ಸಾಗರ : ಖ್ಯಾತ ಇತಿಹಾಸ ಸಂಶೋಧಕ ಡಾ. ಕೆಳದಿ ಗುಂಡಾ ಜೋಯಿಸ ಅವರು ಭಾನುವಾರ (ಜೂನ್ 2) ಸಂಜೆ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಇತಿಹಾಸ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ ಅವರು ವಿಶೇಷವಾಗಿ ಕೆಳದಿ ಅರಸರ ಬಗ್ಗೆ ಅಧ್ಯಯನ ಮಾಡಿದ್ದರು. ಅಲ್ಲದೆ, ಕೆಳದಿ ಮ್ಯೂಸಿಯಂ ಪ್ರಾರಂಭಿಸಿ, ಅರಸರ ಕಾಲದ ಗ್ರಂಥಗಳು ಹಾಗೂ ವಸ್ತುಗಳನ್ನು ಸಂಗ್ರಹಿಸಿದ್ದರು. ಅವರ ಅಂತ್ಯಕ್ರಿಯೆ ಜೂನ್ 3 ಸೋಮವಾರ ಬೆಳಗ್ಗೆ 10ಕ್ಕೆ ಸಾಗರದಲ್ಲಿ ನಡೆಯಲಿದೆ
ಕೆಳದಿ ಗುಂಡಾ ಜೋಯಿಸ ಎಂದೇ ಹೆಸರಾಗಿರುವ ಇವರು ಹಳೆಯ ಕಾಲದ ಮೋಡಿಲಿಪಿಯನ್ನು, ತಾಳೆಗರಿ ಗ್ರಂಥಗಳನ್ನು ಓದಬಲ್ಲ ಕೆಲವೇ ಕೆಲವು ತಜ್ಞರಲ್ಲಿ ಒಬ್ಬರು.ಗುಂಡಾ ಜೋಯಿಸರು ೧೯೩೧ ಸೆಪ್ಟಂಬರ ೨೭ರಂದು ಕೆಳದಿಯಲ್ಲಿ ಜನಿಸಿದರು. ಇವರ ತಾಯಿ ಮೂಕಾಂಬಿಕಾ, ತಂದೆ ನಂಜುಂಡ ಜೋಯಿಸರು. ಾವರ ನಿಜನಾಮಧೇಯ ಲಕ್ಷ್ಮೀನಾರಾಯಣ ಜೋಯಿಸ. ಇವರಿಗಿಂತ ದೊಡ್ಡ ಎರಡು ಮಕ್ಕಳು ಮೃತಪಟ್ಟಿದ್ದರಿಂದ ಇವರಾದರೂ ಕಲ್ಲುಗುಂಡಿನಂತೆ ಬದುಕಲಿ ಎಂದು ಇವರ ಅಜ್ಜಿ ಇವರಿಗೆ ಗುಂಡಾ ಎಂದು ಕರೆದಳು. ಮುಂದೆ ಅವರು ಗುಂಡಾ ಜೋಯಿಸ ಎಂದೇ ಖ್ಯಾತರಾದರು.
ಜೋಯಿಸರ ಪ್ರಾಥಮಿಕ ಶಿಕ್ಷಣ ಹುರಳಿ, ಕೆಳದಿ, ಸೊರಬ ಹಾಗೂ ಸಾಗರದಲ್ಲಿ ನಡೆಯಿತು. ಪ್ರೌಢಶಾಲಾ ವಿದ್ಯಾಭ್ಯಾಸವು ಬೆಂಗಳೂರಿನ ಕೋಟೆ ಪ್ರೌಢಶಾಲೆಯಲ್ಲಿ ನಡೆಯಿತು. ಎಸ್.ಎಸ್.ಎಲ್.ಸಿ. ನಂತರ ಅವರು ವಿದ್ಯಾಭ್ಯಾಸ ಮೊಟಕುಗೊಳಿಸಿ ಉದ್ಯೋಗ ಅರಸಬೇಕಾಯಿತು. ಆದರೆ ಅವರಲ್ಲಿ ಕಲಿಯಬೇಕೆಂಬ ತವಕ ಕಡಿಮೆಯಾಗಿರಲಿಲ್ಲ. ಅವರು ತಮ್ಮ ೫೦ನೆಯ ವಯಸ್ಸಿನಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಅಂಚೆ ತೆರಪಿನ ಶಿಕ್ಷಣದ ಮೂಲಕ ಎಂ.ಎ. (ಇತಿಹಾಸ) ಸ್ನಾತಕೋತ್ತರ ಪದವಿ ಪಡೆದರು. ಅಲ್ಲದೆ ಬೆಂಗಳೂರಿನ ಕರಣಿಕರ ವೇದಶಾಲೆಯಲ್ಲಿ ವೇದಾಭ್ಯಾಸ ಮಾಡಿದರು. ಕನ್ನಡ ಪಂಡಿತ, ಆಗಮ ವೇದ ವಿದ್ವಾನ್, ಕನ್ನಡ ರತ್ನ, ಹಿಂದಿಪ್ರಬೋಧ ಪರೀಕ್ಷೆಗಳಲ್ಲಿಯೂ ತೇರ್ಗಡೆಯಾದರು.
ಗುಂಡಾ ಜೋಯಿಸರು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಗ್ರಾಮಲೆಕ್ಕಿಗರಾಗಿ, ಪೋಸ್ಟ್ ಮಾಸ್ತರ ಆಗಿ, ವಿದ್ಯುತ್ ಇಲಾಖೆಯಲ್ಲಿ, ಆಕಾಶವಾಣಿಯಲ್ಲಿ, ವಯಸ್ಕರ ಶಿಕ್ಷಣ ಸಮಿತಿಯಲ್ಲಿ , ಕನ್ನಡ ಸಂಸ್ಕೃತಿ ಪ್ರಸಾರದ ಉಪನ್ಯಾಸಕರಾಗಿ, ಶಿವಮೊಗ್ಗದ ಸರ್ಕಾರಿ ವಸ್ತು ಸಂಗ್ರಹಾಲಯದ ಸರ್ವೇಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಗೋವಾ ಪರ್ತಗಾಳಿ ಮಠದಲ್ಲಿ ಸಂಶೋಧನೆ ನಡೆಯಿಸಲು ರಾಜ್ಯದಿಂದ ನಿಯುಕ್ತರಾಗಿದ್ದರು. ತಮಿಳುನಾಡಿಗೆ ಸರ್ಕಾರದ ಸಾಂಸ್ಕೃತಿಕ ನಿಯೋಗಿಯಾಗಿ, ರಾಜ್ಯ ಪತ್ರಾಗಾರ ಇಲಾಖೆಯಲ್ಲಿ ಉಪನ್ಯಾಸಕರಾಗಿ, ರಾಜ್ಯದ ಚಾರಿತ್ರಿಕ ಸರ್ವೇಕ್ಷಣ ಸಮಿತಿಯ ಸದಸ್ಯರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಪರೀಕ್ಷಕರಾಗಿ, ಕೆಳದಿ ದೇವಾಲಯದ ಉಚ್ಚಾಧಿಕಾರಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ೧೯೬೨ ರಿಂದ ೧೯೭೫ ರವರೆಗೆ ಮೈಸೂರು ಹಾಗು ಧಾರವಾಡದ ವಿಶ್ವವಿದ್ಯಾಲಯಗಳಲ್ಲಿ ಇತಿಹಾಸದ ಪ್ರಾಧ್ಯಾಪಕರಾಗಿದ್ದರು, ೧೯೮೦ ರಿಂದ ೧೯೮೫ ರ ವರೆಗೆ ಕರ್ನಾಟಕ ಇತಿಹಾಸ ದಾಖಲೆ ಸಂಶೋದನಾ ಸಮಿತಿಯ ಸದಸ್ಯರಾಗಿದ್ದರು.
ತಮ್ಮ ೧೭ನೆಯ ವಯಸ್ಸಿನಿಂದಲೇ ಜೋಯಿಸರು ಕೆಳದಿಯ ಇತಿಹಾಸದ ಬಗ್ಗೆ ಸಂಶೋಧನೆ ಮಾಡುತ್ತಾ ಬಂದಿದ್ದರು. ೧೯೬೦ರಲ್ಲಿ ತಮ್ಮ ಮನೆಯಲ್ಲಿಯೇ ಐತಿಹಾಸಿಕ ವಸ್ತು ಸಂಗ್ರಹಾಲಯ ಪ್ರಾರಂಭಿಸಿದರು. ೧೯೭೮ರಲ್ಲಿ ಅದಕ್ಕೆ ವಿಶ್ವಸ್ಥಸಮಿತಿ ರಚಿಸಿದರು. ೧೯೮೯ರ ನಂತರ ಈ ಸಂಗ್ರಹಾಲಯವನ್ನು ಸರ್ಕಾರಕ್ಕೆ ಒಪ್ಪಿಸಿದರು.
ಈ ಸಂಗ್ರಹಾಲಯದಲ್ಲಿ ೨೬೦೦ ತಾಳೆಗರಿ ಗ್ರಂಥಗಳಲ್ಲದೆ ಐತಿಹಾಸಿಕ ಮಹತ್ವದ ಶಾಸನಗಳು ಹಾಗು ಇತರ ವಸ್ತುಗಳಿವೆ. ಕೆಳದಿಯ ಇತಿಹಾಸ ಸಂಗ್ರಹಕ್ಕಾಗಿ ಊರೂರು ಅಲೆದರು. ಲಂಡನ್, ಹಾಗೂ ಇಟಲಿಯಲ್ಲಿರುವ ಗ್ರಂಥಾಲಯ ಹಾಗೂ ವಸ್ತು ಸಂಗ್ರಹಾಲಯಗಳಿಗೆ ಭೇಟಿ ಕೊಟ್ಟರು. ಅನೇಕ ವಿದ್ವಾಂಸರನ್ನು ಸಂಪರ್ಕಿಸಿದರು. ಕೆಳದಿಯ ಇತಿಹಾಸಕ್ಕೆ ಸಂಬಂಧಿಸಿದಂತೆ ಅನೇಕ ಲೇಖನಗಳನ್ನು ಬರೆದಿದ್ದಾರೆ. ಅನೇಕ ಲೇಖಕರಿಗೆ ಸಹಾಯ ಮಾಡಿದ್ದಾರೆ. ಕೆಲವೊಂದು ಗ್ರಂಥಗಳನ್ನು ಸಂಪಾದಿಸಿದ್ದಾರೆ. ಹುಬ್ಬಳ್ಳಿಯ ಮೂರುಸಾವಿರ ಮಠದ ಪ್ರಾಚೀನ ಓಲೆಗರಿ ಹಸ್ತಪ್ರತಿ ಸೂಚಿಯನ್ನು ತಯಾರಿಸಿದ್ದಾರೆ.
ನಿಷ್ಕಳಂಕಿಣಿ ಕೆಳದಿ ವೀರಮ್ಮಾಜಿ, ಇತಿಹಾಸ ವೈಭವ, ಕೆಳದಿಯ ಸಂಕ್ಷಿಪ್ತ ಇತಿಹಾಸ, ಕೆಟಲಾಗ್ ಆಫ್ ಏನ್ಷಿಯಂಟ್ ತಿಗಳಾರಿ ಪಾಮ್ಲೀಫ್, ಇಕ್ಕೇರಿ ಅರಸರು, ಬಿದನೂರಿನ ಕೆಳದಿ ನಾಯಕರು, ಕೆಳದಿಯ ವೆಂಕಣ್ಣಯ್ಯ ಕವಿಯ ಕೀರ್ತನೆಗಳು, ಲಿಂಗಣ್ಣ ಕವಿಯ ಕೆಳದಿ ನೃಪವಿಜಯ, ಕೆಳದಿ ಅರಸರು ಸೇರಿದಂತೆ ೩೦ಕ್ಕೂ ಹೆಚ್ಚು ಇತಿಹಾಸ ಸಂಶೋಧನೆಯ ಕೃತಿಗಳು, ೨೫೦ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು, ಲೇಖನಗಳನ್ನು ಪ್ರಕಟಿಸಿದ್ದಾರೆ. ಇವರ ೧೭ನೆಯ ಶತಮಾನದ ಕವಿ ಲಿಂಗಣ್ಣ ರಚಿಸಿದ ಕೆಳದಿನೃಪ ವಿಜಯಕಾವ್ಯದ ಸರಳ ಗದ್ಯಕೃತಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿದ್ದು, ಮೂರು ಮುದ್ರಣಗಳನ್ನು ಕಂಡಿದೆ. ಹಿಂದಿ ಮತ್ತು ಇಂಗ್ಲಿಷ್ಗೂ ಅನುವಾದಗೊಂಡಿದೆ. ಅನೇಕ ರಾಷ್ಟ್ರೀಯ ಮತ್ತು ೬ ಅಂತಾರಾಷ್ಟ್ರೀಯ ಸೆಮಿನಾರುಗಳಲ್ಲಿ ಭಾಗವಹಿಸಿದ್ದಾರೆ.
ಪ್ರಶಸ್ತಿಗಳು…ಗೌರವಗಳು..
೧೯೯೪ರಲ್ಲಿ ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ.
ಕರ್ನಾಟಕ ರಾಜ್ಯ ಸರ್ಕಾರದಿಂದ ೧೯೯೫ರಲ್ಲಿ ಶ್ರೇಷ್ಠ ಸಂಶೋಧಕ ರಾಜ್ಯ ಪ್ರಶಸ್ತಿ
೨೦೦೪ರಲ್ಲಿ ಹೊನ್ನಾಳಿಯಲ್ಲಿ ನಡೆದ ಕರ್ನಾಟಕ ಇತಿಹಾಸ ಅಕಾಡೆಮಿ ವಾರ್ಷಿಕ ಸಮ್ಮೇಳನದ ಅಧ್ಯಕ್ಷತೆ
ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆಸಿದ ಸಾಗರ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು.
೨೦೧೩ರಲ್ಲಿ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಗೌರವ ಡಾಕ್ಟರೆಟ್ ಪದವಿ
ಸ್ವೀಡನ್ ವಿಶ್ವವಿದ್ಯಾಲಯದಿಂದ ಸ್ಕ್ರಿಪ್ಟ್ ಎಕ್ಸ್ಪರ್ಟ್ ಬಿರುದು ಇವೇ ಮೊದಲಾದ ಪ್ರಶಸ್ತಿ-ಗೌರವಗಳು ಸಂದಿವೆ.
ನಿಮ್ಮ ಕಾಮೆಂಟ್ ಬರೆಯಿರಿ