ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

ಬೆಂಗಳೂರು : ಲೈಂಗಿಕ ಹಗರಣಕ್ಕೆ ಪೂರಕವಾಗಿ ವರದಿಯಾಗಿರುವ ಮಹಿಳೆ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್‌ ಮುಖಂಡ ಹಾಗೂ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ನಿರಾಕರಿಸಿದೆ.
ಎಚ್‌.ಡಿ. ರೇವಣ್ಣ ಸಲ್ಲಿಸಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು ವಜಾ ಮಾಡಿದ್ದಾರೆ. ಹೀಗಾಗಿ, ಎಚ್‌ ಡಿ ರೇವಣ್ಣ ಬಂಧನ ಸಾಧ್ಯತೆ ದಟ್ಟವಾಗಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ವರದಿ ಪ್ರಕಾರ, ಮಧ್ಯಂತರ ಜಾಮೀನು ಅರ್ಜಿಯನ್ನು ವಜಾ ಮಾಡಲಾಗಿದ್ದು, ಮೂಲ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಮೇ 6ಕ್ಕೆ ಮುಂದೂಡಿದೆ.

ಇದಕ್ಕೂ ಮುನ್ನ, ಅರ್ಜಿದಾರ ರೇವಣ್ಣ ಪರವಾಗಿ ವಾದಿಸಿದ್ದ ಹಿರಿಯ ವಕೀಲ ಮೂರ್ತಿ ಡಿ. ನಾಯ್ಕ ಅವರು “ಕೆ ಆರ್‌ ಪೇಟೆಯ ಠಾಣೆಯಲ್ಲಿ ಸಂತ್ರಸ್ತೆಯ ಪುತ್ರ ದಾಖಲಿಸಿರುವ ಅಪಹರಣ ದೂರಿನಲ್ಲಿ ಎಚ್‌.ಡಿ. ರೇವಣ್ಣ ಅವರ ಬಗ್ಗೆ ಗುರುತರವಾದ ಆರೋಪಗಳಿಲ್ಲ. ಹಾಗೂ ಪ್ರಜ್ವಲ್‌ ಅವರ ಮೇಲಿನ ಆರೋಪಗಳನ್ನು ರೇವಣ್ಣ ಅವರಿಗೆ ಅನ್ವಯಿಸಲಾಗುವುದಿಲ್ಲ. ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರೆ ತಕ್ಷಣ ಎಸ್‌ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುತ್ತಾರೆ” ಎಂದರು.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

“ರೇವಣ್ಣ ಅವರನ್ನುಸಿಲುಕಿಸುವ ಯತ್ನ ನಡೆಸಲಾಗುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಪಡಿಸಬೇಕು ಎಂದು ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದಾರೆ. ಇಡೀ ಪ್ರಕರಣದಲ್ಲಿ ರಾಜಕೀಯವಿದೆ” ಎಂದು ಅವರು ವಾದಿಸಿದರು.

ಎಸ್‌ಐಟಿ ಪರವಾಗಿ ವಾದಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್‌. ಜಗದೀಶ ಅವರು “ಸಂತ್ರಸ್ತೆಯನ್ನು ರಕ್ಷಿಸಲು ಎಸ್‌ಐಟಿ ಅಧಿಕಾರಿಗಳು ಅವಿರತವಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಪತ್ತೆಯಾಗಿ ಹೇಳಿಕೆ ನೀಡಿದರೆ ಇಡೀ ಪ್ರಕರಣದ ನಿಜಾಂಶ ಬೆಳಕಿಗೆ ಬರಲಿದೆ. ರೇವಣ್ಣ ಪ್ರಭಾವಿ ರಾಜಕಾರಣಿಯಾಗಿದ್ದಾರೆ. ಹೀಗಾಗಿ, ಅರ್ಜಿದಾರರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬಾರದು” ಎಂದು ಬಲವಾಗಿ ವಿರೋಧಿಸಿದರು.
ಸುಮಾರು ಒಂದೂವರೆ ತಾಸು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಆದೇಶ ಕಾಯ್ದಿರಿಸಿ, ಸುಮಾರು ಎರಡು ತಾಸುಗಳ ಬಳಿಕ ರೇವಣ್ಣ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement