ಬೆಂಗಳೂರು: ಬೆಂಗಳೂರು ನಗರದಲ್ಲಿ ಭಾನುವಾರ ಸಂಜೆ ಧಾರಾಕಾರವಾಗಿ ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿವೆ. ಭಾನುವಾರ ನಗರದಲ್ಲಿ ಭರ್ಜರಿಯಾಗಿಯೇ ಮಳೆಯಾಗಿದೆ. ಬಿರುಗಾಳಿ ಸಹಿತ ಮಳೆಯಾಗಿದ್ದು, ಹಲವೆಡೆ ಜಲಾವೃತವಾಗಿದೆ.
ಮೆಟ್ರೋ ಹಳಿ ಮೇಲೆ ಮರ ಬಿದ್ದು ಇಂದಿರಾನಗರ ಮಾರ್ಗದಲ್ಲಿ ಸಂಚಾರ ಸ್ಥಗಿತವಾಗಿದೆ. ಬೆಂಗಳೂರಿನ ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್ , ಕಾರ್ಪೊರೇಷನ್, ವಿಧಾನಸೌಧ, ಟೌನ್ ಹಾಲ್, ಶಿವಾಜಿನಗರ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಯಲಹಂಕ, ವೈಟ್ ಫೀಲ್ಡ್ ಸೇರಿದಂತೆ ಹಲವೆಡೆ ಮಳೆ ಜೋರಾಗಿ ಸುರಿದಿದೆ. ರಸ್ತೆಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡಿದ್ದಾರೆ.
ಬಿರುಗಾಳಿಗೆ ಹಲವು ಕಡೆಗಳಲ್ಲಿ ಮರಗಳು ಧರೆಗುರುಳಿದೆ. ಟ್ರಿನಿಟಿ ನಿಲ್ದಾಣದಿಂದ ಎಂ.ಜಿ. ರಸ್ತೆ ಕಡೆ ಹೋಗುವ ಮಾರ್ಗದಲ್ಲಿ ಮೆಟ್ರೋ ರೈಲು ಹಳಿ ಮೇಲೆ ಮರ ಬಿದ್ದಿದೆ. ಹೀಗಾಗಿ ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.
ಬೆಂಗಳೂರಿನಲ್ಲಿ ಜೂ. 1ರಿಂದ 5 ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಅದರಂತೆ ಕಳೆದ ಎರಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಭಾನುವಾರದಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವೆಡೆ ಕೂಡ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ