ನವದೆಹಲಿ : ಸತತ ಮೂರನೇ ಅವಧಿಗೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನೆರೆಯ ರಾಷ್ಟ್ರಗಳ ಹಲವು ನಾಯಕರಿಗೆ ಭಾರತ ಆಹ್ವಾನ ನೀಡಿದ್ದು, ಅವರು ಆಗಮಿಸಿದ್ದಾರೆ. ಇಂದು (ಜೂನ್ ೯) ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಸಮಾರಂಭ ನಡೆಯಲಿದೆ.
ಅದೇ ಸಮಾರಂಭದಲ್ಲಿ ಮೋದಿ ಸಚಿವ ಸಂಪುಟದ ಸದಸ್ಯರು ತಮ್ಮ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನವನ್ನು ತೆಗೆದುಕೊಳ್ಳಲಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಹಲವಾರು ನಾಯಕರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ನೀಡಿದ್ದ ಆಹ್ವಾನವನ್ನು ಸ್ವೀಕರಿಸಿದ್ದಾರೆ ಮತ್ತು ಸಮಾರಂಭದಲ್ಲಿ ಭಾಗವಹಿಸಲು ಭಾನುವಾರ ನವದೆಹಲಿಗೆ ಆಗಮಿಸಿದ್ದಾರೆ.
ಸಮಾರಂಭದಲ್ಲಿ ಪಾಲ್ಗೊಳ್ಳುವುದನ್ನು ದೃಢಪಡಿಸಿದ ಮುಖಂಡರು
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ
ಶ್ರೀಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ
ಮಾರಿಷಸ್ ಪ್ರಧಾನಿ ಪ್ರವಿಂದಕುಮಾರ ಜುಗ್ನಾಥ
ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್ ‘ಪ್ರಚಂಡ’
ಮಾಲ್ಡೀವ್ಸ್ ಅಧ್ಯಕ್ಷ ಡಾ ಮೊಹಮ್ಮದ್ ಮುಯಿಝು
ಸೆಶೆಲ್ಸ್ನ ಉಪಾಧ್ಯಕ್ಷ ಅಹ್ಮದ್ ಅಸೀಫ್
ಭೂತಾನ್ ಪ್ರಧಾನಿ ತ್ಶೆರಿಂಗ್ ಟೋಬ್ಗೇ
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವುದರ ಜೊತೆಗೆ ಅದೇ ದಿನ ಸಂಜೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಔತಣ ಕೂಟದಲ್ಲಿ ಈ ನಾಯಕರು ಭಾಗವಹಿಸಲಿದ್ದಾರೆ. ಈ ಸಭೆಯು ಸಾರ್ಕ್ ಸದಸ್ಯ ರಾಷ್ಟ್ರಗಳ ನಡುವಿನ ಪ್ರಾದೇಶಿಕ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಮೂಲಕ ಉನ್ನತ ಮಟ್ಟದ ಸಂವಾದಗಳು ಮತ್ತು ಚರ್ಚೆಗಳನ್ನು ಸುಗಮಗೊಳಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ