
ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಮಾಜಿ ಸಚಿವ ಸಿ.ಟಿ.ರವಿ, ಹಾಲಿ ಸದಸ್ಯ ಎನ್. ರವಿಕುಮಾರ್ ಹಾಗೂ ಮಾಜಿ ಶಾಸಕ ಎಂ.ಜಿ. ಮುಳೆ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.
ವಿಧಾನಸಭೆಯಿಂದ ವಿಧಾನಪರಿಷತ್ನ 11 ಸ್ಥಾನಗಳಿಗೆ ಜೂನ್ 13ರಂದು ಚುನಾವಣೆ ನಡೆಯಲಿದ್ದು, ಶಾಸಕರ ಸಂಖ್ಯೆಗೆ ಅನುಗುಣವಾಗಿ ಸಂಖ್ಯಾಬಲದ ಬಿಜೆಪಿಗೆ ಸಿಗಲಿರುವ ಮೂರು ಸ್ಥಾನಗಳಿಗೆ ಬಿಜೆಪಿ ಹೈಕಮಾಂಡ್ ಭಾನುವಾರ ಹೆಸರು ಪ್ರಕಟಿಸಿದೆ. ನಾಮಪತ್ರ ಸಲ್ಲಿಕೆಗೆ ಸೋಮವಾರ ಕಡೆಯ ದಿನವಾಗಿದೆ.

ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಹಾಲಿ ವಿಧಾನಪರಿಷತ್ ವಿಪಕ್ಷದ ಸಚೇತಕ ಎನ್.ರವಿಕುಮಾರ್ ಹಾಗೂ ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮತ್ತು ಮರಾಠಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಂ.ಜಿ. ಮುಳೆ ಅವರಿಗೆ ಟಿಕೆಟ್ ನೀಡಿದೆ. ಕಳೆದ ಉಪಚುನಾವಣೆಯಲ್ಲಿ ಜೆಡಿಎಸ್ ನಿಂದಬಿಜೆಪಿ ಸೇರಿದ್ದ ಮುಳೆಗೆ ಪಕ್ಷವು ಟಿಕೆಟ್ ನೀಡಿದೆ.
ಒಕ್ಕಲಿಗ ಸಮುದಾಯಕ್ಕೆ 1 (ಸಿ.ಟಿ. ರವಿ) ಸ್ಥಾನ ಹಾಗೂ ಒಬಿಸಿ ವರ್ಗಕ್ಕೆ 2 ಸ್ಥಾನ (ರವಿಕುಮಾರ್-ಗಂಗಾಮತಸ್ಥ ಮತ್ತು ಎಂ.ಜಿ.ಮುಳೆ ಮರಾಠ ಸಮುದಾಯ) ನೀಡಲಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಲೋಕಸಭೆಗೆ ಸ್ಪರ್ಧೆ ಮಾಡಿದ್ದು, ಅವರಿಂದ ತೆರವಾಗುವ ಪರಿಷತ್ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಪ್ರಬಲ ನಾಯಕರ ಆಯ್ಕೆಯಾಗಿ ಸಿ.ಟಿ. ರವಿಗೆ ಅವಕಾಶ ನೀಡಲಾಗಿದೆ ಎನ್ನುವ ಮಾತುಗಳು ಕೇಳಿಬಂದಿವೆ.


ನಿಮ್ಮ ಕಾಮೆಂಟ್ ಬರೆಯಿರಿ