ಬೆಂಗಳೂರು : ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ಬೆನ್ನಲ್ಲೇ ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ತಾನು ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಚಿವ ಬಿ.ನಾಗೇಂದ್ರ ಅವರು ಹೇಳಿದ್ದಾರೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಭ್ರಷ್ಟಾಚಾರ ಆರೋಪದ ಮೇಲೆ ರಾಜೀನಾಮೆ ಕೊಟ್ಟ ಮೊದಲ ಸಚಿವ ಎಂಬ ಅಪಖ್ಯಾತಿಗೆ ಅವರು ಒಳಗಾಗಿದ್ದಾರೆ.
ಇಂದು, ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಲು ನನಗೆ ಯಾರೂ ಕೂಡ ಒತ್ತಡ ಹಾಕಿಲ್ಲ, ನಾನು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ. ಗುರುವಾರ ಸಂಜೆ 7:30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿದರು.
ಪ್ರಕರಣದ ಸಂಬಂಧ ಎಸ್ಐಟಿ ತನಿಖೆ ನಡೆಯುತ್ತಿದೆ. ವಿಪಕ್ಷಗಳು ಕಳೆದ 10 ದಿನಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಸರು ಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಪಕ್ಷದ ಇಮೇಜಿಗೆ ಧಕ್ಕೆಯಾಗಬಾರದು ಹಾಗೂ ಮುಜುಗರ ಆಗಬಾರದು ಎಂದು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಪಕ್ಷ, ಸರ್ಕಾರಕ್ಕೆ ಮುಜುಗರವಾಗಬಾರದು ಎಂದು ಈ ನಿರ್ಧಾರ ಕೈಗೊಂಡಿದ್ದೇನೆ. ಪ್ರಕರಣದ ಬಗ್ಗೆ ತನಿಖೆ ನಡೆಯಲಿದೆ. ತನಿಖೆಯ ನಂತರ ಎಲ್ಲ ಆರೋಪಗಳಿಂದ ಮುಕ್ತವಾಗಿ ಹೊರಬರಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ