೆ. ನಿರ್ಲಕ್ಷ್ಯಕ್ಕೊಳಗಾದ‌ ಕಾಯಕ ಸಮಾಜದ ಏಳಿಗೆಗೆ ರಾಜಕೀಯಕ್ಕೆ ಬಂದೆ. ಆದರೆ, ಬಿಜೆಪಿ ಮುಖಂಡರು ಒಂದು ದಿನವೂ ಕಾಯಕ ಸಮಾಜದ ಬಗ್ಗೆ ಮಾತಾಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಮುದಾಯಕ್ಕೆ ಯಾವುದೇ ರೀತಿ ಸ್ಪಂದಿಸಿಲ್ಲ. ನನ್ನನ್ನು ಎಂಎಲ್‌ಸಿ ಮಾಡಿ ಸುಮ್ಮನಾದರು, ಬಿಜೆಪಿಯಲ್ಲಿ ನನ್ನನ್ನು ನಿರ್ಲಕ್ಷ್ಯ ಮಾಡಿದರು, ನನ್ನನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲಿಲ್ಲ ನನಗೆ ಸಚಿವನಾಗುವ ಅರ್ಹತೆ ಇದೆ. ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಇಂದೇ ರಾಜೀನಾಮೆ ನೀಡುವೆ ಎಂದು ತಿಳಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement