ನವದೆಹಲಿ: ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಹಾಯಕ ವಿಭವಕುಮಾರ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಜಾಮೀನು ನಿರಾಕರಿಸಿದೆ.
ದೆಹಲಿಯ ತೀಸ್ ಹಜಾರಿ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಸುಶೀಲ ಅನುಜ ತ್ಯಾಗಿ ಅವರು ಈ ಆದೇಶ ನೀಡಿದ್ದಾರೆ.
ದೆಹಲಿ ಪೊಲೀಸರು ಮೇ 18ರಂದು ವಿಭವಕುಮಾರ ಅವರನ್ನು ಬಂಧಿಸಿದ್ದರು. ನಂತರ ಅವರನ್ನು ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿತ್ತು. ನಂತರ ಮೇ 24ರಂದು ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.
ಕೇಜ್ರಿವಾಲ್ ಅವರ ನಿವಾಸದಲ್ಲಿ ವಿಭವಕುಮಾರ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಈ ಹಿಂದೆ ಮಾಲೀವಾಲ್ ಆರೋಪಿಸಿದ್ದರು. ಸ್ವಾತಿ ಮಲಿವಾಲ್ ಅವರ ಎದೆ, ಹೊಟ್ಟೆ ಮತ್ತು ಸೊಂಟದ ಭಾಗಕ್ಕೆ ಕುಮಾರ್ ಕಾಲಿನಿಂದ ಒದ್ದಿದ್ದಾರೆ ಎಂದು ಎಫ್ಐಆರ್ ದಾಖಲಾಗಿತ್ತು.
ಆಹ್ವಾನವಿಲ್ಲದೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮಲಿವಾಲ್ ಅಕ್ರಮ ಪ್ರವೇಶ ಮಾಡಿದ್ದಾರೆ. ಅದೇ ದಿನ ಅವರು ಏಕೆ ಪೊಲೀಸ್ ದೂರು ಏಕೆ ನೀಡಿಲ್ಲ? ದೆಹಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಗಾಗದೆ ಏಮ್ಸ್ಗೆ ತೆರಳಿದ್ದೇಕೆ? ಎಲ್ಲವೂ ಪೂರ್ವಯೋಜಿತವಾಗಿ ನಡೆದಿದೆ ಎಂದು ವಿಭವಕುಮಾರ ಪರ ವಕೀಲರು ಮುಂದೆ ವಾದಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ