ಹುಕ್ಕಾ, ಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು:ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲಾ ಬಗೆಯ ಹುಕ್ಕಾ ದಾಸ್ತಾನು, ಮಾರಾಟ, ಸೇವನೆ ಮತ್ತು ಜಾಹೀರಾತು ನಿಷೇಧಿಸಿ ರಾಜ್ಯ ಸರ್ಕಾರ ರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಹಾಗೂ ಹುಕ್ಕಾ ಮತ್ತು ಹುಕ್ಕಾ ಬಾರ್‌ ನಿಷೇಧ ಪ್ರಶ್ನಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿದೆ.
ಬೆಂಗಳೂರಿನ ಆರ್‌ ಭರತ್‌ ಹಾಗೂ ಮತ್ತಿತರರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು ಸೋಮವಾರ ಆದೇಶ ಪ್ರಕಟಿಸಿದೆ.
ಮಾರ್ಚ್‌ 11ರಂದು ನ್ಯಾಯಾಲಯವು ಆದೇಶ ಕಾಯ್ದಿರಿಸಿತ್ತು.
ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಸುಮನ್‌ ಅವರು “ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ, ವಹಿವಾಟು, ಉತ್ಪಾದನೆ, ಪೂರೈಕೆ ಮತ್ತು ಹಂಚಿಕೆ ಕಾಯಿದೆ 2003 (ಸಿಒಟಿಪಿಎ) ಕೇಂದ್ರ ಸರ್ಕಾರದ ಕಾನೂನಾಗಿದ್ದು, ಇಲ್ಲಿ ಹುಕ್ಕಾ ನಿಷೇಧಕ್ಕೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ. ಆಹಾರ ಪೂರೈಸದ ನಿರ್ದಿಷ್ಟ ಸ್ಥಳಗಳಲ್ಲಿ ಹುಕ್ಕಾ ಸೇದಲು ಅವಕಾಶವಿದೆ” ಎಂದು ವಾದಿಸಿದ್ದರು.

ಇದಕ್ಕೆ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ ಶೆಟ್ಟಿ ಅವರು “ಸಿಒಟಿಪಿಎ ಸಿಗರೇಟುಗಳಿಗೆ ಸಂಬಂಧಿಸಿದ್ದು, ಹುಕ್ಕಾಗೂ ಇದಕ್ಕೂ ಸಂಬಂಧವಿಲ್ಲ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಹುಕ್ಕಾಗೆ ನಿಷೇಧ ವಿಧಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ. ಸಂವಿಧಾನದ 47ನೇ ವಿಧಿಯ ಅನ್ವಯ ಸಾರ್ವಜನಿಕ ಆರೋಗ್ಯ ಸುಧಾರಿಸಲು ರಾಜ್ಯ ಸರ್ಕಾರ ಇದರ ಬಗ್ಗೆ ಕ್ರಮಕೈಗೊಳ್ಳುವ ಹೊಣೆಗಾರಿಕೆ ಹೊಂದಿದೆ” ವಾದಿಸಿದ್ದರು

ಪ್ರಮುಖ ಸುದ್ದಿ :-   ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ : ತಾಯಿ-ಮಗು ಸಾವು

ಇದಕ್ಕೆ ಅರ್ಜಿದಾರರ ಪರ ಮತ್ತೊಬ್ಬ ವಕೀಲರು “ಹುಕ್ಕಾ ನಿಷೇಧವು ಸಂವಿಧಾನದ 14ನೇ ವಿಧಿಯಡಿ ಸಮಾನತೆಯ ಹಕ್ಕಿನ ಉಲ್ಲಂಘನೆಯಾಗಿದೆ. ಇದು ಸಿಗರೇಟು ಉತ್ಪಾದಕರ ಪರವಾಗಿದೆ. ಹುಕ್ಕಾ ಅಮಲು ಪಾನೀಯ ಅಥವಾ ಮಾದಕ ವಸ್ತುವಲ್ಲ. ಹುಕ್ಕಾ ನಿಷೇಧದಿಂದ ಸಂವಿಧಾನದ 14ನೇ ವಿಧಿ ಉಲ್ಲಂಘನೆಯಾಗಿದೆ. ಒಮ್ಮೆ ಗ್ರಾಹಕರ ಹುಕ್ಕಾ ನಿಷೇಧಿಸಿದರೆ ಅವರು ಸಿಗರೇಟು ಸೇದಲಿದ್ದಾರೆ… ಹುಕ್ಕಾದಲ್ಲಿ ಕನಿಷ್ಠ ಹರ್ಬಲ್‌ ಸಾರ ಸೇದುತ್ತಾರೆ.. ಆದರೆ, ಯಾವುದೇ ತೆರನಾದ ಹರ್ಬಲ್‌ ಸಿಗರೇಟು ಇಲ್ಲ (ತಂಬಾಕನ್ನೇ ಸೇದಬೇಕು)” ಎಂದಿದ್ದರು.
ಇದಕ್ಕೆ ಧ್ವನಿಗೂಡಿಸಿದ ಹಿರಿಯ ವಕೀಲ ಕಿರಣ ಜವಳಿ ಅವರು “ತಂಬಾಕು ಉತ್ಪನ್ನ ಬಳಸದ ಹರ್ಬಲ್‌ ಹುಕ್ಕಾ ಸೇದಲು ನಿಷೇಧ ಹೇರಬಾರದು” ಎಂದು ಹೇಳಿದ್ದರು.

ರಾಜ್ಯ ಸರ್ಕಾರದ ನಿಷೇಧ ಆದೇಶ ಬೆಂಬಲಿಸಿದ್ದ ಇನ್ನೊಬ್ಬ ವಕೀಲರು “ಹುಕ್ಕಾ ಸೇವೆಯು ಅಕ್ರಮ ವಹಿವಾಟು. ತಂಬಾಕು ಉತ್ಪಾದಕರು ಸರ್ಕಾರಕ್ಕೆ ತೆರಿಗೆ ಪಾವತಿಸುತ್ತಾರೆ. ಆದರೆ, ಹುಕ್ಕಾ ವಹಿವಾಟು ನಡೆಸುವವರು ಯಾವುದೇ ತೆರಿಗೆ ಪಾವತಿಸುವುದಿಲ್ಲ. ಹತ್ತು ವರ್ಷಗಳಿಗೂ ಹೆಚ್ಚು ಕಾಲದಿಂದ ಹುಕ್ಕಾ ವಹಿವಾಟು ನಡೆಯುತ್ತಿದ್ದು, ಒಂದು ಹುಕ್ಕಾಗೆ ದಿನಕ್ಕೆ ₹250 ಆದರೆ, ದಿನಕ್ಕೆ 1000 ಕೋಟಿ ವ್ಯವಹಾರ ನಡೆಯಲಿದೆ ಎಂದಿದ್ದರು.
ಎಜಿ ಶಶಿಕಿರಣ ಶೆಟ್ಟಿ ಅವರು “ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಹುಕ್ಕಾ ನಿಷೇಧಿಸಲಾಗಿದೆ. ಹುಕ್ಕಾ ನಿಷೇಧ ಕುರಿತಾದ ಅಧಿಸೂಚನೆಯ ಜೊತೆಗೆ ಮಸೂದೆಯನ್ನೂ ಸದನದಲ್ಲಿ ಪಾಸು ಮಾಡಲಾಗಿದೆ. ಹುಕ್ಕಾ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಹಾಗೆಂದು ನಾವು ಸಿಗರೇಟು ಬಳಕೆಗೆ ಆದ್ಯತೆ ನೀಡುತ್ತಿಲ್ಲ” ಎಂದು ಹೇಳಿದ್ದರು.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

ಹುಕ್ಕಾ, ತಂಬಾಕು ಅಥವಾ ನಿಕೋಟಿನ್‌ ಒಳಗೊಂಡ ನಿಕೋಟಿನ್‌ ರಹಿತ, ತಂಬಾಕು ರಹಿತ, ಸ್ವಾದಭರಿತ, ಸ್ವಾದರಹಿತ ಹುಕ್ಕಾ ಹಾಗೂ ಇದೇ ಮಾದರಿಯ ಇನ್ನಿತರ ಹೆಸರುಗಳಿಂದ ಕರೆಯಲ್ಪಡುವ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಪ್ರಚೋದನೆ, ಸಂಗ್ರಹಣೆ, ವ್ಯಾಪಾರವನ್ನು ರಾಜ್ಯದಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿದವರ ವಿರುದ್ಧ ಸಿಒಟಿಪಿಎ, ಮಕ್ಕಳ ಆರೈಕೆ ಮತ್ತು ರಕ್ಷಣೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆಗಳು, ಭಾರತೀಯ ದಂಡ ಸಂಹಿತೆ ಹಾಗೂ ಅಗ್ನಿ ನಿಯಂತ್ರಣ ಹಾಗೂ ಅಗ್ನಿಸುರಕ್ಷತೆ ಕಾಯಿದೆ ಪ್ರಕಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಫೆಬ್ರವರಿ 7ರಂದು ಅಧಿಸೂಚನೆ ಹೊರಡಿಸಿತ್ತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement